ಬೆಳಗಾವಿ ಅಧಿವೇಶದಲ್ಲಿ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸುತ್ತೇವೆ-ಸಿಎಂ

ಬೆಂಗಳೂರು: ಬೆಳಗಾವಿ ಅಧಿವೇಶದಲ್ಲಿ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ‌ ಸಿಎಂ,ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅಧಿವೇಶನ ಕರೆಯಲಾಗಿದೆ ಎಂದು ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಬೆಳಗಿನ ಉಪಹಾರಕ್ಕಾಗಿ ಅವರ ನಿವಾಸಕ್ಕೆ ಭೇಟಿ ನೀಡಿದೆ.ನಮ್ಮ ಪಕ್ಷದ ವಿಚಾರಗಳನ್ನು ಈ ವೇಳೆ ಚರ್ಚಿಸಲಾಗಿದೆ. ಡಿಸೆಂಬರ್ 8 ರಂದು ಬೆಳಗಾವಿ ಅಧಿವೇಶನ ಪ್ರಾರಂಭವಾಗಲಿದ್ದು, ವಿಪಕ್ಷಗಳನ್ನು ಎದುರಿಸಲು ಸರ್ಕಾರದ ರಣನೀತಿಗಳ ಬಗ್ಗೆ ಚರ್ಚಿಸಲಾಯಿತು ಎಂದು ‌ತಿಳಿಸಿದರು.

ವಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿರುವ ಮಾಹಿತಿ ಪತ್ರಿಕೆಗಳಿಂದ ತಿಳಿದು ಬಂದಿದೆ.ಅಲ್ಲದೇ ವಿಪಕ್ಷಗಳು ಕೇಳಬಹುದಾದ ಪ್ರಶ್ನೆಗಳನ್ನು ಸಮರ್ಥವಾಗಿ ಸರ್ಕಾರ ಎದುರಿಸಲಿದೆ. ಕಬ್ಬು, ಮೆಕ್ಕೆಜೋಳದ ಸಮಸ್ಯೆ ಸೇರಿದಂತೆ ರಾಜ್ಯದ ಸಮಸ್ಯೆಗಳಿಗೆ ಸಮರ್ಪಕ ಪರಿಹಾರಗಳನ್ನು ಕಂಡುಕೊಳ್ಳಲು ಈ ಅಧಿವೇಶನದಲ್ಲಿ ಪ್ರಯತ್ನಿಸಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದರು.

ನಮ್ಮ ಸರ್ಕಾರ ರೈತಪರ ನಿಲುವನ್ನು ಹೊಂದಿದೆ. ಮೆಕ್ಕೆ ಜೋಳ ಖರೀದಿ ಬಗ್ಗೆ ರೈತರು, ಡಿಸ್ಟಲರಿ ಕಾರ್ಖಾನೆ ಮಾಲೀಕರ ಜೊತೆ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರ ಮೆಕ್ಕೆಜೋಳಕ್ಕೆ 2,400 ರೂ ಬೆಂಬಲ ಬೆಲೆ ನಿಗದಿಪಡಿಸಿದೆ ಆದರೆ ಮಾರುಕಟ್ಟೆ ದರ 1900 ರಿಂದ 2100 ರೂ.ವೆರೆಗೆ ಇರುವುದರಿಂದ ಡಿಸ್ಟಲರಿ ಕಂಪನಿಗಳು , ಎಂಎಸ್ ಪಿ ದರದಲ್ಲಿಯೇ ರೈತರಿಂದ ಮೆಕ್ಕೆಜೋಳವನ್ನು ಖರೀದಿಸಬೇಕೆಂದು ಮನವೊಲಿಸಲಾಗುತ್ತಿದೆ. ಅಂತೆಯೇ ಪೌಲ್ಟ್ರಿ ಫಾರಂಗಳು , ಪಶು ಆಹಾರಗಳಿಗಾಗಿ ಮೆಕ್ಕೆ ಜೋಳವನ್ನು ಬಳಸಲಾಗುತ್ತದೆ ಎಂದು ಸಿಎಂ‌ ತಿಳಿಸಿದರು.

ಹೈ ಕಮಾಂಡ್ ಸೂಚನೆಯಂತೆ ನಡೆದುಕೊಳ್ಳುವುದಾಗಿ ಮೊನ್ನೆ ಮತ್ತು ಇಂದೂ ಕೂಡ ಚರ್ಚಿಸಲಾಗಿದೆ,
ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಒಗ್ಗಟ್ಟಿನಿಂದ ಇದ್ದೇವೆ ಎಂದು ಸಿದ್ದರಾಮಯ್ಯ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ. 2028 ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ ಎಂದು ಮುಖ್ಯ ಮಂತ್ರಿಗಳು‌ ಸ್ಪಷ್ಟವಾಗಿ ಹೇಳಿದರು.