ಪ್ರಿಯಾಂಕ್ ಖರ್ಗೆ ವಿರುದ್ಧ ಛಲವಾದಿ ನಾರಾಯಣಸ್ವಾಮಿ ದೂರು

Spread the love

ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ.

ರಾಜ್ಯಪಾಲರಿಗೆ ದೂರು ಸಲ್ಲಿಸುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‍ಗೆ ಕೆಐಎಡಿಬಿಯಿಂದ ಐದು ಎಕರೆ ಜಾಗ ಪಡೆದುಕೊಂಡಿದ್ದಾರೆ. ಸಚಿವರಾಗಿ ಪ್ರಿಯಾಂಕ್ ಖರ್ಗೆ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಕೈಗಾರಿಕಾ ನಿವೇಶನ ಪಡೆಯುವ ಹಕ್ಕು ಎಲ್ಲರಿಗೂ ಇದೆ. ಆದರೆ, ಸಿಎ ಸೈಟ್ ಪಡೆಯಲು ಕೆಲವು ಕಾನೂನುಗಳಿವೆ. ಸಾಮಾಜಿಕ ಚಟುವಟಿಕೆ, ರಂಗಮಂದಿರ, ಆಸ್ಪತ್ರೆ- ಹೀಗೆ ನಿಗದಿತ ಉದ್ದೇಶಕ್ಕೆ ನಮೂದಾಗಿರುತ್ತದೆ ಎಂದು ಹೇಳಿದರು.

ಆದರೆ ಇತರ ಅರ್ಜಿಗಳನ್ನು ತಿರಸ್ಕರಿಸಿ ಪ್ರಬಲರಿಗೆ ಕೊಡಲಾಗಿದೆ,ಇದರಿಂದ ಅನುಮಾನ ಕಾಡುತ್ತಿದೆ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯಸಭಾ ವಿಪಕ್ಷ ನಾಯಕ- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಧಾಕೃಷ್ಣ ಅವರ ಖಾಸಗಿ, ಒಂದೇ ಮನೆಗೆ ಸೀಮಿತ ಟ್ರಸ್ಟಿಗೆ ನಿವೇಶನ ಕೊಡಲಾಗಿದೆ ಎಂದು ಅವರು ಹೇಳಿದರು.

ಬುದ್ಧ ವಿಹಾರ ಕಟ್ಟಲು ಸಿದ್ಧಾರ್ಥ ವಿಹಾರ ಟ್ರಸ್ಟ್ ಕಲಬುರ್ಗಿಯಲ್ಲಿ ನೋಂದಣಿ ಮಾಡಿದ್ದಾರೆ. ಇದೊಂದು ಧಾರ್ಮಿಕ ಉದ್ದೇಶದ ಟ್ರಸ್ಟ್. ಆದರೆ, ಏರೋಸ್ಪೇಸ್ ಸಂಬಂಧಿಸಿ ನಿವೇಶನ ಪಡೆದಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದರು.