ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಹಾಗೂ ಮಕ್ಕಳು ಸಾಯುತ್ತಿರುವಾಗ ಕಾಂಗ್ರೆಸ್ 20 ಕೋಟಿ ವೆಚ್ಚ ಮಾಡಿ ಸಮಾವೇಶ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಅಶೋಕ್ ಕಿಡಿಕಾರಿದರು.
ಮಕ್ಕಳನ್ನು ಉಳಿಸದೆ ನೂರು ಸಮಾವೇಶ ಮಾಡಿದರೂ ಸರ್ಕಾರಕ್ಕೆ ಜನರ ಶಾಪ ತಟ್ಟದೆ ಇರುವುದಿಲ್ಲ ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಶೋಕ್, ರಾಜ್ಯದ ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿ ಬದಲಾಗಿದೆ. ಬಳ್ಳಾರಿ ಆಸ್ಪತ್ರೆಯಲ್ಲಿ ಐವಿ ದ್ರಾವಣದಿಂದ ತಾಯಂದಿರು ಸತ್ತಿದ್ದಾರೆ. ನಾನು ಹೋಗಿ ಎಚ್ಚರಿಕೆ ನೀಡಿದ ನಂತರವೂ ಏನೂ ಕ್ರಮ ತೆಗೆದುಕೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ 111 ನವಜಾತ ಶಿಶುಗಳು ಹಾಗೂ ಎಂಟು ತಿಂಗಳಲ್ಲಿ ಸುಮಾರು 28 ಬಾಣಂತಿಯರು ಸಾವನ್ನಪ್ಪಿದ್ದಾರೆ. ಮಹಿಳೆಯರಿಗೆ 2 ಸಾವಿರ ರೂ. ನೀಡುವ ಬದಲು ತಾಯಂದಿರ ಸಾವಿಗೆ ನ್ಯಾಯ ಕೊಡಿ ಎಂದು ಒತ್ತಾಯಿಸಿದರು.
ಕೋವಿಡ್ ಸಮಯದಲ್ಲಿ ರಾಹುಲ್ ಗಾಂಧಿ, ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ, ಜನರ ಬಳಿಗೆ ಹೋಗಿ ಟವೆಲ್ನಲ್ಲಿ ಕಣ್ಣೀರು ಒರೆಸಿಕೊಂಡರು. ಈಗ ತಾಯಂದಿರು ಸತ್ತಿರುವಾಗ ಜನಕಲ್ಯಾಣ ಸಮಾವೇಶ ಮಾಡಿದ್ದಾರೆ. ಆ ಸಮಾವೇಶದಲ್ಲಿ ರಾಜಕೀಯ ಮಾತಾಡುವುದು ಬಿಟ್ಟರೆ, ಜನರ ಪರವಾಗಿ ಮಾತಾಡಿಲ್ಲ ಎಂದು ಆಕ್ಷೇಪಿಸಿದರು.
28 ಔಷಧಿಗಳು ಕಳಪೆ ಎಂದಮೇಲೂ ಅದೇ ಕಂಪನಿಯಿಂದ ಔಷಧಿ ಖರೀದಿಸಲಾಗಿದೆ,
ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಮಾಡಿದ ನಂತರವೂ ತಾಯಂದಿರು ಸಾಯುತ್ತಿದ್ದಾರೆ ಎಂದರೆ ಮುಖ್ಯಮಂತ್ರಿಗೆ ಸರ್ಕಾರದಲ್ಲಿ ಹಿಡಿತವಿಲ್ಲ ಎಂದರ್ಥ,ಈ ಸಾವಿನ ಹೊಣೆಯನ್ನು ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಅಸದೋಕ್ ಒತ್ತಾಯಿಸಿದರು.
ನಾನು ಈಗಾಗಲೇ ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದೇನೆ. ಈ ಕುರಿತು ಲೋಕಾಯುಕ್ತಕ್ಕೆ ಪತ್ರ ಕೂಡ ಬರೆಯುತ್ತೇನೆ. ಇದನ್ನು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡದೆ ಬಿಡುವುದಿಲ್ಲ ಎಂದು ಎಚ್ಚರಿಸಿದರು.
ಬಿಜೆಪಿಯದ್ದು ಮನೆಯೊಂದು ಮೂರುಬಾಗಿಲು ಎನ್ನುತ್ತಾರಲ್ಲ, ಕಾಂಗ್ರೆಸ್ನವರದ್ದು ಊರೆಲ್ಲ ಬಾಗಿಲಾಗಿದೆ ವ್ಯಂಗ್ಯ ವಾಡಿದರು.
ಪರಮೇಶ್ವರ್ ಈಗ ಮಾತಾಡಿದ್ದಾರಲ್ಲ, ಮೊದಲು ಸಿಎಂ ಆಗೋದಿಕ್ಕೆ ಅವರಿಗೇ ಆದ್ಯತೆ ಸಿಗಬೇಕು. ಅದಕ್ಕೇ ಅವರು ಮೊನ್ನೆ ಡಿಮ್ಯಾಂಡ್ ಇಟ್ಟಿದ್ದು. ಪರಮೇಶ್ವರ್ ಎರಡು ಸಲ ಅಧ್ಯಕ್ಷ ಆಗಿದ್ದವರು. ಸಿಎಂ ಆಗ್ತಾರೆ ಅಂತ ಅವರನ್ನು ಕಳೆದ ಸಲ ಸೋಲಿಸಲಾಯ್ತು. ಸಿಎಂ ಪೋಸ್ಟ್ ಬಿಟ್ಟುಕೊಡಲ್ಲ ಅಂತ ಸಿದ್ದರಾಮಯ್ಯ ಅವರೇ ಹೇಳಿದ್ದಾರಲ್ಲ, ಡಿಕೆಶಿಗೆ ಪೆನ್ನು ಪೇಪರ್ ಇನ್ನೆಲ್ಲಿ ಸಿಗುತ್ತೆ ಎಂದು ವ್ಯಂಗ್ಯ ವಾಗಿ ಅಶೋಕ ಪ್ರಶ್ನಿಸಿದರು.