ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರ ಡೀಸೆಲ್ ಹಾಗೂ ಪೆಟ್ರೋಲ್ ದರಗಳನ್ನು ಪದೇ ಪದೇ ಏರಿಕೆ ಮಾಡುವ ಮೂಲಕ ದೇಶದ ಜನಸಾಮಾನ್ಯರ ಬದುಕಿನ ಮೇಲೆ ಭಾರೀ ಹೊರೆ ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಆಮ್ ಆದ್ಮಿ ಪಕ್ಷ ಪ್ರತಿಭಟನೆ ನಡೆಸಿತು.
ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನತೆಗೆ ಈ ತೈಲಬೆಲೆ ಏರಿಕೆ ಮತ್ತಷ್ಟು ಆರ್ಥಿಕ ಹೊಡೆತ ನೀಡಲಿದೆ ಎಂದು ಬಿಜೆಪಿ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯನ್ನು ವಿರೋಧಿಸಿ ಇಂದು ನಗರದ ಫ್ರೀಡಂ ಪಾರ್ಕಿನಲ್ಲಿ ಆಮ್ ಆದ್ಮಿ ಪಕ್ಷ ತೀವ್ರ ಪ್ರತಿಭಟನೆ ನಡೆಸಿತು.
ಪ್ರತಿಭಟನೆಯ ನೇತೃತ್ವವನ್ನು ವಹಿಸಿದ್ದ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಮಾತನಾಡಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪದೇ ಪದೇ ಏರಿಕೆಯಿಂದ ಸಾರಿಗೆ ವೆಚ್ಚ ಹೆಚ್ಚಾಗಿ, ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ರೈತರು ಕೃಷಿ ಚಟುವಟಿಕೆಗಳಿಗೆ ಬಳಸುವ ಡೀಸೆಲ್ ದುಬಾರಿಯಾಗುವುದರಿಂದ ಕೃಷಿ ವೆಚ್ಚ ಹೆಚ್ಚಲಿದೆ. ಮಧ್ಯಮ ವರ್ಗ, ಕಾರ್ಮಿಕರು, ಸಣ್ಣ ವ್ಯಾಪಾರಿಗಳು ಹಾಗೂ ಆಟೋ, ಟ್ಯಾಕ್ಸಿ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೊಲ್ಲಿ ಯುದ್ಧದ ಹಿಂದೆ ಕಚ್ಚಾ ತೈಲದ ಬೆಲೆ ಇಳಿದಿದ್ದರೂ ದೇಶದಲ್ಲಿ ದರ ಇಳಿಕೆ ಮಾಡದೇ ಜನರನ್ನು ದೋಚಲಾಗುತ್ತಿದೆ.
ಕೇಂದ್ರ ಸರ್ಕಾರ ಎಕ್ಸೈಸ್ ಸುಂಕದ ಹೆಸರಿನಲ್ಲಿ 40 ಲಕ್ಷ ಕೋಟಿ ರೂಪಾಯಿಗಳನ್ನು ಜನರ ಜೇಬಿಗೆ ಕತ್ತರಿ ಹಾಕುವ ಮೂಲಕ ಸಂಗ್ರಹಿಸಿದೆ ಎಂದು ಸೀತಾರಾಮ್ ಗುಂಡಪ್ಪ ಆರೋಪಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೂಡಲೇ ಈ ಲೆಕ್ಕವನ್ನು ರಾಷ್ಟ್ರದ ಜನತೆಯ ಮುಂದೆ ಬಹಿರಂಗ ಪಡಿಸಬೇಕು, ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ಬಿಜೆಪಿ ಸರ್ಕಾರ ಜನರ ಸಮಸ್ಯೆಗಳ ಬಗ್ಗೆ ಯಾವುದೇ ಕಾಳಜಿ ತೋರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸಂಘಟನಾ ಕಾರ್ಯದರ್ಶಿ, ಡಾ. ಸತೀಶ್ ಕುಮಾರ್ ಮಾತನಾಡಿ
ಅಚ್ಛೇ ದಿನ್ ಎಂಬ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಇಂದು ಜನರನ್ನು ಬೆಲೆ ಏರಿಕೆಯ ಬೆಂಕಿಯಲ್ಲಿ ತಳ್ಳಿದೆ.
ನಿರುದ್ಯೋಗ, ಬೆಲೆ ಏರಿಕೆ, ತೆರಿಗೆ ಭಾರಗಳಿಂದ ಜನ ಜೀವನ ದುಸ್ತರವಾಗಿದ್ದರೂ ಸರ್ಕಾರ ಅದಾನಿ ಅಂಬಾನಿಗಳಂತ ಬಂಡವಾಳಶಾಹಿಗಳು ಹಾಗೂ ಕಾರ್ಪೊರೇಟ್ ಪರ ನೀತಿಗಳಲ್ಲೇ ತೊಡಗಿದೆ ಎಂದು ದೂರಿದರು.
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಎಕ್ಸೈಸ್ ಸುಂಕವನ್ನು ತಕ್ಷಣ ಕಡಿತಗೊಳಿಸಬೇಕು.
ತೈಲಬೆಲೆ ಏರಿಕೆಯನ್ನು ಹಿಂಪಡೆದು ಜನಸಾಮಾನ್ಯರಿಗೆ ಪರಿಹಾರ ನೀಡಬೇಕು.
ಬೆಲೆ ಏರಿಕೆಯನ್ನು ನಿಯಂತ್ರಿಸಲು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರುಗಳಾದ ಲಕ್ಷ್ಮಿಕಾಂತ್ ರಾವ್ , ಜಗದೀಶ್ ಚಂದ್ರ, ಶಶಿಧರ್ ಆರಾಧ್ಯ, ಅಶೋಕ್ ಮೃತ್ಯುಂಜಯ, ಪುಟ್ಟಣ್ಣ ಗೌಡ, ಮಧುಮಿತ, ಪ್ರಭಾವತಿ, ಪುಷ್ಪ ಕೇಶವ್, ಶುಭ ಗುತ್ತೇದಾರ, ಇರ್ಷಾದ್ ಖಾನ್, ಅಣ್ಣ ನಾಯಕ್, ಉಮೇಶ್ ಯಾದವ್, ದಿಲೀಪ್ ಕುಮಾರ್ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
