ಮೈಸೂರು: ಮೈಸೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಧ್ಯಸ್ಥಿಕೆ ಕೇಂದ್ರದ ನೂತನ ಕಟ್ಟಡವನ್ನು ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ಆಡಳಿತಾತ್ಮಕ ನ್ಯಾಯಮೂರ್ತಿ ಎಸ್.ಜಿ ಪಂಡಿತ್ ಅವರು
ಲೋಕಾರ್ಪಣೆ ಮಾಡಿದರು.
ಜಿಲ್ಲಾಡಳಿತ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಮೈಸೂರು ಮತ್ತು ಜಿಲ್ಲಾ ನ್ಯಾಯವಾದಿಗಳ ಸಂಘ, ಇವರುಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಉದ್ಘಾಟನೆ ನಂತರ ನ್ಯಾ. ಎಸ್. ಜಿ. ಪಂಡಿತ್ ಅವರು ಮಾತನಾಡಿ ಸಂಧಾನ ಅಥವಾ ಮಧ್ಯಸ್ಥಿಕೆ ಎಂಬುದು ನಮ್ಮ ದೇಶಕ್ಕೆ ಹೊಸದೇನಲ್ಲ. ಮಹಾಭಾರತದ ಕಾಲದ ಕೃಷ್ಣ ಸಂಧಾನದ ದಿನಗಳಿಂದಲೂ ನಮ್ಮ ಸಂಸ್ಕೃತಿಯಲ್ಲಿ ಈ ಪದ್ಧತಿಯನ್ನು ನಾವು ಅಳವಡಿಸಿಕೊಂಡು ಬಂದಿದ್ದೇವೆ ಎಂದು ಹೇಳಿದರು.
ಇಂದು ನ್ಯಾಯಾಲಯಗಳ ಮೇಲೆ ಎಷ್ಟೊಂದು ಒತ್ತಡವಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಈ ಸಂಧಾನ ಅಥವಾ ಮಧ್ಯಸ್ಥಿಕೆ ಕೇಂದ್ರಗಳು ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸುವ ಮೂಲಕ ತ್ವರಿತ ನ್ಯಾಯದಾನಕ್ಕೆ ಪ್ರಮುಖ ದಾರಿಯಾಗಲಿವೆ ಎಂದು ತಿಳಿಸಿದರು.
ಯಾವುದೇ ಕಕ್ಷಿದಾರರು ಆರಂಭದಲ್ಲಿ ತಮ್ಮ ವಕೀಲರು ಹೇಳಿದಂತೆ ಕೇಳುವ ಪರಿಸ್ಥಿತಿಯಲ್ಲಿರುತ್ತಾರೆ ಮತ್ತು ವಕೀಲರನ್ನೇ ದೇವರೆಂದು ಭಾವಿಸುತ್ತಾರೆ.ಗ್ರಾಹಕರ ವ್ಯಾಜ್ಯಗಳಿಗೆ ಸಂಬಂಧಿಸಿದಂತೆ, ವಕೀಲರು ಕಕ್ಷಿದಾರರ ಮನಸ್ಥಿತಿಯನ್ನು ಅರ್ಥಮಾಡಿಕೊಂಡು ಅವರಿಗೆ ಮೊದಲ ಆದ್ಯತೆಯಾಗಿ ಮಧ್ಯಸ್ಥಿಕೆ ಅಥವಾ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಸಹಕರಿಸಿ ಎಂದು ಸಲಹೆ ನೀಡಿದರು.
ಸಂಧಾನದಿಂದ ಪ್ರಕರಣಗಳು ಎಷ್ಟು ಬೇಗ ತೀರ್ಮಾನವಾಗುತ್ತವೆ ಮತ್ತು ಇದರಿಂದ ಅವರಿಗೆ ಏನೆಲ್ಲಾ ಉಪಯೋಗಗಳಿವೆ ಎಂಬುದನ್ನು ವಕೀಲರು ಮನವರಿಕೆ ಮಾಡಿಕೊಟ್ಟರೆ, ಕಕ್ಷಿದಾರರು ಖಂಡಿತ ಒಪ್ಪಿಕೊಳ್ಳುತ್ತಾರೆ ಹಾಗೂ ಪರಿಹಾರ ಸುಲಭವಾಗುತ್ತದೆ ಎಂದು ಹೇಳಿದರು.
ಮೈಸೂರಿನಲ್ಲಿ ಉದ್ಘಾಟನೆಯಾಗಿರುವ ಸುಸಜ್ಜಿತವಾದ ನೂತನ ಮಧ್ಯಸ್ಥಿಕೆ ಕೇಂದ್ರವನ್ನು ಸಾರ್ವಜನಿಕರು ಹಾಗೂ ನ್ಯಾಯವಾದಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಎಸ್.ಜಿ ಪಂಡಿತ್ ತಿಳಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಉಷಾರಾಣಿ,ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ರಿಜಿಸ್ಟ್ರಾರ್ ಮತ್ತು ಆಡಳಿತಾಧಿಕಾರಿಗಳಾದ ಮಲ್ಲಿಕಾರ್ಜುನ ಈಶ್ವರಪ್ಪ ಕಮತಗಿ,ಜಿಲ್ಲಾಡಳಿತದ ಅಧಿಕಾರಿಗಳು, ಗ್ರಾಹಕ ಆಯೋಗದ ಪದಾಧಿಕಾರಿಗಳು ಹಾಗೂ ಮೈಸೂರು ಜಿಲ್ಲಾ ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳು ಮತ್ತು ವಕೀಲರು ಉಪಸ್ಥಿತರಿದ್ದರು.
