ಬೆಂಗಳೂರು: ಸೈಬರ್ ಅಪರಾಧಗಳ ನಿಯಂತ್ರಣಕ್ಕಾಗಿ ಆಮ್ ಆದ್ಮಿ ಪಕ್ಷವು ಬೆಂಗಳೂರಿನಾದ್ಯಂತ ಪಂಗನಾಮ ಅಭಿಯಾನ ಹಮ್ಮಿಕೊಂಡಿದೆ.
ಈ ಬಗ್ಗೆ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಮಾತನಾಡಿದರು.
ದೇಶದಾದ್ಯಂತ ಅದರಲ್ಲೂ ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರು ನಗರದಲ್ಲಿಯೇ ಅದರಲ್ಲಿಯೂ ವಿದ್ಯಾವಂತರೇ ಸೈಬರ್ ಅಪರಾಧಗಳಿಗೆ ತುತ್ತಾಗಿ ಸಾವಿರಾರು ಕೋಟಿ ತಮ್ಮ ಗಳಿಕೆಯ ಹಣ ಕಳೆದುಕೊಳ್ಳುತ್ತಿದ್ದಾರೆ ಎಂದು ವಿಷಾದಿಸಿದರು.
ಸೈಬರ್ ಅಪರಾಧಗಳ ವಿರುದ್ಧ ಆಮ್ ಆದ್ಮಿ ಪಕ್ಷವು ಬೆಂಗಳೂರಿನಾದ್ಯಂತ ಎಲ್ಲಾ ವಾರ್ಡ್ ಗಳಲ್ಲಿ ಮನೆಮನೆಗೆ ತೆರಳಿ ಹಾಗೂ ಜನನಿ ಬಿಡ ಪ್ರದೇಶಗಳಲ್ಲಿ ಪಂಗನಾಮ ವಿಶೇಷ ಅಭಿಯಾನ ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.
ಸೈಬರ್ ಅಪರಾಧಗಳು ತಕ್ಕಮಟ್ಟಿಗಾದರೂ ನಿಯಂತ್ರಣಕ್ಕೆ ಬರಬೇಕೆಂಬುದು ನಮ್ಮ ಅಭಿಲಾಷೆ ಎಂದು ಜಗದೀಶ್ ಚಂದ್ರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕಳೆದು ಎಂಟು ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯ ಸೈಬರ್ ಅಪರಾಧ ವಿಭಾಗದಲ್ಲಿ 8000ಕ್ಕೂ ಹೆಚ್ಚು ದೂರುಗಳು ದಾಖಲಾಗಿ 1250 ಕೋಟಿ ರೂಪಾಯಿಗಳು ಕಳ್ಳರ ಪಾಲಾಗಿದೆರುವುದು ಗೊತ್ತಾಗಿದೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೈಬರ್ ಅಪರಾಧವನ್ನು ನಿಯಂತ್ರಿಸಲು ಸಾಧ್ಯವಾಗದಿರುವುದು ಸರ್ಕಾರಗಳ ಬೇಜವಾಬ್ದಾರಿಯನ್ನು ತೋರಿಸುತ್ತದೆ ಎಂದು ಅವರು ಟೀಕಿಸಿದರು.
ಅತ್ಯಾಧುನಿಕ ತಂತ್ರಜ್ಞಾನವನ್ನು ಕಾಲಕಾಲಕ್ಕೆ ಅಳವಡಿಸಿಕೊಂಡು ಸೈಬರ್ ತಜ್ಞರನ್ನು ನೇಮಕ ಮಾಡಿಕೊಂಡು ಈ ಅಪರಾಧಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಸಂಪೂರ್ಣ ವಿಫಲ ವಾಗಿರುವುದು ಕಂಡುಬರುತ್ತಿದೆ.
ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಸೈಬರ್ ಕ್ರೈಮ್ ಕಡೆ ಗಮನ ಹರಿಸಬೇಕು ಎಂದು ಒತ್ತಾಯಿಸಿದ ಜಗದೀಶ್ ಚಂದ್ರ, ಜನತೆಗೆ ಅರಿವು ಮೂಡಿಸುವ ಪಂಗನಾಮ ಅಭಿಯಾನವನ್ನು ಯಶಸ್ವಿಗೊಳಿಸಲು ನಾಗರಿಕರು ಸಹ ನಮ್ಮೊಂದಿಗೆ ಕೈಜೋಡಿಸಬೇಕೆಂದು ಮನವಿ ಮಾಡಿದರು.
ಬೆಂಗಳೂರು ನಗರ ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ ಮಾತನಾಡಿ ಈಗಾಗಲೇ ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿ ಈ ಅಭಿಯಾನವನ್ನು ನಡೆಸುತ್ತಿದ್ದೇವೆ. ನಾಗರೀಕರಿಂದ ಅಭೂತ ಪೂರ್ವ ಸ್ವಾಗತ ದೊರೆಯುತ್ತಿದ್ದು ಅಲ್ಲಿನ ಸ್ಥಳಿಯರು ಸಹ ನಮ್ಮೊಂದಿಗೆ ಕೈಜೋಡಿಸುತ್ತಿದ್ದಾರೆ ಒಂದು ತಿಂಗಳ ಕಾಲ ಈ ಅಭಿಯಾನ ನಡೆಯಲಿದೆ
ಎಂದು ತಿಳಿಸಿದರು.