ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು ಇದರಿಂದ ವಿಳಂಬವಾಗುತ್ತದೆ ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.
ಜಲಸಂಪನ್ಮೂಲ ಇಲಾಖೆ ಹಾಗೂ ಕೃಷ್ಣ ಜಲ ಭಾಗ್ಯ ನಿಗಮ ಆಯೋಜಿಸಿದ್ದ ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ಅರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.
ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ರೈತ ಹೋರಾಟಗಾರರೊಂದಿಗೆ ಹಿಂದೆಯೇ ಬೆಳಗಾವಿಯಲ್ಲಿ ಸಭೆ ನಡೆಸಲಾಗಿತ್ತು. ಅಲ್ಲಿ ಎಲ್ಲರೂ ಒಪ್ಪಿಗೆ ನೀಡದ ಹಿನ್ನೆಲೆಯಲ್ಲಿ ಸರ್ಕಾರವೂ ಒಪ್ಪಿಕೊಂಡಿದೆ. ಉಪಮುಖ್ಯಮಂತ್ರಿಗಳು ಇತ್ತೀಚೆಗೆ ಈ ಭಾಗದ ರೈತರು, ಶಾಸಕರೊಂದಿಗೆ ಸಭೆ ಕರೆದು ಚರ್ಚಿಸಿದ್ದು , ಒಪ್ಪಿಗೆ ಆದೇಶ ನೀಡುವುದು ಒಂದು ಹಂತಕ್ಕೆ ಬಂದಿದೆ. ಎಲ್ಲರ ಒಪ್ಪಿಗೆಯ ಮೇಲೆ ಒಪ್ಪಂದ ಮಾಡಿಕೊಳ್ಳಲಾಗುವುದು ಮುಂದಿನ ವಾರದೊಳಗೆ ಈ ಬಗ್ಗೆ ಇತ್ಯರ್ಥ ಮಾಡಲಾಗುವುದು ಎಂದು ತಿಳಿಸಿದರು.
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದಲ್ಲಿ 519.6 ಮೀ. ರಿಂದ 524.25 ಮೀಟರ್ ಗೆ ಎತ್ತರಿಸುವುದರಿಂದ 130 ಟಿಎಂಸಿ ನೀರನ್ನು ಸಂಗ್ರಹ ಮಾಡಿಕೊಳ್ಳಬಹುದಾಗಿದ್ದು, ಅದನ್ನು ಬಳಕೆ ಮಾಡಲು ಅನುಕೂಲವಾಗಲಿದೆ. 173 ಟಿಎಂಸಿ ನೀರನ್ನು 6.6 ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಬಹುದಾಗಿದೆ. ಮೂರನೇ ಹಂತದ ಬಗ್ಗೆಯೂ ತೀರ್ಮಾನವಾಗಿದ್ದು, ಗೆಜೆಟ್ ಅಧಿಸೂಚನೆಯಾಗಿಲ್ಲ. ಇದಾದರೆ ನೀರಾವರಿ ಹಾಗೂ ಅಣೆಕಟ್ಟು ಎತ್ತರಿಸುವ ಕೆಲಸಗಳು ಆಗಲು ಅನುಕೂಲವಾಗಲಿದೆ ಎಂದು ಸಿಎಂ ಹೇಳಿದರು.
ಈ ವಿಚಾರಗಳ ಬಗ್ಗೆ ಮೂರು ಬಾರಿ ಸಂಬಂಧಪಟ್ಟ ಕೇಂದ್ರ ಸಚಿವರು ಹಾಗೂ ಪ್ರಧಾನಿಗಳನ್ನು ಭೇಟಿ ಮಾಡಲಾಗಿದೆ. ಉಪಮುಖ್ಯಮಂತ್ರಿ ಐದು ಬಾರಿ ಭೇಟಿಯಾಗಿದ್ದಾರೆ. ನೀರಾವರಿ ನಮ್ಮ ಆದ್ಯತಾ ವಲಯ, ರೈತರಿಗೆ ಅನುಕೂಲವಾಗಬೇಕು. ರೈತರ ಜಮೀನುಗಳಿಗೆ ನೀರು ದೊರೆತು, ರೈತರ ಉತ್ಪನ್ನಗಳು ಹೆಚ್ಚಾಗಬೇಕು ಹಾಗೂ ಅವರ ಬದುಕು ಹಸನಾಗಬೇಕು ಎನ್ನುವುದು ನಮ್ಮ ಉದ್ದೇಶ ಈ ನಿಟ್ಟಿನಲ್ಲಿ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಬಾಗಲಕೋಟೆಯ ಮಲ್ಲಪ್ರಭಾ ನದಿ ಹಾಗೂ ವಿಜಯಪುರ ಜಿಲ್ಲೆಯ ಡೋಣಿ ನದಿ ಪ್ರವಾಹಕ್ಕೀಡಾಗಿ ರೈತರಿಗೆ ಹಾನಿಯುಂಟಾಗುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಕೈಗೊಳ್ಳಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ರೈತರಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಉತ್ತರಿಸಿದರು.