ಹಣ, ಆಭರಣಕ್ಕಾಗಿ ಆಪ್ತ ವೃದ್ದೆಯನ್ನು ಕೊಂದ ಪಾಪಿ ಮಹಿಳೆ

Spread the love

ಮೈಸೂರು:‌ ಹಣಕ್ಕಾಗಿ ಮಹಿಳೆ ಏನು‌ಬೇಕಾದರೂ ಮಾಡಬಲ್ಲಳು ಎಂಬುದಕ್ಕೆ ಸಾಂಸ್ಕೃತಿಕ ನಗರಿ ಮೈಸೂರನಲ್ಲಿ ನಡೆದ ಘಟನೆ ಉದಾಹರಣೆಯಾಗಿದೆ.

ಹಣ ಮತ್ತು ಆಭರಣಕ್ಕಾಗಿ ಮಹಿಳೆ ತೀರಾ ಅನ್ಯೋನ್ಯ ವಾಗಿದ್ದ ನೆರೆಮನೆಯ ವೃದ್ಧೆಯನ್ನು ತನ್ನ ಮನೆಗೆ ಕರೆಸಿಕೊಂಡು ಹತ್ಯೆಗೈದ ಹೇಯ ಘಟನೆ ನಡೆದಿದೆ.

ಈ ಘಟನೆ ಮೈಸೂರಿನ ಕೆ ಸಿ ಬಡಾವಣೆಯಲ್ಲಿ ಮಾರ್ಚ್ 5ರಂದು ರಾತ್ರಿ ಸಂಭವಿಸಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಕೆಸಿ ಬಡಾವಣೆ 1ನೇ ಮೇನ್, 7ನೇ ಕ್ರಾಸ್ ನಿವಾಸಿ, ಗಂಗಣ್ಣ ಅವರ ಪತ್ನಿ ಸುಲೋಚನಾ (62) ಕೊಲೆಯಾದ ನತದೃಷ್ಡ ವೃದ್ಧೆ.

ಅದೇ ಬಡಾವಣೆಯ ಶಕುಂತಲಾ (45) ಎಂಬ ಮಹಿಳೆ ಮಾ.5ರಂದು ರಾತ್ರಿ ಸುಮಾರು 7 ಗಂಟೆಯಲ್ಲಿ ದೂರವಾಣಿ ಕರೆ ಮಾಡಿ, ಸುಲೋಚನಾ ಅವರನ್ನು ತಮ್ಮ ಮನೆಗೆ ಕರೆಸಿಕೊಂಡಿದ್ದಾಳೆ.

ನಂತರ ಅವರನ್ನು ಕೊಠಡಿಯಲ್ಲಿ ಕೂಡಿ ಹಾಕಿ, ದಿಂಬಿನಿಂದ ಮುಖ‌ ಅದುಮಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ.

ತದನಂತರ ಸುಲೋಚನಾ ಮೈಮೇಲಿದ್ದ 50 ಗ್ರಾಂ ತೂಕದ ಚಿನ್ನದ ಸರವನ್ನು ತೆಗೆದುಕೊಂಡು ಮೃತದೇಹವನ್ನು ತನ್ನ ಮನೆಯಲ್ಲೇ ಇರಿಸಿ, ಟೆರೆಷಿಯನ್ ಕಾಲೇಜು ಬಳಿ ಹೋಗಿ ಅಲ್ಲಿನ ದುರ್ಗಾ ಜ್ಯುವೆಲ್ಲರಿಯಲ್ಲಿ ಗಿರವಿ ಇಟ್ಟು 1.5 ಲಕ್ಷ ರೂ. ತಂದು ತನ್ನ ಮನೆ ಮಾಲೀಕನಿಗೆ ಬಾಕಿ ಉಳಿಸಿಕೊಂಡಿದ್ದ 36 ಸಾವಿರ ರೂ. ಬಾಡಿಗೆ ಕೊಟ್ಟಿದ್ದಾಳೆ.

