ಮೈಸೂರು: ಯಾವ ಧರ್ಮದಲ್ಲೂ ಅಧರ್ಮ, ಅನೀತಿಯನ್ನು ಬೋಧಿಸಿಲ್ಲ, ದ್ವೇಷ ಹರಡಿ ಎಂದು ಹೇಳಿಲ್ಲ,ಆದರೆ ಕೆಲವರು ಧರ್ಮದ ಹೆಸರಿನಲ್ಲಿ ಇತರರ ಮೇಲೆ ಸವಾರಿ ಮಾಡಲು ಯತ್ನಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಬೇಸರ ಪಟ್ಟರು.
ಇಂತಹದ್ದಕ್ಕೆಲ್ಲ ಸಂವಿಧಾನ ಅವಕಾಶ ನೀಡುವುದಿಲ್ಲ ಎಂದು ಅವರು ತಿಳಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘ ಜಿಲ್ಲಾ ಘಟಕ ನಗರದ ಜಗನ್ ಮೋಹನ ಅರಮನೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ, ಉರ್ದು ದಿನಾಚರಣೆ, ಕನ್ನಡ ರಾಜ್ಯೋತ್ಸವ ಹಾಗೂ ಶೈಕ್ಷಣಿಕ ಕಾರ್ಯಗಾರದಲ್ಲಿ ಸಚಿವರು ಮಾತನಾಡಿದರು.
ನಾವೆಲ್ಲರೂ ಭಾರತೀಯರು ಎಂಬ ಮನೋಭಾವ ಪ್ರತಿಯೊಬ್ಬರಲ್ಲೂ ಮೂಡಬೇಕು, ಸಂವಿಧಾನದ ಆಶಯಕ್ಕೆ ನಿಷ್ಠಾವಂತರಾಗಿರಬೇಕು, ಜೀವನದ ಮೌಲ್ಯಗಳ ಮೇಲೆ ಧರ್ಮ ಸೃಷ್ಠಿಯಾಗಿದೆ. ಹಾಗಾಗಿ ಮನುಷ್ಯರು ಸಾಮರಸ್ಯದಿಂದ ಬದುಕಬೇಕು ಎಂದು ಕರೆ ನೀಡಿದರು.
ಈ ದೇಶದ ಅಲ್ಪ ಸಂಖ್ಯಾತರು, ಬಹುಸಂಖ್ಯಾತರ ಮೇಲೆ ನಂಬಿಕೆ ಇಟ್ಟು ಬದುಕುತ್ತಿದ್ದಾರೆ. ಅವರ ರಕ್ಷಣೆ ಬಹುಸಂಖ್ಯಾತರ ಕರ್ತವ್ಯ ಮತ್ತು ಜವಬ್ದಾರಿಯಾಗಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ್ದಾರೆ. ಆದರೆ ಪ್ರಸ್ತುತ ಕೋಮುವಾದದ ನೆರಳು ಭಾರತದ ಪ್ರಜಾಪ್ರಭುತ್ವದ ಮೇಲೆ ತನ್ನ ಕಬಂಧ ಬಾಹು ಚಾಚುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಶಿಕ್ಷಣದ ಸವಲತ್ತುಗಳು ಪ್ರತಿಯೊಬ್ಬರಿಗೂ ದೊರಕಬೇಕು. ಹೀಗಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ನಮ್ಮ ಸರ್ಕಾರ ಅನೇಕ ಸೌಲಭ್ಯಗಳನ್ನು ಎಲ್ಲಾ ವರ್ಗದವರಿಗೂ ದೊರಕಿಸುತ್ತಿದೆ ಎಂದು ನುಡಿದರು.
ಶಾಸಕ ತನ್ವೀರ್ ಸೇಠ್ ಮಾತನಾಡಿ, ಸಮಾಜ ನಮ್ಮೊಂದಿಗಿದೆ, ಅದರಂತೆ ನಾವೂ ಸಮಾಜದ ಜೊತೆಗೆ ಇರುವುದನ್ನು ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.
ಯಾರು ಅನ್ಯ ಧರ್ಮಕ್ಕೆ ಗೌರವ ನೀಡುವುದಿಲ್ಲವೋ, ಅವರು ತಮ್ಮ ಧರ್ಮವನ್ನು ಎಂದಿಗೂ ರಕ್ಷಣೆ ಮಾಡಿಕೊಳ್ಳಲಾಗುವುದಿಲ್ಲ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ ಮತ್ತಿತರರು ಮಾತನಾಡಿದರು.
ಶಾಸಕ ಕೆ.ಹರೀಶ್ ಗೌಡ, ನಗರ ಪಾಲಿಕೆ ಆಯುಕ್ತ ಆಶಾದ್ ಉರ್ ರೆಹಮಾನ್ ಶರೀಫ್, ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ಚಿಕ್ಕನೇರಳೆ, ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.