ಚಿನ್ನ ವಂಚನೆ ಪ್ರಕರಣ:ಐಶ್ವರ್ಯ ಗೌಡ ಇಡಿ ವಶಕ್ಕೆ

ಬೆಂಗಳೂರು: ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ಅವರ ಬೆಂಗಳೂರು ಹಾಗೂ ಮಂಡ್ಯ ನಿವಾಸ ಮತ್ತು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು ಆಕೆಯನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನಲ್ಲಿರುವ ಶಾಸಕ ವಿನಯ್ ಕುಲಕರ್ಣಿ ಅವರ ಮನೆ ಹಾಗೂ ಐಶ್ವರ್ಯ ಗೌಡ ಅವರ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಮನೆ ಮತ್ತು ಬೆಂಗಳೂರಿನ ನಿವಾಸದ ಮೇಲೆ ಇಡಿ ದಾಳಿ ನಡೆಸಿದೆ.

ಇಬ್ಬರು ಸಿಆರ್​​ಪಿಎಫ್ ಸಿಬ್ಬಂದಿ ಭದ್ರತೆ ಇಟ್ಟುಕೊಂಡು ದಾಳಿ ನಡೆಸಿದ ಇಡಿ ಅಧಿಕಾರಿಗಳು ಹಲವು ದಾಖಲೆಗಳ ಶೋಧ ಮಾಡಿದ್ದಾರೆ.ನಂತರ ಹೆಚ್ಚಿನ ವಿಚಾರಣೆಗಾಗಿ ಐಶ್ವರ್ಯ ಗೌಡ ಅವರನ್ನು ಇಡಿ ವಶಕ್ಕೆ ಪಡೆದಿದೆ.

ವಂಚನೆ ಪ್ರಕರಣದಲ್ಲಿ ಐಶ್ವರ್ಯಾ ಗೌಡ, ಅವರ ಪತಿ ಮತ್ತೆ ಬಂಧನ

ಐಶ್ವರ್ಯ ಗೌಡ ಅವರು ಸುಮಾರು 9 ಕೋಟಿ ರೂ. ಮೌಲ್ಯದ ಚಿನ್ನ ಖರೀದಿಸಿ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ.

ವಾರಾಹಿ ವರ್ಲ್ಡ್‌ ಆಫ್‌ ಗೋಲ್ಡ್‌ ಜುವೆಲ್ಲರಿಯ ಮಾಲೀಕರಿಗೆ ಐಶ್ವರ್ಯ ಗೌಡ ವಂಚಿಸಿದ್ದಾರೆ ಎಂಬ ಆರೋಪವಿದೆ. ಅಲ್ಲದೆ, ಮಾಜಿ ಸಂಸದ ಡಿ.ಕೆ ಸುರೇಶ್ ಹೆಸರಿನಲ್ಲಿ ವಂಚನೆ ಎಸಗಿದ್ದರು ಎಂಬ ಆರೋಪವೂ ಇದೆ.

ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ 2024ರ ಡಿಸೆಂಬರ್​​ನಲ್ಲೇ ಡಿ.ಕೆ ಸುರೇಶ್ ದೂರು ನೀಡಿದ್ದರು.