ನಂತರ ಶಕುಂತಲಾ, ಸುಲೋಚನಾ ಅವರ ಮಗನಿಗೆ ಕರೆ ಮಾಡಿ ನಿಮ್ಮ ತಾಯಿ ನಮ್ಮ ಮನೆಗೆ ಬಂದರು. ಮಾತನಾಡುತ್ತಿರುವಾಗಲೇ ಬೆವರಿ, ಕುಸಿದು ಬಿದ್ದರು. ಈಗ ನೋಡಿದರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ಹೇಳಿ ಕರೆಸಿಕೊಂಡಿದ್ದಾಳೆ.

ಗಾಬರಿಯಿಂದ ಮಗ ರವಿಚಂದ್ರ ಹಾಗೂ ಅವರ ಸಂಬಂಧಿಕರು ತಕ್ಷಣ ಶಕುಂತಲಾ ಅವರ ಮನೆಗೆ ಬಂದು ಸುಲೋಚನಾ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷಿಸಿದ ವೈದ್ಯರು, ಅವರು ಈಗಾಗಲೇ ಸಾವನ್ನಪ್ಪಿರುವುದಾಗಿ ದೃಢಪಡಿಸಿದ್ದಾರೆ.

ತದನಂತರ ಆಸ್ಪತ್ರೆ ಸಿಬ್ಬಂದಿಗಳು ಈ ವಿಷಯದ ಬಗ್ಗೆ ನಜರ್‌ ಬಾದ್ ಪೊಲೀಸರಿಗೆ ಡೆತ್‌ಮೆಮೋ ಕಳುಹಿಸಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ಮೃತ ದೇಹವನ್ನು ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶವಾಗಾರಕ್ಕೆ ಸಾಗಿಸಿ, ಪ್ರಕರಣ ದಾಖಲಿಸಿಕೊಂಡರು.

ಸುಲೋಚನಾ ಅವರ ಸಾವಿನ ಬಗ್ಗೆ ಅನುಮಾನವಿದ್ದ ಪೊಲೀಸರಿಗೆ ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ಆಕೆಯದ್ದು ಸಹಜ ಸಾವಲ್ಲ. ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ತನಿಖೆ ಆರಂಭಿಸಿದ ನಜರ್‌ಬಾದ್ ಠಾಣೆ ಇನ್‌ ಸ್ಪೆಕ್ಟರ್ ಎಂ.ಮಹದೇವಸ್ವಾಮಿ ಅವರು, ಮರುದಿನವೇ ಬೆಳಗ್ಗೆ ಶಕುಂತಲಾ ಮನೆಗೆ ತೆರಳಿ ಮಹಜರು ನಡೆಸಿದ ಬಳಿಕ ಆಕೆಯನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.

ಆರಂಭದಲ್ಲಿ ಸುಲೋಚನಾ ಅವರು ನನ್ನ ಮನೆಗೆ ಬಂದು ಕುಳಿತುಕೊಂಡು ಮಾತನಾಡುವ ವೇಳೆ ನಿತ್ರಾಣಗೊಂಡರು. ಸ್ವಲ್ಪ ಹೊತ್ತಿನಲ್ಲೇ ಪ್ರಜ್ಞಾಹೀನ ಸ್ಥಿತಿಗೆ ತಲುಪಿದರು. ಆಗ ನಾನು ಅವರಿಗೆ ನೀರು ಕುಡಿಸಿ, ಗಾಳಿ ಬೀಸಿದೆ.ಆದರೆ ಎಚ್ಚರಗೊಳ್ಳದ ಕಾರಣ ಅವರ ಮನೆಯವರಿಗೆ ವಿಷಯ ತಿಳಿಸಿದೆ ಎಂದು ಹೇಳಿದರು.

ನಂತರ ಆಕೆಯನ್ನು ತೀವ್ರ ವಿಚಾರಣೆಗೊಳಪಡಿಸಿದಾಗ ಮನೆ ಬಾಡಿಗೆ ಬಾಕಿ ಇದ್ದು, ಹಣಕಾಸಿನ ಸಮಸ್ಯೆಯಿಂದ ನಾನೇ ಸುಲೋಚನಾ ಅವರನ್ನು ಮನೆಗೆ ಕರೆಸಿಕೊಂಡು, ರೂಮ್ ನಲ್ಲಿ ಕೂಡಿ ಹಾಕಿ, ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಗಿ ಶಕುಂತಲಾ ಒಪ್ಪಿಕೊಂಡಿದ್ದಾಳೆ.

