ಸರ್ಕಾರಕ್ಕೆ ಮೊದಲು ನೆಟ್‌ ಬೋಲ್ಟ್‌ ಟೈಟ್‌ ಮಾಡಬೇಕಿದೆ:ಅಶೋಕ್

Spread the love

ಬೆಂಗಳೂರು,ಮಾ.6: ರಾಜ್ಯ ಸರ್ಕಾರ ರಾಜ್ಯಪಾಲರ ಎಲ್ಲ ಅಧಿಕಾರಗಳನ್ನು ಕಿತ್ತುಕೊಂಡು ಅವರನ್ನೇ ಬಳಸಿಕೊಂಡು ಸರ್ಕಾರವನ್ನು ಶ್ಲಾಘಿಸಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಲಂಗು ಲಗಾಮು ಇಲ್ಲದ ಈ ಸರ್ಕಾರಕ್ಕೇ ಮೊದಲು ನಟ್ಟು ಬೋಲ್ಟು ಟೈಟ್ ಮಾಡಬೇಕಿದೆ ಎಂದು ಕಿಡಿಕಾರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಇವ ನಮ್ಮವʼ ಎಂಬ ಬಸವಣ್ಣನವರ ವಚನ ಹೇಳುತ್ತಾರೆ. ಆದರೆ ರಾಜ್ಯಪಾಲರ ವಿಚಾರ ಬಂದಾಗ ಮಾತ್ರ ಇವರು ನಮ್ಮವರಲ್ಲ ಎಂದು ಭೇದ ತೋರುತ್ತಾರೆ. ರಾಜ್ಯಪಾಲರು ಇತ್ತೀಚೆಗೆ ಮೈಕ್ರೋ ಫೈನಾನ್ಸ್‌ ಕಾನೂನು ತಿದ್ದುಪಡಿಯನ್ನು ವಾಪಸ್‌ ಕಳುಹಿಸಿದ್ದರು. ಅದನ್ನು ವಿವೇಚನೆ ಮಾಡದೆ ಸರ್ಕಾರದಿಂದ ದ್ವೇಷ ಸಾಧಿಸಲಾಗುತ್ತಿದೆ. ವಿಧಾನಪರಿಷತ್‌ ಸದಸ್ಯ ಐವನ್‌ ಡಿಸೋಜ ಅವರು ಬಾಂಗ್ಲಾ ಪ್ರಧಾನಿ ಗತಿಯೇ ಬರಲಿದೆ ಎಂದು ಬೆದರಿಕೆ ಹಾಕಿದ್ದರು. ರಾಜ್ಯಪಾಲರಿಗೆ ತಿಳಿವಳಿಕೆ ಇಲ್ಲವೆಂದು ಸಚಿವ ಜಮೀರ್‌ ಅಹ್ಮದ್‌ ಹೇಳಿದ್ದರು ಎಂದು ದೂರಿದರು.

ಆಡಳಿತದಲ್ಲಿ ಪಾರದರ್ಶಕತೆ ತಂದಿದ್ದರೆ, ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. ಹೇಗೆ ಲೂಟಿಯಾಯಿತು, ಪಿಎಸ್‌ಐ ಪರಶುರಾಮ್‌ ಹೇಗೆ ಸತ್ತರು, ಅಬಕಾರಿ ಇಲಾಖೆಯಲ್ಲಿ ಹಗರಣ ಹೇಗೆ ನಡೆಯಿತು, ಆಕ್ಸ್‌ಫರ್ಡ್‌ ಬ್ಲಾಗ್‌ನಲ್ಲಿ ಆರ್ಥಿಕ ತಜ್ಞರೊಬ್ಬರು ಸರ್ಕಾರವನ್ನು ಶ್ಲಾಘಿಸಿ ಶೈನಿಂಗ್‌ ಲೈಟ್‌ ಇನ್‌ ದಿ ಡಾರ್ಕ್‌ನೆಸ್‌ ಎಂದು ಬರೆದಿದ್ದಾರೆ ಎಂದು ಭಾಷಣದಲ್ಲಿ ಉಲ್ಲೇಖಿಸಲಾಗಿದೆ. ಇದು ಯಾರೆಂದು ಹುಡುಕಿದರೆ, ಇವರು ಮುಖ್ಯಮಂತ್ರಿ ಸಚಿವಾಲಯದಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿ ಎಂದು ತಿಳಿಯಿತು.

ಕಾಂಗ್ರೆಸ್‌ ನಾಯಕರ ಕಚೇರಿಯಲ್ಲೇ ಸಂಬಳಕ್ಕಾಗಿ ಕೆಲಸ ಮಾಡುತ್ತಿರುವ ವ್ಯಕ್ತಿ ಬರೆದಿರುವುದನ್ನು ಬಜೆಟ್‌ ಭಾಷಣದಲ್ಲಿ ಏಕೆ ಉಲ್ಲೇಖಿಸಬೇಕು, ಇದನ್ನು ಬಿರುದು ಎಂದು ಪರಿಗಣಿಸಬೇಕೆ ಇದನ್ನು ರಾಜ್ಯಪಾಲರ ಬಾಯಿಂದ ಹೇಳಿಸಬೇಕಿತ್ತೇ, ರಾಷ್ಟ್ರಪತಿಯವರಿಂದ ಬಿರುದು ಪಡೆಯಬೇಕೆ ಹೊರತು, ಸಿಎಂ ಕಚೇರಿಯಲ್ಲಿ ಕೆಲಸ ಮಾಡುವವರಿಂದ ಬಿರುದು ಪಡೆಯಬಾರದು ಎಂದು ಚಾಟಿ ಬೀಸಿದರು.

