ಮೈಸೂರು: ಕೇಂದ್ರ ಸರ್ಕಾರ ಕೇವಲ ಒಂದು ತಿಂಗಳ ಅವಧಿಯಲ್ಲಿ ನಾಲ್ಕು ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿ ರೈತರ, ಬಡವರ ಮತ್ತು ಮಧ್ಯಮ ವರ್ಗದವರ ಜೀವನ ಬೀದಿಗೆ ಬರುವಂತೆ ಮಾಡಿದೆ ಎಂದು ಚಾಮರಾಜ ಕ್ಷೇತ್ರದ ಇಂದಿರಾ ಗಾಂಧಿ ಬ್ಲಾಕ್ ಅಧ್ಯಕ್ಷರಾದ ರವಿ
ಮಂಚೇಗೌಡನ ಕೊಪ್ಪಲು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, ದೇಶದಲ್ಲಿ ಕೆಲವು ರಾಜ್ಯಗಳ ಚುನಾವಣೆ ಮುಗಿಯುವುದನ್ನೆ ಕಾಯುತ್ತಿದ್ದ ಕೇಂದ್ರ ಸರ್ಕಾರ, ಜನರ ಮತ ಪಡೆದು ಬೆಲೆ ಏರಿಸುವ ಮೂಲಕ ಜನರಿಗೆ ಅನ್ಯಾಯ ಮಾಡಿ ತಾನು ಜನವಿರೋಧಿ ಎಂಬುದನ್ನು ಸಾಬೀತು ಪಡಿಸಿದೆ ಎಂದು ಹೇಳಿದ್ದಾರೆ.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಬ್ಯಾಂಕ್ಗಳನ್ನು ರಾಷ್ಟ್ರೀಕರಣ ಮಾಡಿ ಬಡವರು ಬ್ಯಾಂಕಿನಲ್ಲಿ ವ್ಯವಹರಿಸಲು ಅವಕಾಶ ಮಾಡಿದ್ದರು. ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ರೈತರು ಸಹಕಾರ ಸಂಘದಿಂದ ಸಾಲ ಪಡೆದರೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲ ನೀಡದಂತೆ ಆದೇಶ ಹೊರಡಿಸಿ ರೈತರಿಗೆ ಅನ್ಯಾಯ ಮಾಡಿದ್ದಾರೆ. ಈ ಕ್ರಮ ವನ್ನು ವಿರೋಧಿಸಿ ಮುಂದಿನ ದಿನಗಳಲ್ಲಿ ಬ್ಯಾಂಕ್ಗಳ ವಿರುದ್ಧ ಪ್ರತಿಭಟನೆ ಹಮ್ಮಿ ಕೊಳ್ಳಲಾಗುವುದು ಎಂದು ರವಿ ಮಂಚೇಗೌಡನಕೊಪ್ಪಲು ಹೇಳಿದ್ದಾರೆ.