ತಕ್ಷಣ ಆಕೆಯನ್ನು ಬಂಧಿಸಿದ ಪೊಲೀಸರು, ಅಂಗಡಿಯಿಂದ ಶಕುಂತಲಾ ಗಿರಿವಿ ಇಟ್ಟಿದ್ದ ಚಿನ್ನದ ಸರವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಕಾನೂನಿನ ಪ್ರಕ್ರಿಯೆ ಪೂರ್ಣಗೊಳಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ಮಾ.6ರಂದು ಸಂಜೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇನ್ನು ಶಕುಂತಲಾ ತನ್ನ ಪತಿ ಕೆ.ಸಿ.ಬಡಾವಣೆಯ ಹೋಟೆಲ್‌ ವೊಂದರಲ್ಲಿ ಕುಕ್ ಕೆಲಸ ಮಾಡುತ್ತಿದ್ದು, ಇಬ್ಬರೂ ಪುತ್ರಿಯರೊಂದಿಗೆ ಜೀವನ ಸಾಗಿಸುವುದು ಕಷ್ಟವಾಗಿತ್ತು. ಅದಕ್ಕಾಗಿ ನಾನು ವಿಪರೀತ ಸಾಲ ಮಾಡಿಕೊಂಡಿದ್ದೆ, ಬಾಕಿ ಉಳಿಸಿಕೊಂಡಿದ್ದ ಮನೆ ಬಾಡಿಗೆ ಕೊಡುವಂತೆ ಒತ್ತಾಯಿಸುತ್ತಿದ್ದ ಕಾರಣ ನಾನು ನೆರೆ ಮನೆಯವರಾದ ಸುಲೋಚನಾ ಅವರ ಮೈಮೇಲೆ ಆಭರಣ ಇದ್ದುದು ಗೊತ್ತಿದ್ದರಿಂದ ಅವರನ್ನು ಕರೆಸಿಕೊಂಡು ಕೊಲೆ ಮಾಡಿದೆ ಎಂದು ಶಕುಂತಲಾ ಪೊಲೀಸರಿಗೆ ಹೇಳಿಕೆ ನೀಡಿದ್ದಾಳೆ.

ಹಲವು ವರ್ಷಗಳಿಂದ ಸುಲೋಚನಾ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ನನ್ನನ್ನು ಅವರು ಸಂಪೂರ್ಣವಾಗಿ ನಂಬಿದ್ದರು. ಈ ಹಿಂದೆಯೂ ಒಮ್ಮೆ 40 ಗ್ರಾಂ ಚಿನ್ನದ ಬಳೆಗಳನ್ನು ಅವರಿಂದ ಪಡೆದು ಮುತ್ತೂಟ್ ಫೈನಾನ್ಸ್‌ ನಲ್ಲಿ ಗಿರವಿ ಇಟ್ಟು ಹಣ ಪಡೆದಿದ್ದೇನೆ. ಈಗ ಮತ್ತೆ ಕೇಳಿದರೆ ಅವರು ಬೇಜಾರು ಮಾಡಿಕೊಳ್ಳಬಹುದೆಂದು ಭಾವಿಸಿ ಕೊಲೆ ಮಾಡಲು ನಿರ್ಧರಿಸಿದೆ ಎಂದು ತಿಳಿಸಿದ್ದಾಳೆ.

