ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಅಧಿಕಾರಿಗಳ ದರ್ಬಾರ್ ನಡೆಯುತ್ತಿದೆ. ಸ್ಥಳೀಯ ನಿವಾಸಿಗಳ ಭಾವನೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಯದುವೀರ್, ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆ ವಿಚಾರ ನ್ಯಾಯಾಲಯದಲ್ಲಿದೆ. ಚಾಮುಂಡಿ ಬೆಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಯಾರ ಮಾತಿಗೂ ಬೆಲೆ ಕೊಡುತ್ತಿಲ್ಲ. ಈ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬಂದಿವೆ. ಸ್ಥಳೀಯ ಆಡಳಿತ ಹಾಗೂ ಅಲ್ಲಿನ ನಿವಾಸಿಗಳ ಮಾತಿಗೂ ಪ್ರಾಧಿಕಾರದ ಅಧಿಕಾರಿಗಳು ಬೆಲೆ ಕೊಡುತ್ತಿಲ್ಲ. ಸ್ಥಳೀಯ ನಿವಾಸಿಗಳ ಸಮಸ್ಯೆಗೂ ಸ್ಪಂದಿಸುತ್ತಿಲ್ಲ ಎಂದು ಬೇಸರ ಪಟ್ಟರು.
ಮೈಸೂರಿನ ವಿವಿಧೆಡೆ ಅವೈಜ್ಞಾನಿಕವಾಗಿ ಸಿಗ್ನಲ್ ಲೈಟ್ ಅಳವಡಿಸಿರುವುದು ಸರಿಯಲ್ಲ ಎಂದು ಹೇಳಿದ ಅವರು, ಎಲ್ಲೆಂದರಲ್ಲಿ ಸಿಗ್ನಲ್ ಲೈಟ್ ಅಳವಡಿಸಿರುವುದಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ. ಈ ರೀತಿ ಅವೈಜ್ಞಾನಿಕವಾಗಿ ಸಿಗ್ನಲ್ ಲೈಟ್ ಅಳವಡಿಸಲು ಯಾರು ಅನುನತಿ ನೀಡಿದರೋ ಗೊತ್ತಿಲ್ಲ. ಕೆಲವೇ ಮೀಟರ್ ಅಂತರದಲ್ಲಿ ಸಿಗ್ನಲ್ ಲೈಟ್ ಅಳವಡಿಸಿದ್ದರಿಂದ ವಾಹನ ಸವಾರರಿಗೆ ತೊಂದರೆ ಆಗುತ್ತಿದೆ ಎಂದು ಹೇಳಿದರು.
ಮೈಸೂರು ಜಿಲ್ಲೆಯಲ್ಲಿ ಅಧಿಕಾರಿಗಳ ದರ್ಬಾರ್ ನಡೆಯುತ್ತಿದೆ. ಜನಪ್ರತಿನಿಧಿಗಳ ಮಾತಿಗೆ ಬೆಲೆ ಇಲ್ಲದಂತಾಗಿದೆ. ಸರ್ಕಾರಿ ಅಧಿಕಾರಿಗಳ ಕಾರ್ಯ ವೈಖರಿ ಸರಿಯಿಲ್ಲ. ಮೈಸೂರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆಯಾಗಿದೆ. ಆದರೆ ಇಲ್ಲಿ ಅಧಿಕಾರಿಗಳ ದರ್ಬಾರು ನಡೆಯುತ್ತಿದೆ, ಜನಪ್ರತಿನಿಧಿಗಳ ಮನವಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಯದುವೀರ್ ಗಂಭೀರ ಆರೋಪ ಮಾಡಿದರು.
