ಆರೋಗ್ಯಕರ ಚರ್ಚೆ, ಟೀಕೆಗಳು ನಡೆದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿ:ಸಿಎಂ

Spread the love

ಮೈಸೂರು: ದುಷ್ಟರ ಶಿಕ್ಷೆ, ಶಿಷ್ಟರ ರಕ್ಷೆ ದಸರೆಯ ಪ್ರತೀಕ. ವಿಜಯನಗರ ಅರಸರ ಜಯದ ಸಂಕೇತವಾಗಿ ಪ್ರಾರಂಭಿಸಲಾದ ಆಯುಧಪೂಜೆ, ದಸರಾ ಉತ್ಸವವನ್ನು ಮೈಸೂರು ಒಡೆಯರ್ ಅವರು ಮುಂದುವರೆಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದಿಗೂ ಆ ಪರಂಪರೆಯನ್ನು ಪಾಲಿಸಲಾಗುತ್ತಿದೆ ಎಂದು ಹೇಳಿದರು.

ದಸರಾ ಉತ್ಸವದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟವಾದ ಸರ್ಕಾರದ ಜಾಹೀರಾತಿನ ಕುರಿತ ಪ್ರಶ್ನೆಗೆ ಸಿಎಂ ಮೇಲಿನಂತೆ ಉತ್ತರಿಸಿದರು.

ದುಷ್ಟರ ಸಂಹಾರ ಆಗಬೇಕಿದೆ ಎಂಬ ಜಾಹಿರಾತಿನ ಬಗ್ಗೆ ವ್ಯಂಗ್ಯವಾಡಿದ ಸಂಸದೆ ಶೋಭಾ ಕರಂದ್ಲಾಜೆಯವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಸಂಸದೀಯ ಮಂಡಳಿಯ ಸದಸ್ಯತ್ವದಿಂದ ತೆಗೆದುಹಾಕಲು ಚಿಂತಿಸುವ ಬದಲು, ಈ ರೀತಿ ಸುಳ್ಳು ಮಾತನಾಡುವುದು ತಪ್ಪು ಕೋರ್ಟ್​ನ ಕೃಪೆಯಿಂದಾಗಿ ಅವರು ಜೈಲುಪಾಲಾಗದೆ ಹೊರಗಿದ್ದಾರೆ ಎಂದು ಟೀಕಿಸಿದರು.

ರಾಜ್ಯದ ಜನತೆಗೆ ದಸರಾ ಹಬ್ಬದ ಶುಭ ಕೋರಿದ ಸಿದ್ದು, ಮೈಸೂರಿನಲ್ಲಿ ನಡೆಯುವ ಜಂಬೂಸವಾರಿ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದರು.

ರಾಜಕೀಯದಲ್ಲಿ ತೆಗಳುವವರು, ಹೊಗಳುವವರು ಇರುತ್ತಾರೆ ಶತ್ರುಗಳು, ಅಭಿಮಾನಿಗಳೂ ಇರುತ್ತಾರೆ, ಪ್ರಜಾಪ್ರಭುತ್ವದಲ್ಲಿ ಎಲ್ಲರೂ ನನ್ನನ್ನು ಸಹಮತಿಸಲೇಬೇಕೆಂಬ ಭಾವನೆ ನನಗಿಲ್ಲ. ಆರೋಗ್ಯಕರ ಚರ್ಚೆ, ಟೀಕೆಗಳು ನಡೆದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ ಎಂದು ಹೇಳಿದರು.

ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಜನ ಹಲವು ಬಾರಿ ನನಗೆ ಒದಗಿಸಿಕೊಟ್ಟಿದ್ದಾರೆ. ತಾಯಿಯ ಆಶೀರ್ವಾದ ನನ್ನ ಮೇಲೆ ಇರುವ ಕಾರಣದಿಂದ ದೀರ್ಘಕಾಲದಿಂದ ರಾಜಕೀಯದಲ್ಲಿರಲು ಸಾಧ್ಯವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹೋರಾಟ ಹಮ್ಮಿಕೊಳ್ಳುವುದಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಕೆಲವು ಮೊಕದ್ದಮೆಗಳ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಸಚಿವ ಸಂಪುಟದ ಉಪಸಮಿತಿಗಿರುತ್ತದೆ. ಗೃಹಸಚಿವರು ಈ ಉಪಸಮಿತಿಯ ನೇತೃತ್ವ ವಹಿಸಿದ್ದು, ಸಮಿತಿ ವಿವೇಚನೆಯಂತೆ ಪ್ರಕರಣದ ದೂರನ್ನು ಹಿಂದಕ್ಕೆ ಪಡೆದಿದೆ. ಆದರೂ ಈ ವಿಚಾರವಾಗಿ ಹೆಚ್ಚಿನ ಮಾಹಿತಿ ಪಡೆಯುತ್ತೇನೆ ಎಂದು ಸಿಎಂ ತಿಳಿಸಿದರು.