ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧ:ಸಿಎಸ್ ಗೆ ಸಿಎಂ ಸೂಚನೆ

Spread the love

ಬಾಗಲಕೋಟೆ: ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಈಗಾಗಲೇ ಮುಖ್ಯ ಕಾರ್ಯ ದರ್ಶಿಗಳಿಗೆ ಈ ಕುರಿತು ಸೂಚಿಸಿದ್ದೇವೆ,ಅವರು ಪರಿಶೀಲಿಸಿ ವರದಿ ನೀಡಲಿದ್ದಾರೆ,ನಂತರ ಮುಂದಿನ ಕ್ರಮ ಎಂದು ಹೇಳಿದರು.

ಸಚಿವ ಪ್ರಿಯಾಂಕ ಖರ್ಗೆಯವರು ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿರ್ಬಂಧಿಸಲು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿ, ಆರ್ ಎಸ್ ಎಸ್ ಸಂಘಟನೆ ತನ್ನ ಚಟುವಟಿಕೆಗಳಿಗೆ ಸರ್ಕಾರಿ ಸ್ಥಳಗಳನ್ನು ಬಳಸಿಕೊಳ್ಳುತ್ತಿದೆ. ತಮಿಳುನಾಡು ರಾಜ್ಯದಲ್ಲಿ ಇದನ್ನು ನಿರ್ಬಂಧಿಸಿದಂತೆ ರಾಜ್ಯದಲ್ಲಿಯೂ ನಿರ್ಬಂಧಿಸಬೇಕು ಎಂದು ಪತ್ರ ಬರೆದಿದ್ದಾರೆ,ಹಾಗಾಗಿ ಈ ಬಗ್ಗೆ ಪರಿಶೀಲಿಸಲು ಸಿಎಸ್ ಗೆ ಸೂಚನೆ ಕೊಡಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಬದಲಾವಣೆಯಲ್ಲಿ ಹೈಕಮಾಂಡ್ ನಿರ್ಧಾರವೇ ಮುಖ್ಯ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಪಕ್ಷದ ವರಿಷ್ಠರ ಮತ್ತು ಶಾಸಕರ ಅಭಿಪ್ರಾಯ ಬಹಳ ಮುಖ್ಯ. ಶಾಸಕರ ಒಮ್ಮತ ಹಾಗೂ ಹೈಕಮಾಂಡ್ ಆರ್ಶೀವಾದ ಎರಡೂ ಇರಬೇಕು, ಇವತ್ತಿನ ಭೋಜನಕೂಟ ಕಾರ್ಯಕ್ರಮದಲ್ಲಿ ಯಾವುದೇ ವಿಶೇಷತೆ ಇಲ್ಲ. ಸಂಪುಟ ಪುನರ್ರಚನೆಗೂ ಇಂದಿನ ಭೋಜನಕೂಟಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.

ಶಾಸಕ ಮುನಿರತ್ನ ಮತ್ತು ಡಿ.ಕೆ ಶಿವಕುಮಾರ್ ಅವರ ನಡುವಿನ ಮಾತಿನ ಚಕಮಕಿ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ರವರು ನಿನ್ನೆ ಬೆಂಗಳೂರು ನಡಿಗೆ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಲಾಲ್ಬಾಗ್ ನಂತೆ ಮತ್ತಿಕರೆಯ ಜೆ ಪಿಪಾರ್ಕ್ ದಲ್ಲಿಯೂ ಕಾರ್ಯಕ್ರಮವಿತ್ತು. ಶಾಸಕ ಮುನಿರತ್ನರವರು ವೇದಿಕೆಗೆ ಆಗಮಿಸಿ, ತಮ್ಮ ಅಭಿಪ್ರಾಯವನ್ನು ನೀಡಬಹುದಾಗಿತ್ತು. ಆದರೆ ಶಾಸಕರು ತಮ್ಮ ಅಭಿಪ್ರಾಯವನ್ನು ತಿಳಿಸಲಿಲ್ಲ. ಕಾರ್ಯಕ್ರಮಕ್ಕೆ ಆಹ್ವಾನವಿತ್ತೇ ಇಲ್ಲವೇ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದರು.

ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಸುಧಾರಣೆಯಾಗುತ್ತಿದ್ದು, ಶೀಘ್ರವೇ ಆಸ್ಪತ್ರೆಯಿಂದ ಮನೆಗೆ ತೆರಳಿಲಿದ್ದಾರೆ ಎಂದು ಮುಖ್ಯ ಮಂತ್ರಿಗಳು ಇದೇ ವೇಳೆ ತಿಳಿಸಿದರು.