ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ ಅಂಬೇಡ್ಕರ್ ಅವರನ್ನು‌ ಎಲ್ಲರೂ ಸ್ಮರಿಸಿ-ಹೆಚ್.ಸಿ‌ ಮಹದೇವಪ್ಪ

Spread the love

ಮೈಸೂರು: ಭಾರತದ ಉದ್ದಗಲಕ್ಕೂ ಇಂದು ಸಂವಿಧಾನವನ್ನು ಆರಾಧಿಸುತ್ತಿದ್ದಾರೆ. ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದವರು ಕೂಡ ಸಂವಿಧಾನ ಪೀಠಿಕೆಯನ್ನು ಪ್ರತಿದಿನ ಓದುತ್ತಿದ್ದಾರೆ ಎಂದು ಸಚಿವ‌ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದರು.

ನಂಜನಗೂಡಿನಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂವಿಧಾನವದಲ್ಲಿ ಭಾರತೀಯರಾದ ನಾವೆಲ್ಲರೂ ಒಂದೇ ಎಂಬ ಆಶಯ ಅಡಗಿದೆ. ಎಲ್ಲರ ಹಕ್ಕುಗಳನ್ನು ರಕ್ಷಣೆ ಮಾಡುವ ಸಂವಿಧಾನವು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ಸಾರುತ್ತದೆ. ಈ ಅಂಶಗಳ ಮೇಲೆ ಭಾರತದ ಜನಜೀವನ ನಡೆಯುತ್ತಿದೆ.
ಎಂದು ಹೇಳಿದರು.

ಸ್ವಾತಂತ್ರ್ಯ ಪೂರ್ವದ ಬ್ರಿಟಿಷ್ ಆಡಳಿತದಲ್ಲಿ ದೇಶದಲ್ಲಿ ಆರ್ಥಿಕ ಹಿಂಜರಿತ ಉಂಟಾಗಿತ್ತು ಆ ಸಂದರ್ಭದಲ್ಲಿ ಎಲ್ಲಾ ಆರ್ಥಿಕ ತಜ್ಞರ ಸಭೆಯಲ್ಲಿ ಅಂಬೇಡ್ಕರ್ ಅವರು ಭಾಗವಹಿಸಿ ಭಾರತೀಯ ರೂಪಾಯಿ ಸಮಸ್ಯೆಗಳಿಗೆ ಪರಿಹಾರ ಒದಗಿಸಿದ್ದರು, ಅವರ ಸಲಹೆ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ಸ್ಥಾಪನೆಯಾಗಿತ್ತು ಎಂದು ಸ್ಮರಿಸಿದರು.

ದೇಶದ ಎಲ್ಲಾ ಜನರ ಏಳಿಗೆಗೆ ಸಂವಿಧಾನ ರಚಿಸಿ ಪ್ರತಿಯೊಬ್ಬರ ಸಮಾನ ಹಕ್ಕುಗಳ ರಕ್ಷಣೆಗೆ ಮುಂದಾದ ಬಾಬಾ ಸಾಹೆಬರನ್ನು ಒಂದು ವರ್ಗಕ್ಕೆ ಏಕೆ ಸೀಮಿತ ಮಾಡಲಾಗುತ್ತಿದೆ. ಸದಾ ಕಾಲ ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ ಅವರನ್ನು ಪ್ರತಿಯೊಬ್ಬರೂ ಕೂಡ ಸ್ಮರಿಸಬೇಕು ಎಂದು ಮಹದೇವಪ್ಪ ಕರೆ ನೀಡಿದರು.

ನಮ್ಮ ಸರ್ಕಾರವು ಸಂವಿಧಾನದ ಆಶಯವನ್ನು ಆಡಳಿತದ ಮೂಲಕ ಜಾರಿಗೆ ತರುತ್ತಿದೆ. ಅವಕಾಶಗಳಿಂದ ವಂಚಿತರಾದವರಿಗೆ ಸಂವಿಧಾನದಡಿ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಒದಗಿಸಿಕೊಡಲಾಗುತ್ತಿದೆ. ಅದರಂತೆ ಬಾಬಾಸಾಹೇಬರ ಬಯಕೆಯ ಸಮೃದ್ಧ ಭಾರತದ ನಿರ್ಮಾಣಕ್ಕೆ ನಾವೆಲ್ಲರೂ ಒಗ್ಗಟ್ಟಾಗಿ ಸಂವಿಧಾನವನ್ನು ರಕ್ಷಿಸುವ ಕೆಲಸವನ್ನು ಮಾಡಬೇಕು ಎಂದು ಸಚಿವರು ನುಡಿದರು.

ಇದೇ‌ ವೇಳೆ ಹೆಚ್.ಸಿ.ಮಹದೇವಪ್ಪ ಮತ್ತು ಪ್ರಿಯಾಂಕ್ ಖರ್ಗೆ ಅವರನ್ನು ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ವಿವಿಧ ಸಾಧಕರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಡಾ.ಡಿ.ತಿಮ್ಮಯ್ಯ, ಸಂಸದ ಸುನೀಲ್ ಬೋಸ್, ಶಾಸಕರಾದ ದರ್ಶನ ಧ್ರುವನಾರಾಯಣ, ಹೆಚ್.ಎಂ.ಗಣೇಶ್ ಪ್ರಸಾದ್, ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮುಂತಾದವರು ಉಪಸ್ಥಿತರಿದ್ದರು.