ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಹನ್ನೆರಡು ವರ್ಷಗಳ ಆಡಳಿತಾವಧಿಯಲ್ಲಿ ಕೃಷಿಕರ ಆರ್ಥಿಕ ಪರಿಸ್ಥಿತಿ ಗಣನೀಯ ಮಟ್ಟದಲ್ಲಿ ಸುಧಾರಿಸಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.
ಬೆಂಗಳೂರಿನ ಹೆಸರಘಟ್ಟದ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ಯಲ್ಲಿ ‘ಪಿಎಂ-ಕಿಸಾನ್’ ಯೋಜನೆಯ 23ನೇ ಕಂತಿನ ಹಣವನ್ನು ರೈತರ ಬ್ಯಾಂಕ್ ಖಾತೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವರ್ಗಾವಣೆ ಮಾಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಅದಕ್ಕೆ ಕಿಸಾನ್ ಸಮ್ಮಾನ ಯೋಜನೆಯ ಕೊಡುಗೆಯೂ ಇದೆ ಎಂದು ತಿಳಿಸಿದರು.
ಪಿಎಂ ಕಿಸಾನ್ ಯೋಜನೆಯ ಮೂಲಕ ಪ್ರಧಾನಿಗಳು ರೈತ ಸಮುದಾಯಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಈ ಯೋಜನೆಯ 23ನೇ ಕಂತಿನ 18,800 ಕೋಟಿ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಬಿತ್ತನೆ ಸಂದರ್ಭದಲ್ಲಿ ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಖರೀದಿಗೆ ಈ ಹಣವು ನೆರವಿಗೆ ಬರುತ್ತದೆ ಎಂದು ಹೇಳಿದರು.
ಯಾವುದೇ ರೀತಿಯ ಮಧ್ಯವರ್ತಿಗಳು ಇಲ್ಲದ, ಸೋರಿಕೆ ಇಲ್ಲದ ರೀತಿಯಲ್ಲಿ ಹಣ ರೈತರ ಖಾತೆಗಳಿಗೆ ನೇರ ವರ್ಗಾವಣೆ ಆಗಿದೆ. 9.44 ಕೋಟಿ ರೈತರಿಗೆ ತಲಾ 2,000 ಜಮೆ ಆಗಿದೆ ಎಂದು ಕುಮಾರಸ್ವಾಮಿ ತಿಳಿಸಿದರು.
ದೇಶಕ್ಕೆ ಅನ್ನ ನೀಡುವ ಅನ್ನದಾತನ ಸಬಲೀಕರಣ ಆಗದಿದ್ದರೆ ಅಭಿವೃದ್ಧಿಗೆ ಅರ್ಥವಿರುವುದಿಲ್ಲ. ಕಳೆದ ಹನ್ನೆರಡು ವರ್ಷಗಳಲ್ಲಿ ಇಂತಹ ವಿರೋಧಾಭಾಸಗಳಿಗೆ ತಿಲಾಂಜಲಿ ಇಟ್ಟು ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಕಲ್ಯಾಣಕ್ಕಾಗಿ ದುಡಿಯುತ್ತಿದ್ದಾರೆ ಎಂದು ನುಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದಿಂದ ಹಣವನ್ನು ವರ್ಗಾವಣೆ ಮಾಡಿದ್ದಾರೆ. ರಾಜ್ಯದಲ್ಲಿ ಹೆಸರಘಟ್ಟದ ತೋಟಗಾರಿಕೆ ಸಂಸ್ಥೆಯಲ್ಲಿ ಈ ಕಾರ್ಯಕ್ರಮ ನಡೆಯುತ್ತಿರುವುದು ಅರ್ಥಪೂರ್ಣ. ಅನೇಕ ತಳಿಗಳ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಿರುವ ಈ ಸಂಸ್ಥೆ ಜಾಗತಿಕವಾಗಿ ಹೆಸರು ಮಾಡಿದೆ. ಇಲ್ಲಿನ ತಳಿಗಳನ್ನು ಸಾಮಾನ್ಯ ರೈತರು ಕೂಡ ಬೆಳೆಯಬೇಕು. ಆ ಮೂಲಕ ಅನ್ನದಾತರು ಹೆಚ್ಚೆಚ್ಚು ಲಾಭ ಗಳಿಸಬೇಕು ಎಂದು ಕುಮಾರಸ್ವಾಮಿ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಭಾರತೀಯ ತೋಟರಿಕಾ ಸಂಶೋಧನಾ ಸಂಸ್ಥೆಯ ನಿರ್ದೇಶಕ ಟಿ.ಕೆ. ಬೆಹೆರಾ, ಸಂಸ್ಥೆಯ ಯೋಜನಾ ನಿರ್ದೇಶಕ ಪ್ರಕಾಶ್ ಪಾಟೀಲ ಸೇರಿದಂತೆ ಅನೇಕ ಕೃಷಿ ವಿಜ್ಞಾನಿಗಳು, ರೈತರು, ಅಧಿಕಾರಿಗಳು ಉಪಸ್ತಿತರಿದ್ದರು.
