ಹಾಸನ: ಅಹಿಂದ ವರ್ಗಗಳ ಸಂಘಟನೆಯಲ್ಲಿ ನನ್ನ ಕೊಡುಗೆಯಿದೆ, ಮಂಡ್ಯಕ್ಕೆ ಕುಮಾರಸ್ವಾಮಿಯವರ ಕೊಡುಗೆಗಳೇನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಹಾಸನದಲ್ಲಿ ಮಾಧ್ಯಮ ಗಳೊಂದಿಗೆ ಮಾತನಾಡಿದರು.
ಅಹಿಂದ ವರ್ಗಕ್ಕೆ ಸಿದ್ದರಾಮಯ್ಯನವರ ಕೊಡುಗೆಯ ಬಗ್ಗೆ ಪ್ರಶ್ನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಅಹಿಂದ ವರ್ಗಗಳ ಸಂಘಟನೆಯಲ್ಲಿ ನಾನು ಪ್ರಮುಖ ಪಾತ್ರ ವಹಿಸಿದ್ದು, ಅವರಿಗೆ ಗ್ಯಾರಂಟಿ ಹಾಗೂ ಅನೇಕ ಭಾಗ್ಯಯೋಜನೆಗಳನ್ನು ನೀಡಿದ್ದೇವೆ. ಕಾರ್ಮಿಕರು, ಬಡವರು, ದಲಿತರು, ಅಲ್ಪಸಂಖ್ಯಾತರು, ಮಹಿಳೆಯರ ಸಬಲೀಕರಣಕ್ಕೆ ಗ್ಯಾರಂಟಿ ಸೇರಿದಂತೆ ಅನೇಕ ಯೋಜನೆಗಳಿಂದ ಅನುಕೂಲವಾಗಿದೆ ಎಂದು ಹೇಳಿದರು.
ಕುಮಾರಸ್ವಾಮಿಯವರು ರೈತರ ಕುಟುಂಬದವರೇ,ಆದರೆ ರೈತವರ್ಗಕ್ಕೆ ಅವರ ಕೊಡುಗೆಗಳೇನಿದೆ ಎಂದು ಸಿಎಂ ಪ್ರಶ್ನಿಸಿದರು.
ಸೆಪ್ಟೆಂಬರ್ ನಿಂದ ನವೆಂಬರ್ 2025ರವೆಗೆ ಕರ್ನಾಟಕಕ್ಕೆ ಜಿಎಸ್ ಟಿ ಸಂಗ್ರಹದಲ್ಲಿ ನಷ್ಟವಾಗಿದೆ. 2017 ರಲ್ಲಿ ಪ್ರಧಾನಿ ಮೋದಿಯವರು ಜಿಎಸ್ ಟಿ ಜಾರಿಗೆ ತಂದು, ಅಂದಿನಿಂದಲೂ ಜನರಿಂದ ತೆರಿಗೆ ವಸೂಲಿ ಮಾಡುತ್ತಿದ್ದಾರೆ. ಈಗ ಆರ್ಥಿಕ ವರ್ಷದ ಮಧ್ಯದಲ್ಲಿಯೇ ಜಿಎಸ್ ಟಿ ದರವನ್ನು ಕಡಿಮೆ ಮಾಡಿದ ಪರಿಣಾಮ, ರಾಜ್ಯ ಸರ್ಕಾರಗಳಿಗೆ ಜಿಎಸ್ ಟಿ ಸಂಗ್ರಹದಲ್ಲಿ ನಷ್ಟವಾಗಿದೆ. ಕೇರಳ, ಮಹಾರಾಷ್ಟ್ರ ಮತ್ತು ಕರ್ನಾಟಕವನ್ನು ಹೊರತುಪಡಿಸಿ, ದೇಶದ ಎಲ್ಲಾ ರಾಜ್ಯಗಳಲ್ಲಿ ಜಿಎಸ್ ಟಿ ಸಂಗ್ರಹದಲ್ಲಿ ಕೊರತೆ ಕಂಡಿದೆ ಎಂದು ಸಿದ್ದು ಹೇಳಿದರು.
ಜಿಎಸ್ ಟಿ ದರ ಕಡಿತದಿಂದ ರಾಜ್ಯಕ್ಕಾಗಿರುವ ನಷ್ಟದ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿಯರು ಇದುವರೆಗೂ ಧ್ವನಿ ಎತ್ತಿಲ್ಲ ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಕೇಂದ್ರ ವಿತ್ತಸಚಿವರು 5300 ಕೋಟಿ ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು. ಈ ಘೋಷಣೆಯಲ್ಲಿ ಹಿಂದಿನ ಸರ್ಕಾರದವರು ತಮ್ಮ ಆಯವ್ಯಯದಲ್ಲಿಯೂ ಉಲ್ಲೇಖಿಸಿದರು. ಆದರೆ ಇದುವರೆಗೆ ಕೇಂದ್ರದಿಂದ ಈ ಅನುದಾನವನ್ನು ಬಿಡುಗಡೆ ಮಾಡಿಲ್ಲ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ಕೇಂದ್ರ ಸರ್ಕಾರದ ಅಧೀನದಲ್ಲಿದ್ದು, ರಾಜ್ಯದ ಪ್ರಮುಖ ಯೋಜನೆಗೆ ಇದುವರೆಗೆ ಅನುಮತಿ ದೊರೆತಿಲ್ಲ. ಇದರಿಂದ ಮಂಡ್ಯ ಜನರಿಗೆ ಅನ್ಯಾಯವಾಗಿದೆ ಎಂದು ಸಿದ್ದರಾಮಯ್ಯ ಅಸಮಾಧಾನದಿಂದ ನುಡಿದರು.
ಮಹಿಳಾ ಮೀಸಲಾತಿ ಜಾರಿಯಾಗಿಲ್ಲದಿರುವ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದ ರಾಮಯ್ಯ ನಮ್ಮ ಸರ್ಕಾರ ಮೊದಲಿನಿಂದಲೂ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಮಹಿಳಾ ಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿಸುವವರಲ್ಲಿ ನಾವು ಮುಂಚೂಣಿಯಲಿದ್ದೇವೆ. ಮೀಸಲಾತಿ ಕೊಡಬೇಕು ಎಂದರೆ ತಕ್ಷಣ ಕೊಡಬೇಕು. ಕೇಂದ್ರ ಸರ್ಕಾರ ಇದನ್ನು ಏಕೆ ಮುಂದೂಡಬೇಕು ಎಂದು ಪ್ರಶ್ನಿಸಿದರು.
ಮಂಡ್ಯಕ್ಕೆ ಕುಮಾರಸ್ವಾಮಿಯವರ ಕೊಡುಗೆ ಏನು-ಸಿಎಂ ಪ್ರಶ್ನೆ