ಇನ್ನಿತರ ಕಷ್ಟದ ಸಮಯದಲ್ಲೂ ಸುಲೋಚನಾ ಅವರು ಹಣ ನೀಡಿದ್ದರು. ನನ್ನನ್ನು ಸಂಪೂರ್ಣವಾಗಿ ನಂಬಿದ್ದ ಸುಲೋಚನಾ ಅವರನ್ನು ಕೊಲೆ ಮಾಡಿಬಿಟ್ಟೆನಲ್ಲ ಎಂಬ ನೋವು ಕಾಡುತ್ತಿದೆ. ಆದರೆ ಅನಿವಾರ್ಯ ಕಾರಣಗಳಿಂದ ಹೀಗೆ ಮಾಡಿಬಿಟ್ಟೆ ಎಂದು ಪೊಲೀಸರ ಬಳಿ ಹೇಳಿಕೆ ನೀಡಿದ್ದಾಳೆ.

ನಾನು ಕೊಲೆ ಮಾಡುವಾಗ ಮನೆಯಲ್ಲಿ ಯಾರೂ ಇರಲಿಲ್ಲ. ಪತಿ ಹೋಟೆಲ್ ಕೆಲಸಕ್ಕೆ ಹೋಗಿದ್ದರು. ನನ್ನಿಬ್ಬರು ಪುತ್ರಿಯರು ನಮ್ಮ ಅಮ್ಮನ ಮನೆಗೆ ಹೋಗಿದ್ದರು. ಅದೇ ಸೂಕ್ತ ಸಮಯ ಎಂದು ನಾನು ಸುಲೋಚನಾ ಅವರನ್ನು ನಯವಾಗಿ ಕರೆಸಿಕೊಂಡು ಹತ್ಯೆಗೈದಿರುವುದಾಗಿಯೂ ಆರೋಪಿ ಶಕುಂತಲಾ ಹೇಳಿಕೊಂಡಿದ್ದಾಳೆ.

ಇತ್ತ ಸುಲೋಚನಾ ಅವರ ಪತಿ ಗಂಗಣ್ಣ ಅವರು ಮೌಂಟೆಡ್ ಪೊಲೀಸ್ ಘಟಕದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದು, ಅನಾರೋಗ್ಯದ ನಿಮಿತ್ತ ಹಾಸಿಗೆ ಹಿಡಿದಿದ್ದಾರೆ ಅವರಿಗೆ ಪ್ರಜ್ಞೆ ಇಲ್ಲ,ಹಾಗಾಗಿ ಪತ್ನಿಯ ಕೊಲೆ ವಿಷಯ ತಿಳಿಸಲಾಗಿಲ್ಲ.

ಪುತ್ರ ರವಿಚಂದ್ರ ಗುಂಡ್ಲುಪೇಟೆಯಲ್ಲಿ ಸರ್ವೆಯರ್ ಆಗಿ ಕೆಲಸ ಮಾಡುತ್ತಿದ್ದಾರೆ.

ಸುಲೋಚನಾಳ ನೀಚ ಕೆಲಸದಿಂದ ಎರಡೂ ಸಂಸಾರಗಳು ಬೀದಿಗೆ ಬಂದಂತಾಗಿಬಿಟ್ಟಿದೆ.ಜತೆಗೆ ಯಾರನ್ನೂ ನಂಬಬಾರದು ಎಂಬ ಮನಸ್ಥಿತಿಗೆ ಜನ ಬರುವಂತಾಗಿದೆ.

ಶಕುಂತಲಾ ಳ ಬಂಧನ ಕಾರ್ಯಾಚರಣೆಯಲ್ಲಿ ನಜರ್‌ಬಾದ್ ಇನ್‌ಸ್ಪೆಕ್ಟರ್ ಮಹದೇವಸ್ವಾಮಿ, ಸಬ್‌ ಇನ್‌ ಸ್ಪೆಕ್ಟರ್‌ ಗಳಾದ ನಟರಾಜು, ಶ್ರೀನಿವಾಸ ಪಾಟೀಲ್, ಸಿಬ್ಬಂದಿಗಳಾದ ಸತೀಶ್, ಪ್ರವೀಣ್, ಗೋಪಾಲ್, ಪ್ರಕಾಶ್, ಸಂಜು, ಲಕ್ಷ್ಮಿ ಕುಂಬಾರ್ ಪಾಲ್ಗೊಂಡಿದ್ದರು.