ನವದೆಹಲಿ: ಕಳೆದ 10 ವರ್ಷಗಳಿಂದ ಅಧಿಕಾರದಲ್ಲಿದ್ದ ಆಮ್ ಆದ್ಮಿ ಪಕ್ಷ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಅತಿಶಿ ರಾಜೀನಾಮೆ ಸಲ್ಲಿಸಿದ್ದಾರೆ.
ಕೇಂದ್ರ ಚುನಾವಣಾ ಆಯೋಗವು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕೃತ ಜಯ ಘೋಷಿಸಿದ ಒಂದು ದಿನದ ನಂತರ ಅಶಿತಿ, ರಾಜ್ಯಪಾಲ ವಿ.ಕೆ ಸಕ್ಸೇನಾ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಬಾರಿ ಚುನಾವಣೆಯಲ್ಲಿ ಆಪ್ ನ ಮಾಜಿ ಸಿಎಂ ಕೇಜ್ರಿವಾಲ್ ಸೇರಿದಂತೆ ಘಟಾನುಘಟಿ ನಾಯಕರೇ ಸೋಲುಂಡ ಹೊರತಾಗಿಯೂ ಅತಿಶಿ ತಮ್ಮ ಕಲ್ಕಾಜಿ ಕ್ಷೇತ್ರದಲ್ಲಿ ಮತ್ತೆ ಗೆಲುವು ಸಾಧಿಸಿದ್ದಾರೆ.
ಆರಂಭದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧೂರಿ ವಿರುದ್ಧ ತೀವ್ರ ಹಿನ್ನಡೆ ಅನುಭವಿಸಿದ್ದ ಅತಿಶಿ 8-9ನೇ ಸುತ್ತಿನ ಬಳಿಕ ಸತತವಾಗಿ ಮುನ್ನಡೆ ಕಾಯ್ದುಕೊಂಡು ಗೆಲುವು ಸಾಧಿಸಿದ್ದರು.ಈಗ ಅವರು ತಮ್ಮ ಪಕ್ಷ ಸೋಲನುಭವಿಸಿದ ಹಿನ್ನೆಲೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.