ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ ಎಲ್ಲರ ಸಲಹೆ ಸಹಕಾರದೊಂದಿಗೆ ಆಗಸ್ಟ್ 15ರಂದು ನಗರದಲ್ಲಿ ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಶ್ರೀರೂಪ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಸ್ವಾತಂತ್ರ ದಿನಾಚರಣೆ ಸಂಬಂಧ ವಿವಿಧ ಸಂಘಟನೆಗಳ ಮುಖಂಡರು, ಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ರಾಷ್ಟ್ರೀಯ ಹಬ್ಬ ಸ್ವಾತಂತ್ರ್ಯ ದಿನಾ ಚರಣೆಯನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಆ ಪ್ರಕಾರ ಅಧಿಕಾರಿಗಳು ಕಾರ್ಯನಿರ್ವಹಿಸಲು ಸೂಚಿಸಲಾಗಿದೆ. ಸಂಘ ಸಂಸ್ಥೆಗಳ ಮುಖಂಡರು, ಪ್ರತಿನಿಧಿಗಳು ನೀಡುವ ಅಭಿಪ್ರಾಯ ಸಲಹೆಗಳನ್ನು ಪರಿಗಣಿಸಿ ಅಚ್ಚುಕಟ್ಟಾಗಿ ಕಾರ್ಯಕ್ರಮ ರೂಪಿಸಲಾಗುತ್ತದೆ ಎಂದು ಹೇಳಿದರು.
ಸಭೆಯಲ್ಲಿ ಭಾಗವಹಿಸಿದ್ದ ಸಂಘಟನೆಗಳ ಮುಖಂಡರು ಮಾತನಾಡಿ ಹಿಂದಿನಿಂದಲೂ ಜಿಲ್ಲಾಡಳಿತ ಆಚರಿಸುತ್ತಿರುವ ರಾಷ್ಟ್ರೀಯ ಕಾರ್ಯಕ್ರಮಗಳಿಗೆ ಎಲ್ಲಾ ಸಹಕಾರ ನೀಡುತ್ತಾ ಬಂದಿದ್ದೇವೆ. ಈ ಬಾರಿಯೂ ಉತ್ತಮವಾಗಿ ಸಿದ್ದತೆ ಮಾಡಬೇಕು. ಬ್ಯಾಂಕುಗಳು, ಗ್ರಾಮ ಪಂಚಾಯಿತಿ ಕಚೇರಿಗಳು, ಹಾಲು ಒಕ್ಕೂಟ, ಇನ್ನಿತರ ಸಂಘ ಸಂಸ್ಥೆಗಳು ಸ್ವಾತಂತ್ರ್ಯ ದಿನವನ್ನು ಕಡ್ಡಾಯವಾಗಿ ಆಚರಿಸಲು ಆದೇಶ ಹೊರಡಿಸಬೇಕು ಎಂದರು.
ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶಿಷ್ಠಾಚಾರ ಪಾಲನೆಯಾಗಬೇಕು. ಸರ್ಕಾರಿ ಕಚೇರಿಗಳಲ್ಲಿ ದೀಪಾಲಂಕರ ಇರಬೇಕು. ಸಂಜೆಯ ವೇಳೆ ಚಾಮರಾಜೇಶ್ವರ ದೇವಾಲಯದ ಮುಂಭಾಗ ದೇಶಭಕ್ತಿ ಬಿಂಬಿಸುವ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಾಡು ಮಾಡಬೇಕು. ಎಲ್ಲಾ ವಾರ್ಡ್ಗಳಲ್ಲಿಯೂ ಅಂದು ವಿಶೇಷವಾಗಿ ಸ್ವಚ್ಚತೆ ಮಾಡಬೇಕು ಎಂಬುದು ಸೇರಿದಂತೆ ಇನ್ನಿತರ ಅಭಿಪ್ರಾಯ ಸಲಹೆಗಳನ್ನು ಮುಖಂಡರು ನೀಡಿದರು.
ಚಾಮರಾಜನಗರ 1997ರ ಆಗಸ್ಟ್ 15ರಂದು ಹೊಸದಾಗಿ ಜಿಲ್ಲೆಯಾಗಿ ರಚನೆಯಾದ ಹಿನ್ನೆಲೆಯಲ್ಲಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನೂ ಏರ್ಪಾಡು ಮಾಡಬೇಕಿದೆ. ಅರ್ಥಪೂರ್ಣವಾಗಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಬೇಕೆಂಬ ಸಲಹೆಯನ್ನು ಮುಖಂಡರು ನೀಡಿದರು.
ಜಿಲ್ಲಾಧಿಕಾರಿ ಶ್ರೀರೂಪ ಅವರು ಮಾತನಾಡಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಎಲ್ಲ ಅಗತ್ಯ ಸಿದ್ದತೆ ಕೈಗೊಳ್ಳಲಾಗುತ್ತಿದೆ. ಸ್ವಾತಂತ್ರ್ಯ ಹೋರಾಟ, ದೇಶ ಪ್ರೇಮ ಭಕ್ತಿ ಬಿಂಬಿಸುವ ವೈವಿಧ್ಯಮಯ ಕಾರ್ಯಕ್ರಮಗಳನ್ನು ಈ ಬಾರಿ ವಿಶೇಷವಾಗಿ ಹಮ್ಮಿಕೊಳ್ಳಲು ಸೂಚಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಈ ಬಗ್ಗೆ ಸೂಕ್ತ ತಾಲೀಮು ಕೈಗೊಳ್ಳಲು ತಿಳಿಸಲಾಗುವುದು ಎಂದು ಹೇಳಿದರು.
ಬ್ಯಾಂಕುಗಳು, ಎಲ್ಲ ಗ್ರಾಮ ಪಂಚಾಯಿತಿಗಳು, ಕಚೇರಿಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನ ಆಚರಿಸಲು ಆದೇಶ ಹೊರಡಿಸಲಾಗುವುದು. ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚಿಸಲಾಗುವುದು. ಕಾರ್ಯಕ್ರಮ ನಡೆಯುವ ಕ್ರೀಡಾಂಗಣದಲ್ಲಿ ಶುದ್ದ ಕುಡಿಯುವ ನೀರು, ವೈದ್ಯರನ್ನು ಒಳಗೊಂಡ ಆರೋಗ್ಯ ಸಿಬ್ಬಂದಿ ನಿಯೋಜಿಸಲಾಗುವುದು. ಒಟ್ಟಾರೆ ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ರಾಷ್ಟ್ರೀಯ ಕಾರ್ಯಕ್ರಮಕ್ಕೆ ಎಲ್ಲ ಏರ್ಪಾಡು ಮಾಡಲಾಗುತ್ತದೆ ಎಂದರು.
ಜಿಲ್ಲೆಯ ಸಂಸ್ಥಾಪನಾ ದಿನ ಆಚರಣೆ ಕಾರ್ಯಕ್ರಮ ಆಯೋಜನೆ ಸಂಬಂಧ ಮುಖಂಡರು ನೀಡಿರುವ ಸಲಹೆ ಪ್ರಸ್ತಾಪಗಳನ್ನು ಪರಿಶೀಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಡಿವೈಎಸ್ಪಿ ಸ್ನೇಹ ರಾಜ್, ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು
