ಮೋದಿಯವರ ದೂರದೃಷ್ಟಿ; ರೈತಪರ ಆಲೋಚನೆಗೆ ಬಜೆಟ್ ಕೈಗನ್ನಡಿ:ಹೆಚ್ ಡಿ ಕೆ

Spread the love

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಹಾಗೂ ರೈತಪರ ಆಲೋಚನೆಗಳಿಗೆ 2025ನೇ ಸಾಲಿನ ಬಜೆಟ್ ಕೈಗನ್ನಡಿಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬಣ್ಣಿಸಿದ್ದಾರೆ.

ಕೇಂದ್ರ ಬಜೆಟ್‌ ಬಗ್ಗೆ ಪ್ರತಿಕ್ರಿಯಿಸಿರುವ ಅವರು,ಸಾವಯವ ಕೃಷಿಗೆ ಉತ್ತೇಜನ, ಕೃಷಿಯಲ್ಲಿ ಸುಸ್ಥಿರತೆಗೆ ಒತ್ತು, ಬೆಳೆ ತೆಗೆಯಲು ರೈತ ಮಾಡುತ್ತಿರುವ ವೆಚ್ಚವನ್ನು ತಗ್ಗಿಸುವ ನಿಟ್ಟಿನಲ್ಲಿ ಅಗತ್ಯ ಉಪಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ರೈತರು ಸಶಕ್ತಗೊಂಡು ಉತ್ತಮ ಆದಾಯ ಗಳಿಸುವ, ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವ ಮತ್ತು ಭವಿಷ್ಯದ ಸವಾಲುಗಳಿಗೆ ಭಾರತೀಯ ಕೃಷಿಯನ್ನು ಸಜ್ಜುಗೊಳಿಸುವ ಆಯವ್ಯಯ ಇದಾಗಿದೆ ಎಂದಿದ್ದಾರೆ.

ಪಿಎಂ ಧನ್ ಧಾನ್ಯ ಯೋಜನೆ ಭಾರತೀಯ ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಕ ಹೆಜ್ಜೆ. ದೇಶೀಯ ಕೃಷಿಗೆ ವಿಶ್ವದರ್ಜೆಯ ಮೂಲಸೌಕರ್ಯ, ಕೃಷಿ ಉತ್ಪನ್ನಗಳ ದಾಸ್ತಾನಿಗೆ ಅತ್ಯುತ್ತಮ ವ್ಯವಸ್ಥೆ, ರಫ್ತಿಗೆ ಉತ್ತೇಜನ, ರೈತರಿಗೆ ಹೆಚ್ಚು ಆದಾಯ ಮತ್ತು ಗ್ರಾಮ ಭಾರತಕ್ಕೆ ಬಲ ತಂದಿದೆ,ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚಳ ಹೈನುಗಾರರು, ಮೀನುಗಾರರು ಸೇರಿ ಎಲ್ಲಾ ಕೃಷಿಕರಿಗೆ ಸುಲಭ ಸಾಲ,
ಕೃಷಿ ತಂತ್ರಜ್ಞಾನ ಹಾಗೂ ಕೃಷಿ ಆಧಾರಿತ ಸ್ಟಾರ್ಟಪ್ಪ್ ಗಳ ಉತ್ತೇಜನಕ್ಕೆ 1 ಲಕ್ಷ ಕೋಟಿ ಮೀಸಲು,ಕೃತಕ ಬುದ್ಧಿಮತ್ತೆ ಬಳಕೆ ಹಾಗೂ ಅತ್ಯಾಧುನಿಕ ನೀರಾವರಿ ಸೌಲಭ್ಯಕ್ಕೆ ಆದ್ಯತೆ ನೀಡಲಾಗಿದೆ.

ಗ್ರಾಮೀಣ ಪ್ರದೇಶದಲ್ಲಿ ಕೃಷಿ ಮೂಲಸೌಕರ್ಯ ಉತ್ತಮಪಡಿಸಲು ಕ್ರಮ, ಅತ್ಯುತ್ತಮ ಶೀತಲೀಕರಣ ಕೇಂದ್ರಗಳ ಸ್ಥಾಪನೆ, ಸುಲಭ-ಪರಿಣಾಮಕಾರಿ ಸಂಪರ್ಕ ವ್ಯವಸ್ಥೆ, ಅತ್ಯುತ್ತಮ ಪೂರೈಕೆ ಸರಪಳಿ,
ಪಿಎಂ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ಇನ್ನೂ ಹೆಚ್ಚಿನ ರೈತರು. ಶೀಘ್ರಗತಿಯಲ್ಲಿ ವಿಮಾ ಸೌಲಭ್ಯ ಸಿಗುವಂತೆ ಮಾಡುವುದು ಹಾಗೂ ಅನ್ನದಾತನ ಸುರಕ್ಷತೆಗೆ ಅತಿಹೆಚ್ಚು ಒತ್ತು,ಸಹಜ ಹಾಗೂ ನಿಸರ್ಗಕ್ಕೆ ಪೂರಕವಾದ ಕೃಷಿಗೆ ಮನ್ನಣೆ ನೀಡಿ ರೈತರಿಗೆ ಎಲ್ಲಾ ರೀತಿಯ ಉತ್ತೇಜನ ನೀಡಲಾಗಿದೆ.

ಪ್ರಧಾನಿಗಳ ಕನಸು ವಿಕಸಿತಭಾರತ 2047 ಸಾಕಾರಕ್ಕೆ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಆಯವ್ಯಯ ಮಹತ್ವದ ಕೊಡುಗೆ ನೀಡಲಿದೆ. ಭವಿಷ್ಯದಲ್ಲಿ ಭಾರತೀಯ ಕೃಷಿ ಕ್ಷೇತ್ರ ಮತ್ತಷ್ಟು ಸಮೃದ್ಧಿಯಾಗಲಿದೆ ಎಂದು ಹೆಚ್ ಡಿ.ಕುಮಾರಸ್ವಾಮಿ ಬಣ್ಣಿಸಿದ್ದಾರೆ.