ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮೆಟ್ರೋ ಆಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿ, ಕೂಡಲೇ ದರ ಏರಿಕೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ ಸೇರಿದಂತೆ ಅನೇಕ ಹಿರಿಯ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡು ತಕ್ಷಣವೇ ದರ ಏರಿಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ರಮೇಶ್ ಗೌಡ ಅವರು; ದರ ಏರಿಕೆ ವಾಪಸ್ ಪಡೆಯುವಂತೆ ಮೆಟ್ರೋ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಎರಡು ಸಲ ಮನವಿ ಸಲ್ಲಿಸಲಾಗಿದೆ. ಆದರೆ ಜನರ ಆಕ್ರೋಶ, ಭಾವನೆಗಳನ್ನು ಲೆಕ್ಕಿಸದೆ ನಮ್ಮ ಮನವಿಯನ್ನು ಕಡೆಗಣಿಸಿದ್ದಾರೆ. ಹೀಗಾಗಿ ಪ್ರತಿಭಟನೆ ನಡೆಸಿದ್ದೇವೆ. ತಕ್ಷಣವೇ ದರ ಏರಿಕೆ ವಾಪಸ್ ಪಡೆಯದಿದ್ದರೆ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸರಕಾರ ಬಂದ ಮೇಲೆ 41,360 ಕೋಟಿ ಹೆಚ್ಚುವರಿ ತೆರಿಗೆ ವಿಧಿಸಲಾಗಿದೆ. ವಿದ್ಯುತ್, ಇಂಧನ, ಮುದ್ರಾಂಕ ಶುಲ್ಕ, ಮಾರ್ಗದರ್ಶಿ ಮೌಲ್ಯ ಹೆಚ್ಚಳ, ಬಸ್ ಪ್ರಯಾಣ ದರ ಏರಿಕೆ ಸೇರಿದಂತೆ ಅನೇಕ ರೀತಿಯಲ್ಲಿ ಸುಲಿಗೆ ಮಾಡಲಾಗುತ್ತಿದೆ. ಇಲ್ಲಿ ಸುಲಿಗೆ ಮಾಡಿ ಅಲ್ಲಿ ಕೊಡುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರಕಾರದ ಕೆಟ್ಟ ನೀತಿಗಳಿಂದ ರಾಜ್ಯದ ಜನರು ಇನ್ನಿಲ್ಲದ ತೊಂದರೆ ಅನುಭವಿಸುತ್ತಿದ್ದಾರೆ. ಈಗ ಚುನಾವಣೆ ನಡೆದರೆ ಆ ಪಕ್ಷಕ್ಕೆ ಐವತ್ತು ಸ್ಥಾನ ಬರುವುದಿಲ್ಲ ಎಂದು ಟೀಕಿಸಿದರು.
ಜೆಡಿಎಸ್ ರಾಜ್ಯ ವಕ್ತಾರ ಹೆಚ್.ಎನ್.ದೇವರಾಜು, ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕ ತಿಮ್ಮೇಗೌಡ, ನಗರ ಘಟಕದ ಕಾರ್ಯಾಧ್ಯಕ್ಷ ಕೆ.ವಿ. ನಾರಾಯಣ ಸ್ವಾಮಿ, ಮಹಾ ಪ್ರಧಾನ ಕಾರ್ಯದರ್ಶಿ ಎಸ್.ರಮೇಶ್, ಕೇಂದ್ರ ಲೋಕಸಭಾ ಕ್ಷೇತ್ರ ಅಧ್ಯಕ್ಷ ನಾಗೇಶ್ವರ ರಾವ್, ದಕ್ಷಿಣ ಲೋಕಸಭಾ ಅಧ್ಯಕ್ಷ ತುಳಸೀ ರಾಮ್, ನಗರ ಅಲ್ಪಸಂಖ್ಯಾತ ಅಧ್ಯಕ್ಷ ಅಫ್ರೋಜ್ ಬೇಗ್ ಹಾಗೂ ಬೆಂಗಳೂರು ನಗರ ಕ್ಷೇತ್ರದ ಅಧ್ಯಕ್ಷರು ಉಪಸ್ಥಿತರಿದ್ದರು.