ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ಎನ್ಐಎ‌ ಹೆಗಲಿಗೆ

ಮಂಗಳೂರು: ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲಾಗಿದೆ.

ಕೇಂದ್ರ ಗೃಹ ಸಚಿವಾಲಯ ಭಾನುವಾರ ಈ ಸಂಬಂಧ ಆದೇಶ ಹೊರಡಿಸಿದೆ. ಸುಮಾರು ಒಂದು ತಿಂಗಳ ಹಿಂದೆ ನಡೆದ ಈ ಕೊಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನತೆಯ ವಾತಾವರಣವನ್ನು ಸೃಷ್ಟಿಸಿತ್ತು. ಪ್ರಕರಣದಲ್ಲಿ ಪ್ರಮುಖ ಆರೋಪಿ ಸೇರಿದಂತೆ ಎಂಟು ಮಂದಿಯನ್ನು ಬಂಧಿಸಲಾಗಿದೆ.

ಮಂಗಳೂರಿನಲ್ಲಿ 42 ವರ್ಷದ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಯಿತು. ಈ ಘಟನೆಯ ನಂತರ, ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿ ಉದ್ವಿಗ್ನವಾಯಿತು. ವಿಶ್ವ ಹಿಂದೂ ಪರಿಷತ್ ಮತ್ತು ಇತರ ಹಿಂದೂ ಸಂಘಟನೆಗಳು ಮೇ 3 ರಂದು ಜಿಲ್ಲಾದ್ಯಂತ ಬಂದ್‌ಗೆ ಕರೆ ನೀಡಿದ್ದವು. ಪ್ರತಿಭಟನೆ ವೇಳೆ ಪ್ರಕರಣವನ್ನು ಎನ್ಐಎಗೆ ವಹಿಸಬೇಕು ಎಂದು ಪಟ್ಟುಹಿಡಿದಿದ್ದವು.

ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ ರಾಜಕೀಯ ಮಟ್ಟದಲ್ಲಿಯೂ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ದಕ್ಷಿಣ ಕನ್ನಡದ ಬಿಜೆಪಿ ಸಂಸದ ಬ್ರಿಜೇಶ್ ಚೌಟ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಪ್ರಕರಣದ ತನಿಖೆಯನ್ನು ಎನ್ ಐ ಎ ಗೆ ವಹಿಸಬೇಕೆಂದು ಒತ್ತಾಯಿಸಿದ್ದರು.

ನಿಷೇಧಿತ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಕಾರ್ಯಕರ್ತರು ಈ ಕೊಲೆಯಲ್ಲಿ ಭಾಗಿಯಾಗಿರಬಹುದು ಎಂದು ಅವರು ತಮ್ಮ ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದರು.
ಈ ಘಟನೆಯನ್ನು ಪ್ರತ್ಯೇಕ ಅಪರಾಧ ಘಟನೆಯಾಗಿ ನೋಡಲಾಗುವುದಿಲ್ಲ ಎಂದು ಚೌಟ ಬರೆದಿದ್ದರು.

ಸುಹಾಸ್ ಶೆಟ್ಟಿ ಕ್ರಿಮಿನಲ್ ದಾಖಲೆಯನ್ನು ಹೊಂದಿದ್ದಾರೆ. ಅವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಮತ್ತು ಮಂಗಳೂರು ನಗರದಲ್ಲಿ ನಾಲ್ಕು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.