ಮೈಸೂರು: ಮಕ್ಕಳು ಕೇವಲ ಪಠ್ಯ ಕ್ರಮಕ್ಕೆ ಸೀಮಿತವಾಗದೆ, ತಮ್ಮಲ್ಲಿರುವಂತಹ ಪ್ರತಿಭೆಗಳನ್ನು ಅನಾವರಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಾಯತ್ರಿ ಕೆ.ಎಂ ಹೇಳಿದರು.
ಮಹಾರಾಜ ಪದವಿ ಪೂರ್ವ ಕಾಲೇಜಿ (ಪ್ರೌಢಶಾಲಾ ವಿಭಾಗ) ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ, 2024-25 ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಕಾರ್ಯಕ್ರಮವು ಮೂಲೆ ಮೂಲೆಯಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸುವ ವೇದಿಕೆಯಾಗಿದೆ, ಈ ಸದವಕಾಶವನ್ನು ಬಳಸಿಕೊಂಡು ರಾಜ್ಯ ಮಟ್ಟದಲ್ಲಿ ಸ್ಪರ್ಧಿಸಿ ನಮ್ಮ ರಾಜ್ಯಕ್ಕೆ ಕೀರ್ತಿ ತರುವಂತರಾಗಬೇಕು ಎಂದು ಸಲಹೆ ನೀಡಿದರು.
ಹಲವಾರು ಮಕ್ಕಳು ಕೇವಲ ಶಿಕ್ಷಣವೆಂಬುದು ಅಂಕಕ್ಕೆ ಸೀಮಿತವಾಗಿದೆ ಎಂದು ಭಾವಿಸಿ ಅಂಕದ ಕಡೆಗೆ ಗಮನ ನೀಡಿ ಬೇರೆ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ,ಅದು ಸರಿಯಲ್ಲ,ಮಕ್ಕಳ ಒಳಿತಿಗಾಗಿ ಶಿಕ್ಷಕರು ಶಾಲೆಗಳಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಅವರಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಅವರನ್ನು ಜಗತ್ತಿಗೆ ಪರಿಚಯಿಸುವ ಕೆಲಸವನ್ನು ಮಾಡುತ್ತಾರೆ ಎಂದು ಹೇಳಿದರು.
ಪ್ರತಿ ಮಕ್ಕಳು ಸೋಲು ಗೆಲುವಿನ ಬಗ್ಗೆ ಯೋಚನೆ ಮಾಡದೆ ಪ್ರಯತ್ನಗಳನ್ನು ಮುಂದುವರಿಸುವುದರ ಕಡೆ ಗಮನಹರಿಸಬೇಕು ಎಂದು ಕಿವಿ ಮಾತು ಹೇಳಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ(ಆಡಳಿತ)ಎಸ್.ಟಿ ಜವರೇಗೌಡ ಅವರು ಮಾತನಾಡಿ, ಪ್ರತಿಭಾ ಕಾರಂಜಿ ಮಕ್ಕಳಲ್ಲಿರುವ ಪ್ರತಿಭೆ ಅನಾವರಣಗೊಳಿಸುವುದಾಗಿದೆ ಎಂದು ಹೇಳಿದರು.
ಜಿಲ್ಲಾ ಮಟ್ಟದಲ್ಲಿ ಭಾಗವಹಿಸುವ ಪ್ರತಿ ಮಕ್ಕಳಿಗೂ ಆಯಾ ಶಾಲೆಯ ಶಿಕ್ಷಕರು ನಿಯೋಜನೆಗಳನ್ನು ತಮ್ಮ ತಮ್ಮ ಶಾಲೆಗಳಲ್ಲಿ ನೀಡಬೇಕು. ಮಕ್ಕಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು.
ಎಲ್ಲಾ ಮಕ್ಕಳು ರಾಜ್ಯ ಮಟ್ಟಕ್ಕೆ ಹೋಗುವಂತಾಗಲಿ ಎಂದು ಹಾರೈಸಿದರು.
ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಕೆ.ಬಿ ಸೋಮೇಗೌಡ ಅವರು ಮಾತನಾಡಿ, ಮಕ್ಕಳು ಹೊರ ಜಗತ್ತಿನ ಬಗ್ಗೆ ತಿಳಿದುಕೊಳ್ಳಬೇಕೆಂಬ ದೃಷ್ಟಿಯಿಂದ ಪ್ರತಿ ವರ್ಷ ಪ್ರತಿಭಾ ಕಾರಂಜಿ ಆಯೋಜಿಸಿ ಹೊಸ ಹೊಸ ಪ್ರತಿಭೆ ಗಳನ್ನು ಜಗತ್ತಿಗೆ ನೀಡುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಎಂ.ಆರ್ ಅನಂತರಾಜು, ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್ ರಾಜು, ನಂಜನಗೂಡಿನ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಮೈಸೂರು ಜಿಲ್ಲಾ ಘಟಕದ ಕ.ರಾ ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಕೃಷ್ಣ, ಪ್ರಾಥಮಿಕ ಶಾಲಾ ಮುಖ್ಯೋಪಧ್ಯಾಯರ ಸಂಘದ ಅಧ್ಯಕ್ಷ ದುಂಡಯ್ಯ, ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಟಿ.ಸಿ ಕೃಷ್ಣಮೂರ್ತಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ (ಗ್ರೇಡ್-2)ಅಧ್ಯಕ್ಷ ರಾಜೇಂದ್ರ ಮತ್ತಿತರರು ಉಪಸ್ಥಿತರಿದ್ದರು.