ಸಿಎಂ ಸ್ಥಾನದ ಕಚ್ಚಾಟದಿಂದ ಆಡಳಿತ ಯಂತ್ರ ನಿಷ್ಕ್ರಿಯ:ಅಶೋಕ್ ಟೀಕೆ

ಬೆಂಗಳೂರು: ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದಾಗಿ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಆರೋಪಿಸಿದ್ದಾರೆ.

ಶಾಸಕರ ಕಚೇರಿ ಮುಂಭಾಗ ಆಯೋಜಿಸಿದ್ದ ವಂದೇ ಮಾತರಂ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕೂಡಲೇ ಕಾಂಗ್ರೆಸ್‌ ಹೈಕಮಾಂಡ್‌ ಯಾರು ಮುಖ್ಯಮಂತ್ರಿ ಯಾರು ಎಂಬುದನ್ನು ಸ್ಪಷ್ಟವಾಗಿ ತಿಳಿಸಬೇಕು ಎಂದು ಒತ್ತಾಯಿಸಿದರು.

ಡಿ.ಕೆ.ಶಿವಕುಮಾರ್‌ ಅವರನ್ನು ಸಿಎಂ ಪದವಿಯಲ್ಲಿ ಕೂರಿಸಬೇಕು ಎಂದು ಅವರ ಪರ ಶಾಸಕರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟ ಅಂತಿಮ ಹಂತಕ್ಕೆ ಬಂದಿದೆ. ರಾಹುಲ್‌ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ತೀರ್ಮಾನ ನೀಡಿಲ್ಲದಿದ್ದರೆ ಸರ್ಕಾರ ನಡೆಯುವುದಿಲ್ಲ,ಅಧಿಕಾರಿಗಳು ಕೆಲಸ ಮಾಡುವುದಿಲ್ಲ, ಆಡಳಿತಯಂತ್ರ ಕೋಮಾದಲ್ಲಿದೆ ಎಂದು ಲೇವಡಿ ಮಾಡಿದರು.

ಸಾರ್ವಜನಿಕರು, ರೈತ ಸಮುದಾಯ, ವಿದ್ಯಾರ್ಥಿಗಳು ಎದುರಿಸುತ್ತಿರುವ ಹತ್ತಾರು ಸಮಸ್ಯೆಗಳನ್ನು ಬಗೆಹರಿಸಬೇಕೆಂಬ ಕಾಳಜಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಇಲ್ಲ,ಇತ್ತ
ಸಿದ್ದರಾಮಯ್ಯ‌ ಅವರನ್ನು ಉಳಿಸಲು ಒಂದು ಗ್ಯಾಂಗ್‌, ಇಳಿಸಲು ಮತ್ತೊಂದು ಗ್ಯಾಂಗ್‌ ಕೆಲಸ ಮಾಡುತ್ತಿದೆ. ಡಿ.ಕೆ.ಶಿವಕುಮಾರ್‌ ಸಿಎಂ ಆಗಬೇಕೆಂದು ಒಂದು ತಂಡ, ಆಗಬಾರದೆಂದು ಮತ್ತೊಂದು ತಂಡ ತಂತ್ರ- ಕುತಂತ್ರ ಮಾಡುತ್ತಿವೆ ಎಂದು ಅಶೋಕ್ ಟೇಕಾಪ್ರಹಾರ ನಡೆಸಿದರು.

ರಾಜ್ಯದಲ್ಲಿ ಅಪರಾಧ ಕೃತ್ಯಗಳು ಹೆಚ್ಚಿವೆ. ರೈತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ರಾಜಕೀಯ ಪರಿಸ್ಥಿತಿ ಅಧೋಗತಿಗೆ ಹೋಗಿದೆ. ಯಾರು ಮುಖ್ಯಮಂತ್ರಿ ಅಂತಾ ಗೊತ್ತಾಗಿಲ್ಲ, ರಾಹುಲ್‌ ಗಾಂಧಿ ವೀಕ್‌ ಲೀಡರ್‌, ಇಡೀ ರಾಜ್ಯದಲ್ಲಿ ವೀಕ್‌ ನಾಯಕತ್ವ ಎದ್ದು ಕಾಣುತ್ತಿದೆ. ಈ ಗೇಮ್‌ಗಳ ನಡುವೆ ರಾಜ್ಯದ ಜನರು ಪರಿತಪಿಸುತ್ತಿದ್ದಾರೆ, ಕೂಡಲೇ ಕಾಂಗ್ರೆಸ್‌ ಹೈಕಮಾಂಡ್‌ ಸಿಎಂ ಬಗ್ಗೆ ತನ್ನ ತೀರ್ಮಾನ ನೀಡಬೇಕು ಎಂದು ಒತ್ತಾಯಿಸಿ ದರು.

ಕಾಂಗ್ರೆಸ್‌ನ ಇಬ್ಬರು ಶಾಸಕರು ಜೈಲಲ್ಲಿದ್ದಾರೆ. ಅವರ ಮತಗಳನ್ನು ಕೇಳಲು ಡಿಕೆಶಿ ಜೈಲಿಗೆ ಹೋಗಿದ್ದಾರೆ. ಕಾಂಗ್ರೆಸ್‌ ಪಕ್ಷಕ್ಕೆ ಇಂತಹ ಪಾಡು ಬಂದಿರುವುದು ಶೋಚನೀಯ,
136 ಶಾಸಕರನ್ನು ನಿಯಂತ್ರಣದಲ್ಲಿಟ್ಟು
ಕೊಳ್ಳಲು ಸಾಧ್ಯವಾಗುತ್ತಿಲ್ಲ, ವಿರೋಧ ಪಕ್ಷದ ಕಾಟ ತಡೆದುಕೊಳ್ಳಲು ಆಗುತ್ತಿಲ್ಲ ಎಂದು ಹೇಳುವುದಾದರೆ, ನಮ್ಮ ವಿರೋಧ ಪಕ್ಷ ಬಲವಾಗಿದೆ ಎಂದರ್ಥ ಎಂದು ಅಶೋಕ ಟಾಂಗ್ ನೀಡಿದರು.