9 ವಿಶ್ವವಿದ್ಯಾಲಯಗಳನ್ನು ರದ್ದು ಮಾಡಲು ಡಿ.ಕೆ.ಶಿವಕುಮಾರ್‌ ನೇತೃತ್ವದ ಸಮಿತಿ ನಿರ್ಧರಿಸಿದೆ. ಬಿಜೆಪಿ ಸರ್ಕಾರ ಸುಮ್ಮಸುಮ್ಮನೆ ವಿವಿಗಳನ್ನು ಮಂಜೂರು ಮಾಡಿಲ್ಲ. ದಕ್ಷಿಣ ಕನ್ನಡದಲ್ಲಿ ಶೇ. 65.58 ಬಾಗಲಕೋಟೆಯಲ್ಲಿ 25%, ಚಾಮರಾಜನಗರದಲ್ಲಿ 10%, ಮಂಡ್ಯದಲ್ಲಿ 20%, ಕೊಡಗಿನಲ್ಲಿ 16%, ಹಾಸನದಲ್ಲಿ 15%, ಹಾವೇರಿಯಲ್ಲಿ 45%, ಕೊಪ್ಪಳದಲ್ಲಿ 16% ಸಾಕ್ಷರತೆ ಇದೆ. ಕಡಿಮೆ ಸಾಕ್ಷರತೆ ಇರುವ ಜಿಲ್ಲೆಗಳಲ್ಲಿ ಅವಕಾಶ ವಂಚಿತರಿಗೆ ಅವಕಾಶ ನೀಡಲು ವಿವಿಗಳನ್ನು ನೀಡಲಾಗಿತ್ತು. ವಿವಿಗಳಿಗೆ ಒಟ್ಟಾರೆಯಾಗಿ 450 ಕೋಟಿ ರೂ. ಬೇಕು ಎಂದು ಅಶೋಕ್ ಹೇಳಿದರು.

ಬೆಂಗಳೂರಿನಲ್ಲಿ ಎಲ್ಲೆಡೆ ಕಸದ ರಾಶಿ ಕಂಡುಬರುತ್ತಿದೆ. ರಾಜಧಾನಿಯ ಪ್ರಗತಿಗೆ ಅನುದಾನವೇ ಇಲ್ಲ. ಎರಡು ವರ್ಷದಿಂದ ಅಭಿವೃದ್ಧಿ ನಡೆದಿಲ್ಲ. ನನ್ನ ಕ್ಷೇತ್ರಕ್ಕೆ ಕೇವಲ 10 ಕೋಟಿ ರೂ. ನೀಡಲಾಗಿದೆ. ಬಿಜೆಪಿ ಸರ್ಕಾರವಿದ್ದಾಗ ಭೈರತಿ ಸುರೇಶ್‌ ಕ್ಷೇತ್ರಕ್ಕೆ ಒಂದು ವರ್ಷಕ್ಕೆ 100 ಕೋಟಿ ರೂ. ನೀಡಲಾಗಿತ್ತು. ಆದರೆ ಈಗಿನ ಸರ್ಕಾರದಿಂದ ಹಣ ಬರುತ್ತಿಲ್ಲ. ಮಳೆಗಾಲ ಬರುವ ಮುನ್ನ ಡಾಂಬರೀಕರಣ ಮಾಡಬೇಕಿತ್ತು. ಈಗ ಬ್ರ್ಯಾಂಡ್‌ ಬೆಂಗಳೂರು ಹೋಗಿ ಬ್ಯಾಡ್‌ ಬೆಂಗಳೂರು ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಬಿಜೆಪಿ 431 ಕೋಟಿ ರೂ. ನೀಡಿದರೆ, ಈಗ 265 ಕೋಟಿ ರೂ. ನೀಡಲಾಗಿದೆ. ಸಾಹಿತ್ಯ ಸಮ್ಮೇಳನಕ್ಕೆ 30 ಕೋಟಿ ರೂ. ಅನ್ನು 10 ಕೋಟಿ ರೂ. ಇಳಿಸಲಾಗಿದೆ. ಸಾಂಸ್ಕೃತಿಕ ಸಂಘಗಳ ಸಹಾಯಧನ 29 ಕೋಟಿ ರೂ. ನಿಂದ 10 ಕೋಟಿ ರೂ.ಗೆ ಇಳಿದಿದೆ. ರಂಗಮಂದಿರಗಳಿಗೆ ಸಹಾಯಧನ ನೀಡಿಲ್ಲ. ಕಲಾವಿದರ ಪಿಂಚಣಿಗೆ ಅರ್ಜಿ ಆಹ್ವಾನಿಸಿಲ್ಲ. ಕಲಾ ತಂಡಗಳಿಗೆ ಹಣ ಕೊರತೆ ಉಂಟಾಗಿದೆ ಎಂದು ‌ಟೀಕಾ ಪ್ರಹಾರ ನಡೆಸಿದರು.

ಪೆಟ್ರೋಲ್‌, ಆಲ್ಕೋಹಾಲ್‌, ಮೆಟ್ರೋ, ಬಸ್‌ ಟಿಕೆಟ್‌, ಮದ್ಯ, ದತ್ತು ಸ್ವೀಕಾರ, ಮದುವೆ ಪ್ರಮಾಣಪತ್ರ, ಹಾಲು, ಮಾರ್ಗಸೂಚಿ ದರ ಎಲ್ಲಕ್ಕೂ ದರ ಏರಿಕೆ ಮಾಡಲಾಗಿದೆ. ಏರಿಕೆ ನಂತರವೂ ಜನಪರ ಸರ್ಕಾರ ಎಂದು ಯಾವ ಬಾಯಲ್ಲಿ ಹೇಳುತ್ತಾರೆ ಎಂದು ಅಶೋಕ್ ಗುಡುಗಿದರು.