ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಆಡಳಿತ ಯಂತ್ರ ಕುಸಿದುಬಿದ್ದಿದ್ದು, ಭ್ರಷ್ಟಾಚಾರ ಮೇರೆ ಮೀರಿರುವುದಕ್ಕೆ ರಾಜ್ಯಾದ್ಯಂತ ವ್ಯಕ್ತವಾಗುತ್ತಿರುವ ಜನಾಕ್ರೋಶ ವೇ ಸಾಕ್ಷಿ ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ಒನ್ ಎಂದು ಸಿಎಂ ಅವರ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ನೀಡಿರುವ ಸರ್ಟಿಫಿಕೇಟ್ ಮತ್ತು 20 ತಿಂಗಳ ಬಳಿಕ ಸರ್ಕಾರ ಟೇಕಾಫ್ ಆಗುತ್ತಿದೆ ಎಂದು ಸಚಿವ ಡಿ.ಸುಧಾಕರ್ ನೀಡಿರುವ ಹೇಳಿಕೆ ಸರ್ಕಾರದ ಕಾರ್ಯವೈಖರಿಗೆ ಕನ್ನಡಿ ಹಿಡಿದಿವೆ ಎಂದು ಟೀಕಿಸಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ಸರ್ಕಾರದ ಬಗ್ಗೆ ರಾಜ್ಯಾದ್ಯಂತ ಜನರಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ನಮ್ಮ ಪಕ್ಷದ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲ ಮತ್ತು ಭೇಟಿ ನೀಡುತ್ತಿರುವ ಜಿಲ್ಲೆಗಳಲ್ಲಿ ಜನರು ವ್ಯಕ್ತಪಡಿಸುತ್ತಿರುವ ಅನಿಸಿಕೆಗಳು ಇದಕ್ಕೆ ಪೂರಕವಾಗಿವೆ ಎಂದು ಹೇಳಿದ್ದಾರೆ.
ಇದೊಂದು ವಂಚಕ ಸರ್ಕಾರ,ಕೆಟ್ಟ ಆಡಳಿತ ನೀಡುತ್ತಿದೆ. ಅದನ್ನು ಮರೆಮಾಚಲು ನಡೆಸಿದ ಕಸರತ್ತು ವಿಫಲವಾಗಿವೆ. 20 ತಿಂಗಳಲ್ಲಿ ಸಿದ್ದರಾಮಯ್ಯ ಸರ್ಕಾರದ ಬಣ್ಣ ಬಯಲಾಗಿದೆ. ಅವೈಜ್ಞಾನಿಕ ಗ್ಯಾರಂಟಿ ಯೋಜನೆ ಜಾರಿಯಿಂದ ಬೊಕ್ಕಸ ಬರಿದಾಗಿ, ಸರ್ಕಾರ ದಿವಾಳಿಯಾಗಿದೆ. ಒಂದೇ ಒಂದು ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನ ಆಗುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಸಿಎಂ ಮತ್ತು ಸಚಿವರು ಎಲ್ಲಿಯೂ ಪ್ರವಾಸ ಮಾಡುತ್ತಿಲ್ಲ,ಭೇಟಿ ನೀಡಿದ ಕಡೆ ಜನರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಬೆಂಗಳೂರಿನಲ್ಲಿ ಕುಳಿತು ಕಾಲಾಹರಣ ಮಾಡುತ್ತಿದ್ದಾರೆ, ಯಾವ ಕಚೇರಿಗೆ ಹೋದರು ಲಂಚದ ಹಾವಳಿಯಿಂದ ಜನ ಹೈರಾಣಾ ಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಈ ವಾಸ್ತವ ಸಂಗತಿಯನ್ನು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರೇ ಹಾದಿ ಬೀದಿಗಳಲ್ಲಿ ಟೀಕಿಸುತ್ತಿದ್ದಾರೆ. ಹೆಚ್ಚು ದಿನ ಸುಳ್ಳು ಹೇಳಿ ಕಾಲಾಹರಣ ಮಾಡಲು ಆಗುವುದಿಲ್ಲ. ಹೀಗಾಗಿ ಆ ಸತ್ಯವನ್ನು ರಾಯರೆಡ್ಡಿ ಮತ್ತು ಸಚಿವ ಡಿ. ಸುಧಾಕರ್ ಬಹಿರಂಗವಾಗಿ ಹೇಳಿದ್ದಾರೆ. ಇದಕ್ಕಿಂತ ಈ ಸರ್ಕಾರಕ್ಕೆ ದೊಡ್ಡ ಸರ್ಟಿಫಿಕೇಟ್ ಬೇಕೆ ಎಂದು ಅಶೋಕ್ ಲೇವಡಿ ಮಾಡಿದ್ದಾರೆ.
