ಬೆಂಗಳೂರು, ಮೇ 2: ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದಾಗಲೇ ಕಾಂಗ್ರೆಸ್ ಸರ್ಕಾರ ಕಠಿಣ ಕ್ರಮ ತೆಗೆದುಕೊಂಡಿದ್ದರೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಆಗುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯಾಗಿ ಮಂಗಳೂರಿನಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ, ಮಂಗಳೂರು ಬಂದ್ ಮಾಡಲಾಗಿದೆ ಎಂದು ತಿಳಿಸಿದರು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ 2013 ರಲ್ಲಿ ಅಧಿಕಾರದಲ್ಲಿದ್ದಾಗ 36 ಹಿಂದೂ ಕಾರ್ಯಕರ್ತರ ಹತ್ಯೆಯಾಗಿತ್ತು. ಪಾಪ್ಯುಲರ್ ಫ್ರಂಟ್ ಮೊದಲಾದ ಸಂಘಟನೆಗಳು ಇಂತಹ ಕೃತ್ಯಗಳನ್ನು ಮಾಡಿವೆ, ಪಾಕಿಸ್ತಾನ ಜಿಂದಾಬಾದ್ ಎಂದಾಗಲೇ ಕಠಿಣ ಕ್ರಮ ಕೈಗೊಂಡಿದ್ದರೆ ಇಂತಹ ಕೃತ್ಯ ನಡೆಯುತ್ತಿರಲಿಲ್ಲ ಎಂದು ಗರಂ ಆಗಿ ನುಡಿದರು.
ಸಿಎಂ ಸಿದ್ದರಾಮಯ್ಯ ಯುದ್ಧ ಬೇಡ ಎನ್ನುತ್ತಾರೆ. ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುವ ದೇಶದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ,ಅಂತಹ ದೇಶದ್ರೋಹಿಗಳನ್ನು ಗುಂಡಿಕ್ಕುವ ಕಾನೂನು ಬಂದರೆ ಮಾತ್ರ ದೇಶ ಸುರಕ್ಷಿತವಾಗಿರುತ್ತದೆ ಎಂದು ಹೇಳಿದರು.
ಇನ್ನೆಷ್ಟು ಹಿಂದೂ ಕಾರ್ಯಕರ್ತರು ಬಲಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಬಯಸುತ್ತಾರೋ ಗೊತ್ತಿಲ್ಲ. ಲವ್ ಜಿಹಾದ್ ಆದಾಗ, ಪಾಕಿಸ್ತಾನ ಜಿಂದಾಬಾದ್ ಎಂದಾಗಲೇ ಕಠಿಣ ಕ್ರಮ ಕೈಗೊಂಡಿದ್ದರೆ ಇಂತಹ ಘಟನೆ ನಡೆಯುತ್ತಿರಲಿಲ್ಲ. ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದರ ಬಗ್ಗೆ ಸರ್ಕಾರಕ್ಕೆ ಎಚ್ಚರಿಕೆ ನೀಡಲಿದ್ದೇವೆ ಎಂದರು.
ಸುಹಾಸ್ ಎಲ್ಲೆಲ್ಲಿ ಓಡಾಡುತ್ತಾನೆ, ಆತನ ಬಳಿ ಆಯುಧ ಇಲ್ಲವೆಂದು ತಿಳಿದಿದ್ದು ಹೇಗೆ, ಈ ವಿಚಾರದಲ್ಲಿ ಪೊಲೀಸ್ ಇಲಾಖೆಯಿಂದಲೇ ಮಾಹಿತಿ ಸೋರಿಕೆಯಾಗಿರಬಹುದೇನೊ ಎಂದು ಅನುಮಾನ ವ್ಯಕ್ತಪಡಿಸಿದರು.
ಇಂತಹ ಘಟನೆ ನಡೆದಾಗ ಸಿಎಂ ಸಿದ್ದರಾಮಯ್ಯ ಸಬೂಬು ಹೇಳುವ ನಡೆ ತೋರುತ್ತಾರೆ. ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಪಾಕಿಸ್ತಾನ ಜಿಂದಾಬಾದ್ ಎಂದರೂ ಏನೂ ಅನ್ನಿಸುವುದಿಲ್ಲ. ಅವರದ್ದು ಅಂತಹ ಎಮ್ಮೆ ಚರ್ಮ ಎಂದು ಟೀಕಿಸಿದರು.
ಪೊಲೀಸ್ ಇಲಾಖೆ ಕಾಂಗ್ರೆಸ್ ಪಕ್ಷದ ಇಲಾಖೆಯಾಗಿದೆ. ಸಿಎಂ ಸಿದ್ದರಾಮಯ್ಯನವರೇ ಪೊಲೀಸರಿಗೆ ಹೊಡೆಯಲು ಮುಂದಾಗುತ್ತಾರೆ ಎಂದು ಅಶೋಕ್ ಟೀಕಾಪ್ರಹಾರ ನಡೆಸಿದರು.
