ದಸರಾ ಸಂಭ್ರಮದ ಜತೆಗೆ ಸುರಕ್ಷತೆ ಬಗ್ಗೆಯೂ ನಿಗಾವಹಿಸಿ

Spread the love

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಅಳವಡಿಸಿರುವ ವಿದ್ಯುತ್‌ ದೀಪಾಲಂಕಾರಗಳನ್ನು ಕಣ್ತುಂಬಿಕೊಳ್ಳುವ ಜತೆಗೆ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ದಸರಾ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯೂ ಮೈಸೂರಿನ ಪ್ರಮುಖ ರಸ್ತೆಗಳು, ವೃತ್ತಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅತ್ಯಾಕರ್ಷಕ ವಿದ್ಯುತ್‌ ದೀಪಾಲಂಕಾರ ಮಾಡಲಾಗುತ್ತಿದೆ.

ನಗರದ ಸೌಂದರ್ಯ ಹೆಚ್ಚಿಸುವ ಹಾಗೂ ದಸರೆಯ ಸಂಭ್ರಮ, ಸಡಗರವನ್ನು ಇಮ್ಮಡಿಗೊಳಿಸುವ ವಿದ್ಯುತ್‌ ದೀಪಾಲಂಕಾರ ವೀಕ್ಷಿಸಲು ಲಕ್ಷಾಂತರ ಜನರು ಆಗಮಿಸುತ್ತಾರೆ. ಆದ್ದರಿಂದ ದೀಪಾಲಂಕಾರದ ಅಂದ ಕಣ್ತುಂಬಿಕೊಳ್ಳುವ ಸಂದರ್ಭದಲ್ಲಿ ಸುರಕ್ಷತೆಗೂ ಆದ್ಯತೆ ನೀಡುವುದು ಅತ್ಯಂತ ಅವಶ್ಯಕವಾಗಿದೆ ಎಂದು ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್‌ ರಾಜು ಮನವಿ ಮಾಡಿದ್ದಾರೆ.

ವಿದ್ಯುತ್‌ ಗ್ರಾಹಕರು ಹಾಗೂ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡುತ್ತಿರುವ ಸೆಸ್ಕ್‌ ವತಿಯಿಂದಲೂ ಸಾಕಷ್ಟು ಸುರಕ್ಷತಾ ಕ್ರಮ ಕೈಗೊಂಡು ದಸರಾ ದೀಪಾಲಂಕಾರ ಮಾಡಲಾಗಿದೆ. ಆದರೂ ಸುರಕ್ಷತೆಯ ಬಗ್ಗೆ ಹೆಚ್ಚಿನ ನಿಗಾವಹಿಸುವುದು ಸಾರ್ವಜನಿಕರ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.

ಅದಕ್ಕಾಗಿ ಸಾರ್ವಜನಿಕರ ಸುರಕ್ಷತೆ ಕೆಲವು ಸಲಹೆಗಳನ್ನು ನೀಡಲಾಗಿದೆ.
ದೀಪಾಲಂಕಾರದ ಕಂಬಗಳನ್ನು ಮುಟ್ಟದೆ, ಅಂತರ ಕಾಯ್ದುಕೊಳ್ಳಿ,ದೀಪಾಲಂಕಾರದ ಕಂಬಗಳ ಹತ್ತಿರ ನಿಂತು ಫೋಟೋ,ವಿಡಿಯೋ ಶೂಟ್‌ ಮಾಡುವುದನ್ನು ತಪ್ಪಿಸಬೇಕು, ಮಳೆ ಸಂದರ್ಭದಲ್ಲಿ ವಿದ್ಯುತ್ ದೀಪಾಲಂಕಾರದ ಕಂಬಗಳ ಹತ್ತಿರ ಹೋಗದೆ ಎಚ್ಚರವಹಿಸಬೇಕು,ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ದೀಪಾಲಂಕಾರಕ್ಕಾಗಿ ಕಂಬಗಳನ್ನು ಅಳವಡಿಸಿದ್ದು, ಕೆಲವು ಕಡೆಗಳಲ್ಲಿ ದೀಪಾಲಂಕಾರದ ಪ್ರತಿಕೃತಿಗಳನ್ನು ಇರಿಸಲಾಗಿದೆ. ಆದ್ದರಿಂದ ವಾಹನ ಸವಾರರು ಮತ್ತು ಪಾದಚಾರಿಗಳು ಇವುಗಳನ್ನು ಗಮನಿಸಿ ಸುರಕ್ಷಿತವಾಗಿ ಸಂಚರಿಸಬೇಕೆಂದು
ಸೆಸ್ಕ್ ಪರವಾಗಿ ಕೆ.ಎಂ. ಮುನಿಗೋಪಾಲ್‌ ರಾಜು‌ ಕೋರಿದ್ದಾರೆ‌.

ವಿದ್ಯುತ್‌ ಸಂಬಂಧಿತ ದೂರುಗಳಿದ್ದರೆ ಹಾಗೂ ದೀಪಾಲಂಕಾರದಿಂದ ತೊಂದರೆ ಆದಲ್ಲಿ 24×7 ಸಹಾಯವಾಣಿ 1912 ಸಂಪರ್ಕಿಸ‌ಬಹುದೆಂದು ತಿಳಿಸಲಾಗಿದೆ.