ಕೆಲ ತಿಂಗಳ ಹಿಂದೆ ವಿಧಾನಸೌಧದ ಮುಂದೆ ದಿನವಿಡೀ ಜನತಾ ದರ್ಶನ ಕಾರ್ಯಕ್ರಮ ನಡೆಸಿದ್ದ ಸಿದ್ದರಾಮಯ್ಯನವರು, ಇನ್ನು ಮುಂದೆ ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿ ತಿಂಗಳು ಕಡ್ಡಾಯವಾಗಿ ಜಿಲ್ಲಾ ಕೇಂದ್ರಗಳಲ್ಲಿ ಜನತಾ ದರ್ಶನ ಮಾಡಬೇಕು ಎಂದು ಸೂಚನೆ ನೀಡಿದ್ದರು. ಸಿಎಂ ಮಾತಿಗೆ ಯಾವ ಸಚಿವರು ಕಿವಿಗಿಡಲಿಲ್ಲ. ಎಲ್ಲಿಯೂ ಜನತಾ ದರ್ಶನ ನಡೆಯಲಿಲ್ಲ. ಇದು ಸರ್ಕಾರದ ಕಾರ್ಯವೈಖರಿಗೆ ಒಂದು ಸಣ್ಣ ಉದಾಹರಣೆ ಎಂದು ಅಶೋಕ್ ಟೀಕಿಸಿದ್ದಾರೆ.
ಸಿದ್ದರಾಮಯ್ಯನವರು ಇನ್ನೆಷ್ಟು ದಿನ ಇರುತ್ತಾರೆ,ಬದಲಾಗುತ್ತಾರೆ ಎಂಬ ಉಡಾಫೆ ಸಚಿವರಲ್ಲಿದೆ. ಇದರಿಂದ ಜನರ ಅಹವಾಲು ಕೇಳುವವರು ದಿಕ್ಕಿಲ್ಲದಂತಾಗಿದೆ. ಅಧಿಕಾರಿಗಳು ಕೂಡ ಮಾತು ಕೇಳುತ್ತಿಲ್ಲ, ಕಚೇರಿಗೂ ಬರುತ್ತಿಲ್ಲ. ಹೀಗಾಗಿ ಆಡಳಿತ ಹಳಿ ತಪ್ಪಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗ ವಿಧಾನಸೌಧದ ಆಡಳಿತ ಕೇರಳದ ವಯನಾಡಿಗೆ ಶಿಫ್ಟ್ ಆಗಿದೆ. ಅಲ್ಲಿಂದ ಬರುವ ಸೂಚನೆಯನ್ನು ಇಲ್ಲಿ ಪಾಲಿಸಲಾಗುತ್ತಿದೆ. ಹುಲಿ ಯೋಜನೆ ಪ್ರದೇಶದ ಹಿಮವದ್ ಗೋಪಾಲಸ್ವಾಮಿ ಬೆಟ್ಟ ಪ್ರದೇಶದಲ್ಲಿ ಮಲಯಾಳಂ ಚಲನಚಿತ್ರ ಚಿತ್ರೀಕರಣ ಮಾಡಲು ಅವಕಾಶ ನೀಡಿರುವುದೇ ಇದಕ್ಕೆ ಸಾಕ್ಷಿ. ನಿರ್ಬಂಧಿತ ಪ್ರದೇಶದಲ್ಲಿ ಶೂಟಿಂಗ್ ಮಾಡಲು ಸ್ಥಳೀಯ ಅಧಿಕಾರಿಗಳು ಅವಕಾಶ ನೀಡಿಲ್ಲ,ಸರ್ಕಾರದ ಮಟ್ಟದಲ್ಲೇ ಶೂಟಿಂಗ್ ನಡೆಸಲು ಅವಕಾಶ ನೀಡಲಾಗಿದೆ ಎಂದು ಸ್ಥಳೀಯ ಎಸಿಎಫ್ ಹೇಳಿಕೆ ನೀಡಿದ್ದಾರೆ. ಸರ್ಕಾರದ ಮಟ್ಟದಲ್ಲಿ ಅಂದರೆ ಯಾರು, ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕಿದೆ ಎಂದು ಅಶೋಕ್ ಒತ್ತಾಯಿಸಿದ್ದಾರೆ.