ಮೈಸೂರು: ಕೇಂದ್ರ ಸರ್ಕಾರದ ವಿರುದ್ಧ ಸತತವಾಗಿ ಅಪಪ್ರಚಾರ ಮಾಡುತ್ತಿರುವ ರಾಜ್ಯ ಮುಖ್ಯಮಂತ್ರಿಗಳು ಹಾಗೂ ಸಚಿವರು ಭಾರತದ ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡಲು ಹೊರಟಿದ್ದಾರೆ ಎಂದು ಬಿಜೆಪಿ ಮುಖಂಡರಾದ ಹೇಮಾನಂದೀಶ್ ಟೀಕಿಸಿದ್ದಾರೆ.
ವಿಧಾನಮಂಡಲದ ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲರು ಮಾತನಾಡಿದ್ದಾರೆ.ಸದನದ ಒಳಗೆ ರಾಜ್ಯಪಾಲರಿಗೆ ಆಡಳಿತ ಪಕ್ಷದ ಸದಸ್ಯರು ಅಗೌರವ ತೋರಿದ್ದು ಅತ್ಯಂತ ಖಂಡನೀಯ
ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡಿದೆ ಎಂದು ಹೇಮಾ ದೂರಿದ್ದಾರೆ.
ವಿಶ್ವವಿದ್ಯಾಲಯಗಳ ಉಪಕುಲಪತಿ ನೇಮಕ ಮಾಡುವ ಅಧಿಕಾರವನ್ನು ರಾಜ್ಯಪಾಲರಿಂದ ಕಸಿದು ಮುಖ್ಯಮಂತ್ರಿಗಳಿಗೆ ವರ್ಗಾಯಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿತ್ತು. ಹೀಗಾಗಿ ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರ ಅನೇಕ ರೀತಿಯ ಅಸಂವಿಧಾನಾತ್ಮಕ ನಡೆಯನ್ನು ಪ್ರದರ್ಶಿಸುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.
ಈ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿ, ಕೇವಲ ಕುರ್ಚಿಗಾಗಿ ಕಾದಾಟ ನಡೆಸುತ್ತಿದ್ದು, ಆಡಳಿತ ಯಂತ್ರ ಸಂಪೂರ್ಣ ನಿಷ್ಕ್ರಿಯಗೊಂಡಿದೆ, ರಾಜ್ಯ ಸರಕಾರದ ಈ ನಡೆಯಿಂದ ಮುಂಬರುವ ದಿನಗಳಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಮಾ ನಂದೀಶ್ ಭವಿಷ್ಯ ನುಡಿದಿದ್ದಾರೆ.
