ಬೆಂಗಳೂರು: ನವದೆಹಲಿಯಲ್ಲಿ ವಿದ್ಯಾರ್ಥಿಗಳು ತಮ್ಮ ನ್ಯಾಯಸಮ್ಮತ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನಡೆಸುತ್ತಿದ್ದ ಶಾಂತಿಯುತ ಪ್ರತಿಭಟನೆ ವೇಳೆ ಪೊಲೀಸರು ದಾಳಿ ಮಾಡಿ ಹಲ್ಲೆ ನಡೆಸಿದ್ದು ಖಂಡನೀಯ ಎಂದು ಆಮ್ ಆದ್ಮಿ ಪಕ್ಷ ಕಿಡಿಕಾರಿದೆ.
ಪೊಲೀಸರ ದೌರ್ಜನ್ಯವನ್ನು ವಿರೋಧಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ ಉಪವಾಸ ಸತ್ಯಾಗ್ರಹದಲ್ಲಿ ನಿರತರಾಗಿರುವ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ಸತೀಶ್ ಕುಮಾರ್ ಮಾತನಾಡಿ,ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕು, ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕಲು ಬಲಪ್ರಯೋಗ ಮಾಡಿರುವುದು ಅತ್ಯಂತ ಖಂಡನೀಯ ಎಂದು ಗುಡುಗಿದರು
ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸುವುದು ಹಾಗೂ ಅವರ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸುವುದು ಸರ್ಕಾರದ ಕರ್ತವ್ಯ,ಆದರೆ ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ , ಅಶ್ರು ವಾಯು ಹಾಗೂ ಗುಂಡನ್ನು ಹೊಡೆಯುವುದು ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರವು ವಿದ್ಯಾರ್ಥಿಗಳ ಮೇಲೆ ಹೂಡಲಾದ ಪ್ರಕರಣಗಳನ್ನು ಹಿಂಪಡೆಯಬೇಕು ಹಾಗೂ ಪ್ರತಿಭಟನೆ ಸಂದರ್ಭದಲ್ಲಿ ನಡೆದ ಪೊಲೀಸ್ ದೌರ್ಜನ್ಯದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಮ್ ಆದ್ಮಿ ಪಕ್ಷ ಆಗ್ರಹಿಸುತ್ತದೆ ಎಂದು ತಿಳಿಸಿದರು.
ದೇಶದ ಭವಿಷ್ಯವನ್ನು ರೂಪಿಸುವ ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕುವ ಬದಲು, ಅವರೊಂದಿಗೆ ಸಂವಾದ ನಡೆಸಿ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಕಠಿಣ ನೀತಿಯನ್ನು ಅಳವಡಿಸಿಕೊಳ್ಳುವ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದು ಡಾ. ಸತೀಶ್ ಕುಮಾರ್ ಸಲಹೆ ನೀಡಿದರು.
ಕೂಡಲೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಯನ್ನು ತೆಗೆದುಕೊಳ್ಳ ಬೇಕು. ದೇಶದ ಜನತೆಯ ಮುಂದೆ ಪ್ರಧಾನಿಗಳು ಕ್ಷಮೆಯಾಚಿಸಬೇಕು ಎಂದು ಸತೀಶ್ ಕುಮಾರ್ ಆಗ್ರಹಿಸಿದರು.
ಪಕ್ಷದ ಮುಖಂಡರುಗಳಾದ ಉಷಾ ಮೋಹನ್, ಅಶೋಕ್ ಮೃತ್ಯುಂಜಯ, ಜಗದೀಶ್ ಚಂದ್ರ ಇರ್ಷಾದ್ ಸೇರಿದಂತೆ ಇನ್ನಿತರ ಸಂಘಟನೆಗಳ ಮುಖಂಡರು ಉಪವಾಸ ನಿರತರಾಗಿದ್ದಾರೆ.
