ಬೆಂಗಳೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಜಾತಿಗಳ ನಡುವೆ ಕಂದಕ ತರಲು ಗಣತಿ ಮಾಡಿಸಿ,ಮತ್ತೆ ಹೊಸ ಗಣತಿ ಮಾಡಿಸುತ್ತಾರೆಂದರೆ ಈ ಹಿಂದಿನ ಗಣತಿ ಬೋಗಸ್ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು.
ಸುದ್ದಿಗಾರರೊರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರ ಸರ್ಕಾರ ಕಾಟಾಚಾರಕ್ಕೆ ಜಾತಿ ಒಳಮೀಸಲು ಸಮೀಕ್ಷೆ ಮಾಡಿದೆ. ಈ ಹಿಂದಿನ ಜಾತಿ ಗಣತಿ ಬಿಡುಗಡೆಗೆ ಹತ್ತು ವರ್ಷವಾಗಿದೆ. ಆದರೆ ಈಗ ಮಾಡಿದ ಒಳಮೀಸಲು ಸಮೀಕ್ಷೆ ಕೇವಲ 15 ದಿನಗಳಲ್ಲಿ ಮುಗಿದಿದೆ. ಕೇಂದ್ರ ಸರ್ಕಾರ ನಡೆಸುವ ಸಮೀಕ್ಷೆಗೆ ಎಲ್ಲ ಕಡೆ ಮಾನ್ಯತೆ ಇದೆ. ಆದರೆ ರಾಜ್ಯ ಸರ್ಕಾರ ಮಾಡುವ ಸಮೀಕ್ಷೆಗೆ ಬೆಲೆ ಇಲ್ಲ. ಜಾತಿಗಳ ನಡುವೆ ಕಂದಕ ತಂದು ಬೇಳೆ ಬೇಯಿಸಿಕೊಳ್ಳಲು ಹುನ್ನಾರ ಮಾಡಿದ್ದಾರೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರ ಮರಳಿ ಜಾತಿ ಗಣತಿ ಮಾಡಲಿದೆ ಎಂದರೆ ಈ ಹಿಂದಿನ ಗಣತಿ ಬೋಗಸ್ ಎಂದರ್ಥ. ಇದರಿಂದಾಗಿ ಸರ್ಕಾರಕ್ಕೆ ಮುಖಭಂಗವಾಗಿದೆ. ಕೇಂದ್ರ ಸರ್ಕಾರ ನಡೆಸುವ ಗಣತಿಗೆ ರಾಜ್ಯ ಸರ್ಕಾರ ಸಹಕಾರ ನೀಡಲಿ ಎಂದು ಅಶೋಕ್ ತಿಳಿಸಿದರು.
ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾಗಿರುವುದು ಸ್ವಾಗತಾರ್ಹ. ಶಾಸಕರ ಮನೆ ಸುಟ್ಟಿರುವ ಘಟನೆ ಇನ್ನೂ ಕಣ್ಣ ಮುಂದಿದೆ. ಪಿಎಫ್ ಐ ಸೇರಿದಂತೆ ಪಾಕಿಸ್ತಾನದ ಪರವಾಗಿರುವವರು ಅನೇಕರು ಇದರಲ್ಲಿ ಭಾಗಿಯಾಗಿದ್ದರು. ಅವರೆಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು ಎಂದು ಪ್ರತಿಪಕ್ಷ ನಾಯಕ ಆಗ್ರಹಿಸಿದರು.