ಮೈಸೂರು: ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದು ತಂದೆ, ತಾಯಿ,ಶಿಕ್ಷಕರು ಹಾಗೂ ಸಮಾಜದ ಎಲ್ಲರ ಜವಾಬ್ದಾರಿ ಎಂದು ಕರ್ನಾಟಕ ರಾಜ್ಯ ಮುಕ್ತ ವಿವಿ ಉಪ ಕುಲಪತಿ ಶರಣಪ್ಪ ವಿ ಹಲಸೆ ತಿಳಿಸಿದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕಾವೇರಿ ಸಭಾಂಗಣದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ ಮತ್ತಿತರ ಇಲಾಖೆ ಹಮ್ಮಿಕೊಂಡಿದ್ದ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಮನೆಯೇ ಮೊದಲ ಪಾಠಶಾಲೆ,ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದು ತಂದೆ ತಾಯಿಗಳ ಪಾತ್ರ ಮೊದಲು, ನಂತರ ಶಿಕ್ಷಕರದ್ದು,ಇವರಿಬ್ಬರೂ ಮಾಡದೆ ಇದ್ದಾಗ ಅಧಿಕಾರಿಗಳ ಪಾತ್ರ ಬರುತ್ತದೆ ಎಂದು ಹೇಳಿದರು.
ಎಲ್ಲಾ ಅಧಿಕಾರಿಗಳು ಮಕ್ಕಳ ಹಕ್ಕುಗಳನ್ನು ರಕ್ಷಿಸುವ ಜವಾಬ್ದಾರಿ ಹೊಂದಿರುತ್ತಾರೆ. ಮಕ್ಕಳನ್ನು ಸಂರಕ್ಷಣೆ ಮಾಡಿ ಅವರ ಹಕ್ಕುಗಳನ್ನು ರಕ್ಷಿಸಿ ಸಮಾಜವನ್ನು ಗಟ್ಟಿಯಾಗಿ ಕಟ್ಟಬೇಕು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಪಿ. ಶಿವರಾಜು ಅವರು ಮಾತನಾಡಿ ಮಕ್ಕಳು ಎದುರಿಸುವ ಸವಾಲುಗಳನ್ನು ನಾವು ಅರಿತುಕೊಳ್ಳಬೇಕು. ಕಾನೂನು ಈ ದೇಶದ ದೇವರು ಎಂದು ಹೇಳಬಹುದು. ಕಾನೂನಿನ ಅಡಿಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಮಾಡಬೇಕು. ಎಲ್ಲಾ ಮಕ್ಕಳನ್ನು ಪ್ರೀತಿ ವಾತ್ಸಲ್ಯದಿಂದ ಕಾಣಬೇಕು ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಬಿ ಜಿ ದಿನೇಶ್ ಅವರು ಮಾತನಾಡಿ ಇತ್ತೀಚಿನ ದಿನಗಳಲ್ಲಿ ಬೆಂಗಳೂರು ನಗರವನ್ನು ಹೊರತು ಪಡಿಸಿದರೆ ಮೈಸೂರು ನಗರದಲ್ಲಿ ಹೆಚ್ಚು ಪೋಕ್ಸೋ ಪ್ರಕರಣಗಳು ಕಂಡುಬರುತ್ತಿವೆ. ಎಷ್ಟೋ ಪ್ರಕರಣಗಳು ದಾಖಲಾಗುವುದಿಲ್ಲ. ಮಕ್ಕಳ ಹಕ್ಕುಗಳ ರಕ್ಷಣೆಗೆ ಪ್ರತ್ಯೇಕ ಅಧಿಕಾರಿಗಳನ್ನು ನೇಮಿಸಲಾಗಿದೆ. ಬಾಲ್ಯ ವಿವಾಹ ನಿಷೇಧ ಕಾನೂನು ಇದ್ದರೂ ಸಹ ಬಾಲ್ಯ ವಿವಾಹಗಳು ನಡೆಯುತ್ತಿವೆ. ಬಾಲ್ಯ ವಿವಾಹವು ನಡೆಯುತ್ತಿದೆ ಎಂದು ನ್ಯಾಯಾಧೀಶರ ಗಮನಕ್ಕೆ ಬಂದರೆ ಅಂಥಹ ಬಾಲ್ಯ ವಿವಾಹವನ್ನು ತಡೆಗಟ್ಟಲು ಆದೇಶವನ್ನು ಹೊರಡಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ಇದೆ. ಬಾಲ್ಯ ವಿವಾಹ ತಡೆಗಟ್ಟಲು ಇರುವ ಸದಸ್ಯ ಅಧಿಕಾರಿಗಳು ಬಾಲ್ಯ ವಿವಾಹ ಆಗುತ್ತಿರುವುದು ಗಮನಕ್ಕೆ ಬಂದರೂ ಸುಮ್ಮನಿದ್ದರೆ ಅಂಥಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬಹುದು ಎಂದು ಮಾಹಿತಿ ನೀಡಿದರು.
ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದ್ದು. ಶಾಲಾ ಹಂತದಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣವನ್ನು ನೀಡಬೇಕು ಎಂದು ಸಲಹೆ ನೀಡಿದರು.
ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ರಾದ ಮಂಜು, ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರವೀಣ್ ಕೆ ವಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿವಿಧ ಸಂಘ ಸಂಸ್ಥೆಗಳು ಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

