ಬೆಂಗಳೂರು: ಮದ್ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಜನರನ್ನು ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೇ, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಿದೆ ಎಂದು
ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಮಂಗಳವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಸಿಎಂ,ಮದ್ದೂರು ಗಲಭೆ ಗೆ ಸಂಬಂಧಪಟ್ಟಂತೆ ಬಿಜೆಪಿಯವರು ಮದ್ದೂರಿಗೆ ಪಾದಯಾತ್ರೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೆಶವಾಗಿದೆ ಎಂದು ಗರಂ ಆಗಿ ನುಡಿದರು.
ಮೈಸೂರಿನಲ್ಲಿ ಚಾಮುಂಡಿ ಬೆಟ್ಟ ಚಲೋ ಎಂಬ ಕಾರ್ಯಕ್ರಮ ಮಾಡಿದರು. ಆರ್ ಎಸ್ ಎಸ್ ಸಂಘಟನೆಯವರು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರದವರು ಇದರಲ್ಲಿ ಪಾಲ್ಗೊಂಡು, ಶಾಂತಿ ಕದಡುವ ಕೆಲಸವನ್ನು ಮಾಡುತ್ತಾರೆಂಬ ಕಾರಣಕ್ಕೆ ಪೊಲೀಸರು ಚಾಮುಂಡಿ ಬೆಟ್ಟ ಚಲೋ ಗೆ ಅನುಮತಿ ನೀಡಲಿಲ್ಲ. ಮದ್ದೂರು ಬಂದ್ ಮಾಡಲು ಕರೆ ನೀಡಿದ್ದರು. ಗಲಭೆಯಲ್ಲಿ ನಿರತರಾಗಿದ್ದ ಯಾವುದೇ ಪಕ್ಷ, ಸಮುದಾಯವರೇ ಆಗಿದ್ದರೂ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಬಿಜೆಪಿಯವರು ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿರುವುದಾಗಿ ಕೇಂದ್ರ ಗೃಹ ಸಚಿವರಿಗೆ ದೂರು ನೀಡಿದ್ದಾರಲ್ಲ ಎಂಬ ಪ್ರಶ್ನೆಗೆ, ಪ್ರತಿಕ್ರಿಯಿಸಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿದೆ. ಕೇಂದ್ರದಲ್ಲಿ ರೈತ ಚಳವಳಿಯಲ್ಲಿ ಅನೇಕ ರೈತರು ಪ್ರಾಣ ಕಳೆದುಕೊಂಡ ಸಂದರ್ಭದಲ್ಲಿ ಬಿಜೆಪಿಯವರು ಎಲ್ಲಿದ್ದರು, ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಯಾವುದೇ ಬಿಜೆಪಿಯವರು ಧ್ವನಿ ಎತ್ತಲಿಲ್ಲ ಏಕೆ ಎಂದು ಸಿಎಂ ಪ್ರಶ್ನಿಸಿದರಲ್ಲದೆ ಮಣಿಪುರದಲ್ಲಿ ಹಿಂಸಾಚಾರ ನಡೆದರೂ, ಪ್ರಧಾನಿಯವರು ಮಣಿಪುರಕ್ಕೆ ಭೇಟಿ ನೀಡಲೇ ಇಲ್ಲ ಎಂದು ದೂರಿದರು.
ಇವತ್ತು ಆಡಳಿತ ಪಕ್ಷದ ವಿಧಾನಪರಿಷತ್ತಿನ ಸದಸ್ಯರೊಂದಿಗೆ ಸಭೆ ನಡೆಸಲಾಗಿದೆ. .ಈ ಹಿಂದೆ ಜಿಲ್ಲಾ ಶಾಸಕರೊಂದಿಗೆ ಸಭೆ ನಡೆಸಿದಂತೆ, ನಾಳೆ ಬೆಂಗಳೂರು ನಗರದ ಶಾಸಕರೊಂದಿಗೆ ಸಭೆ ನಡೆಸಲಾಗುವುದು. ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಆಯವ್ಯಯದಲ್ಲಿ 8000 ಕೋಟಿ ರೂ ಮೀಸಲಿರಿಸಲಾಗಿದೆ. ಶಾಸಕರಿಗೆ ನೀಡಿದಂತೆ ಎಂಎಲ್ ಸಿ ಗಳಿಗೂ, ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುವಂತೆ ಬೇಡಿಕೆ ಸಲ್ಲಿಸಿದ್ದು, ಮೀಸಲಿರಿಸಿರುವ 8000 ಕೋಟಿ ರೂ.ಗಳಲ್ಲಿ ಎಂಎಲ್ ಸಿ ಗಳಿಗೂ ಅನುದಾನ ನೀಡಲು ಪರಿಶೀಲಿಸುವ ಭರವಸೆ ನೀಡಿದ್ದೇನೆ ಎಂದು ಸಿದ್ದರಾನಯ್ಯ ತಿಳಿಸಿದರು.