ಒಂದು ಲೇಯರ್‌ ಡಾಂಬರೀಕರಣಕ್ಕೆ 4-5 ಸಾವಿರ ಕೋಟಿ ಎಲ್ಲಿಂದ ತರುತ್ತಾರೆ: ಅಶೋಕ

Spread the love

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿಯನ್ನು ಮರೆತಿದೆ. ಸಿಎಂ ಸಿದ್ದರಾಮಯ್ಯ ಒಂದು ಲೇಯರ್‌ ಡಾಂಬರೀಕರಣಕ್ಕೆ ಸೂಚನೆ ನೀಡಿದ್ದಾರೆ,ಸರಿ ಆದರೆ ಅದಕ್ಕೆ ಬೇಕಾದ 4-5 ಸಾವಿರ ಕೋಟಿ ರೂ. ಎಲ್ಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆಗುಂಡಿಯಿಂದಾಗಿ ಸುಮಾರು ಹನ್ನೆರಡು ಜನರು ಸತ್ತಿದ್ದು,ರಸ್ತೆಗಳು ಮೃತ್ಯುಕೂಪವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ ಕೂಲಿಂಗ್‌ ಗ್ಲಾಸ್‌ ಹಾಕಿಕೊಂಡು ನಗರ ಪ್ರದಕ್ಷಿಣೆ ಮಾಡಿದರೆ ರಸ್ತೆಗುಂಡಿ ಕಾಣುವುದಿಲ್ಲ. ತೆರಿಗೆ ಪಾವತಿಸಲ್ಲ, ರಸ್ತೆಗುಂಡಿ ನಾವೇ ಮುಚ್ಚುತ್ತೇವೆ ಎಂದು ಜನರು ಹೇಳುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಇಡೀ ರಾಜ್ಯದ ರಸ್ತೆಗಳಲ್ಲಿ ಎಷ್ಟು ಗುಂಡಿ ಇದೆ ಎಂದು ಸರ್ಕಾರ ತಿಳಿಸಿದರೆ, ಗಿನ್ನೆಸ್‌ ದಾಖಲೆಗೆ ಕಳುಹಿಸಬಹುದು ಎಂದು ವ್ಯಂಗ್ಯ ಸಲಹೆ ನೀಡಿದರು.

ಒಂದು ಲೇಯರ್‌ ಡಾಂಬರೀಕರಣ ಮಾಡಲು ಸುಮಾರು 4-5 ಸಾವಿರ ಕೋಟಿ ರೂ. ಬೇಕಾಗುತ್ತದೆ. ಗ್ರಂಥಪಾಲಕರಿಗೆ, ಅಂಗನವಾಡಿ ಕಾರ್ಯಕರ್ತರಿಗೆ ಸಂಬಳವೇ ಇಲ್ಲ. ಇನ್ನು ಇಷ್ಟೊಂದು ಹಣ ಎಲ್ಲಿದೆ ಎಂದು ಕಾರವಾಗಿ ಅಶೋಕದ ಪ್ರಶ್ನಿಸಿದರು.

ಬಿಬಿಎಂಪಿ ಅಸ್ತಿತ್ವದಲ್ಲಿಲ್ಲದೆ ರಸ್ತೆ ಡಾಂಬರೀಕರಣಕ್ಕೆ ಟೆಂಡರ್‌ ಆಗುತ್ತಿಲ್ಲ. ಆದ್ದರಿಂದ ಬೆಂಗಳೂರು ಗ್ರೇಟರ್‌ ಪ್ರಾಧಿಕಾರವನ್ನು ಮುಂದೆ ನಾವು ರದ್ದು ಮಾಡುತ್ತೇವೆ ಎಂದು ಹೇಳಿದರು.

ನಗರದ ಶ್ವಾಸಕೋಶದಂತಿರುವ ಲಾಲ್‌ಬಾಗ್‌ನಲ್ಲಿ ಐದಾರು ಎಕರೆ ಪಡೆದು ಸುರಂಗ ರಸ್ತೆ ನಿರ್ಮಿಸಲಾಗುತ್ತದೆ. ನಗರಕ್ಕೆ ಹಸಿರು ನೀಡುವ ಇಂತಹ ಉದ್ಯಾನದಲ್ಲಿ ಸುರಂಗ ಕೊರೆಯಬಾರದು. ಈ ಯೋಜನೆಯಿಂದ ಅಂತರ್ಜಲಕ್ಕೆ ಧಕ್ಕೆಯಾಗುತ್ತದೆ. ಕೆಂಪೇಗೌಡ ಗೋಪುರ ಲಾಲ್‌ಬಾಗ್‌ನಲ್ಲಿದ್ದು, ಅದನ್ನೂ ಸರ್ಕಾರ ಒಡೆದುಹಾಕಬಹುದು. ವಿಜ್ಞಾನಿಗಳು, ಪರಿಸರವಾದಿಗಳು ಏನು ಹೇಳಿದ್ದಾರೆ ಎಂದು ಸರ್ಕಾರ ನೋಡಬೇಕು ಎಂದು ಆಗ್ರಹಿಸಿದರು.

ಎತ್ತಿನಹೊಳೆ ಯೋಜನೆಯೇ ಇನ್ನೂ ಅನುಷ್ಠಾನವಾಗಿಲ್ಲ. ಸುರಂಗ ರಸ್ತೆ ಯೋಜನೆ ಕೂಡ ಅದೇ ರೀತಿಯಾಗಲಿದೆ. ಎಷ್ಟೇ ಅನುದಾನ ಹೆಚ್ಚಿದರೂ ಈ ಯೋಜನೆ ಜಾರಿಯಾಗಲು ಸಾಧ್ಯವಿಲ್ಲ. ಮೆಟ್ರೋ ಯೋಜನೆಯನ್ನು ಇದೇ ಹಣದಲ್ಲಿ ವಿಸ್ತರಣೆ ಮಾಡಬಹುದು. ಈ ಯೋಜನೆ ಮಾಡಿ ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌ ಆಗುವುದು ಬೇಡ. ಇದರ ವಿರುದ್ಧ ಬಿಜೆಪಿ ಶಾಸಕರೊಂದಿಗೆ ಹೋರಾಟ ಮಾಡಲಾಗುವುದು ಎಂದು ಅಶೋಕ ಎಚ್ಚರಿಸಿದರು.

ಈಗಾಗಲೇ ನಿವೇಶನ ಪಡೆದವರಿಗೆ ಎ ಖಾತಾಗೆ ವರ್ಗಾವಣೆ ಮಾಡಿಸಲು ಹಣ ಪಾವತಿಸಬೇಕು. ಇದನ್ನು ಕ್ರಾಂತಿ ಎನ್ನುತ್ತಿದ್ದಾರೆ. ಆದ್ದರಿಂದ ಜನರು ಎಚ್ಚರಿಕೆಯಿಂದ ಇರಬೇಕು. ಇದು ಹಣ ವಸೂಲಿ ಮಾಡುವ ಸ್ಕೀಮ್‌ ಎಂದು ಲೇವಡಿ ಮಾಡಿದರು.

ನವೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂದು ನಾನು ಹೇಳಿದ್ದಾಗ ಟೀಕೆ ಮಾಡಿದ್ದರು. ಈಗ ಕಾಂಗ್ರೆಸ್‌ ನಾಯಕರೇ ಹೇಳುತ್ತಿದ್ದಾರೆ. ಸಿಎಂ ಬದಲಾವಣೆ ಖಚಿತ ಎಂದು ಅಶೋಕ್ ಭವಿಷ್ಯ ನುಡಿದರು.