ಬೆಂಗಳೂರು: ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹಿಂಡುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು; ಈ ಕೆಲಸಾನ ಅಧಿಕಾರಿಗಳು ಅಥವಾ ಜಿಲ್ಲಾಧಿಕಾರಿ ಮಾಡಲು ಸಾಧ್ಯವಿಲ್ಲ, ಸರಕಾರವೇ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ರಾಜ್ಯದಲ್ಲಿ ನಾಗರಿಕ ಸರಕಾರ, ಗೃಹ ಸಚಿವರು ಇದ್ದಾರೆಯೇ ಎಂದು ಹೆಚ್ ಡಿ ಕೆ ಕಾರವಾಗಿ ಪ್ರಶ್ನಿಸಿದರು.
2018ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಇಂಥ ಕಿಡಿಗೇಡಿ ಫೈನಾನ್ಸ್ ಗಳಿಂದ ಜನರನ್ನು ರಕ್ಷಣೆ ಮಾಡಬೇಕು ಎಂದು ಋಣಮುಕ್ತ ಕಾಯ್ದೆ ಜಾರಿಗೆ ತಂದೆ,ಅಷ್ಟೇ ಅಲ್ಲ, ಜನರು ಪಡೆದ ಸಾಲವನ್ನು ತೀರಿಸಲಾಗದ ಪರಿಸ್ಥಿತಿ ಸೃಷ್ಟಿಯಾದರೆ ಅದಕ್ಕೆ ಪರಿಹಾರ ಏನೆಂಬ ಬಗ್ಗೆ ನಾನು ಆಲೋಚನೆ ಮಾಡಿದ್ದೆ, ಆ ಸಂದರ್ಭದಲ್ಲಿ ಕೇರಳ ಸರ್ಕಾರ ಈ ಸಮಸ್ಯೆ ಬಗೆಹರಿಸಲು ಒಂದು ಆಯೋಗವನ್ನು ರಚನೆ ಮಾಡಿತ್ತು. ಆ ಮಾಹಿತಿ ನನಗಿತ್ತು. ಕೇರಳಕ್ಕೆ ತೆರಳಿ ಖುದ್ದು ಅಧ್ಯಯನ ಮಾಡುವ ಉದ್ದೇಶದಿಂದ ನಾನು ಅಂದಿನ ನನ್ನ ಸಂಪುಟದಲ್ಲಿ ಸಹಕಾರ ಸಚಿವರಾಗಿದ್ದ ಬಂಡೆಪ್ಪ ಕಾಶೆಂಪೂರ್ ನೇತೃತ್ವದ ನಿಯೋಗವನ್ನು ಕೇರಳಕ್ಕೆ ಕಳಿಸಿದ್ದೆ. ಅದನ್ನು ಆಧಾರವಾಗಿ ಇಟ್ಟುಕೊಂಡು ನಾನು ಇಲ್ಲಿ ಋಣಮುಕ್ತ ಕಾಯ್ದೆಯನ್ನು ಜಾರಿಗೆ ತಂದಿದ್ದೆ ಆಮೇಲೆ ನನ್ನ ಸರ್ಕಾರ ಹೋಯಿತು,ಅದು ಕಸದ ಬುಟ್ಟಿಗೆ ಹೋಯಿತು ಎಂದು ಬೇಸರ ವ್ಯಕ್ತಪಡಿಸಿದರು.
ಈಗ ಅದರ ಪರಿಣಾಮವೇ ಮೈಕ್ರೋ ಫೈನಾನ್ಸ್ ಗಳ ಉಪಟಳ ಜಾಸ್ತಿ ಆಗಿರುವುದು. ಖಾಸಗಿ ಹಣಕಾಸು ಸಂಸ್ಥೆಗಳು ಯಾವುದೇ ಪರವಾನಗಿ ಪಡೆಯದೇ ಕಾನೂನುಬಾಹಿರವಾಗಿ ಈ ರೀತಿ ಹೆಚ್ಚಿನ ಬಡ್ಡಿಗೆ ಸಾಲ ನೀಡಿ ಜನರಿಗೆ ಕಿರುಕುಳ ನೀಡುತ್ತಿವೆ. ಇದನ್ನು ತಾಳಲಾರದೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ, ಊರನ್ನೇ ಖಾಲಿ ಮಾಡುವ ದುಸ್ಥಿತಿ ಸೃಷ್ಟಿಯಾಗಿದೆ ಎಂದು ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.
ನಾನು ಎಷ್ಟೋ ಬಾರಿ ಚಾಮರಾಜನಗರಕ್ಕೆ ಭೇಟಿ ನೀಡಿದ್ದೇನೆ. ನನ್ನ ಅಧಿಕಾರ ಹೋಗಿಲ್ಲ, ಗಟ್ಟಿಯಾಗಿದ್ದೇನೆ ಎಂದು ಸಿಎಂ ಹೇಳುತ್ತಾರೆ. ಅವರೇನೋ ಗಟ್ಟಿಯಾಗಿದ್ದಾರೆ. ಆದರೆ, ನಿಮ್ಮನ್ನು ಮುಖ್ಯಮಂತ್ರಿ ಜಾಗದಲ್ಲಿ ಕೂರಿಸಿರುವ ಆ ಜನ ಏನಾಗಿದ್ದಾರೆ, ಅವರನ್ನು ಗಟ್ಟಿ ಮಾಡೋಕೆ ಏನು ಮಾಡಿದ್ದೀರಿ ಎಂದು ಹೆಚ್ ಡಿ ಕೆ ಕಿಡಿಕಾರಿದರು.
ಕಾನೂನುಬಾಹಿರವಾಗಿ ಮೈಕ್ರೋ ಫೈನಾನ್ಸ್ ಮಾಡಲು ಖಾಸಗಿ ಕಂಪನಿಗಳಿಗೆ ಅನುಮತಿ ಕೊಟ್ಟವರು ಯಾರು, ಸರಕಾರ ಅನುಮತಿ ಕೊಟ್ಟಿತ್ತಾ, ರಾಷ್ಟ್ರೀಕೃತ ಬ್ಯಾಂಕುಗಳು, ಸಹಕಾರಿ ಬ್ಯಾಂಕುಗಳು ಸರಿಯಾದ ರೀತಿಯಲ್ಲಿ ಸಾಲ ಸೌಲಭ್ಯ ನೀಡಿದರೆ ಮೈಕ್ರೋ ಫೈನಾನ್ಸ್ ಗಳ ಬಳಿಗೆ ಸಾಲಕ್ಕೆ ಯಾಕೆ ಹೋಗುತ್ತಾರೆ ಎಂದು ಕುಮಾರಸ್ವಾಮಿ ಸರಕಾರವನ್ನು ಪ್ರಶ್ನಿಸಿದರು.