ರಾಜ್ಯ ಸರ್ಕಾರದ ವಿರುದ್ಧ ಅಶೋಕ್ ಟೀಕಾಪ್ರಹಾರ

Spread the love

ಬೆಂಗಳೂರು: ಫ್ರೀಡಂ ಪಾರ್ಕ್ ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ ಕಾರ್ಯರ್ತೆಯರ ಟೆಂಟ್ ಕಿತ್ತುಹಾಕಿಸಿ ಬಲವಂತವಾಗಿ ಪ್ರತಿಭಟನೆ ಅಂತ್ಯಗೊಳಿಸುವ ಮೂಲಕ ಸರ್ಕಾರ ಹಿಟ್ಲರ್ ಧೋರಣೆ ತೋರಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಸ್ವಾಮಿ ಸಿಎಂ ಸಿದ್ದರಾಮಯ್ಯ ನವರೇ, ಚುನಾವಣೆ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಟ್ಟ ಆಶ್ವಾಸನೆ ಈಡೇರಿಸುವುದಕ್ಕಂತೂ ನಿಮ್ಮ ಸರ್ಕಾರಕ್ಕೆ ಯೋಗ್ಯತೆ ಇಲ್ಲ ಎಂದು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೆಯುವ ಚಳಿಯನ್ನೂ ಲೆಕ್ಕಿಸದೆ ನಾಲ್ಕು ದಿನದಿಂದ ಅಹೋರಾತ್ರಿ ಪ್ರತಿಭಟನೆ ಮಾಡುತ್ತಿರುವ ಮಹಿಳೆಯರ ಬಳಿ ಹೋಗಿ ಕನಿಷ್ಠ ಪಕ್ಷ ಅವರನ್ನ ಸಮಾಧಾನ ಪಡಿಸುವ ಸೌಜನ್ಯವೂ ನಿಮ್ಮ ಸರ್ಕಾರಕ್ಕೆ ಇಲ್ಲ,
ಈಗ ಅವರ ಶಾಂತಿಯುತ ಪ್ರತಿಭಟನೆಗೂ ಅಡ್ಡಿಪಡಿಸುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ.

ತಮ್ಮ ನಾಯಕ ರಾಹುಲ್ ಗಾಂಧಿ ಅವರು ಹೋಗಿ ಬಂದಲ್ಲೆಲ್ಲ ತೋರಿಸುವ ಸಂವಿಧಾನದ ಪುಸ್ತಕದಲ್ಲಿ ಸಾಮಾನ್ಯ ನಾಗರಿಕರಿಗೆ ಪ್ರತಿಭಟನೆ ಮಾಡುವ ಹಕ್ಕಿಲ್ಲವೆ ಅಥವಾ ನಮ್ಮ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಏನಾದರೂ ಇದೆಯಾ ಎಂದು ಕಾರವಾಗಿ ಕಿಡಿಕಾರಿದ್ದಾರೆ.

ನಿಮ್ಮ ಈ ಹಿಟ್ಲರ್ ಧೋರಣೆ ಜಾಸ್ತಿ ದಿನ ನಡೆಯುವುದಿಲ್ಲ ನಿಮ್ಮ ಕಾಂಗ್ರೆಸ್ ಸರ್ಕಾರದ ವಿರುದ್ಧ ಕನ್ನಡಿಗರು ತಿರುಗಿ ಬೀಳುವ ದಿನ ಬಹಳ ದೂರವಿಲ್ಲ ಎಂದು ಅಶೋಕ್ ಎಚ್ಚರಿಸಿದ್ದಾರೆ.