ಮೈಸೂರು: ಮೈಸೂರಿನಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವಿದ್ದು, ಬೀದಿ ಬದಿ ವ್ಯಾಪಾರಿಗಳ ವಲಯ ಸ್ಥಾಪಿಸಬೇಕೆಂದು ಸಂಸದ ಯದುವೀರ್ ಒಡೆಯರ್ ಸೂಚಿಸಿದರು.
ಮೈಸೂರಿನಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಂಸದರು, ಬೀದಿಬದಿ ಮಾರಾಟಗಾರರಿಗೆ ಪೂರಕವಾಗಿ ಕೆಲವು ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಹೇಳಿದರು.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಯಾವುದೇ ತೊಂದರೆ ಎದುರಾಗಬಾರದು, ಮೈಸೂರಿನಲ್ಲಿ ಬೀದಿ ಮಾರಾಟ ವಲಯಗಳನ್ನು ಅಭಿವೃದ್ಧಿಪಡಿಸಲು ಅಧಿಕಾರಿಗಳು ಯೋಜನೆ ರೂಪಿಸಬೇಕು ಎಂದು ಸಲಹೆ ನೀಡಿದರು.
ನಗರದಲ್ಲಿ ಸುರಕ್ಷತೆ, ಭದ್ರತೆ ಮತ್ತು ಸ್ವಚ್ಛತೆ ಕಾಪಾಡಬೇಕು ಎಲ್ಲಾ ಮಾರಾಟಗಾರರಿಗೆ ಸರಿಯಾದ ವ್ಯವಸ್ಥೆಗಳನ್ನು ಮಾಡಬೇಕು. ವಲಯಗಳನ್ನು ರಚಿಸುವ ಪ್ರಕ್ರಿಯೆಯಲ್ಲಿ ಯಾವುದೇ ವ್ಯಾಪಾರಿಗಳಿಗೆ ತೊಂದರೆಯಾಗಬಾರದು ಎಂದು ಸಂಸದರು ಅಧಿಕಾರಿಗಳಿಗೆ ಸೂಚಿಸಿದರು.
ಎಲ್ಲಾ ಮಾರಾಟಗಾರರಿಗೆ ಸರಿಯಾದ ಮಾರ್ಗದರ್ಶನ ನೀಡಬೇಕು ಎಂದು ಯದುವೀರ್ ಹೇಳಿದರು.
ಮೈಸೂರು ಸ್ವಚ್ಛ ಮತ್ತು ಪರಂಪರೆಯ ನಗರವಾಗಿದೆ.ಇದನ್ನು ಮುಂದುವರಿಸಿಕೊಂಡು ಹೋಗಲು ಕೆಲವು ಪರಿಣಾಮಕಾರಿ ಯೋಜನೆ ರೂಪಿಸಬೇಕು ಎಂದು ಯದುವೀರ್ ತಿಳಿಸಿದರು.
ಕೆಲವು ಬೀದಿಬದಿ ವ್ಯಾಪಾರಿಗಳ ವಲಯಕ್ಕೆ ಅಧಿಕಾರಿಗಳೊಂದಿಗೆ ಭೇಟಿ ಮಾಡಿ ಪರಿಶೀಲನೆ ನಡೆಸುತ್ತೇನೆ. ಶೀಘ್ರದಲ್ಲೇ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ ಎಂದು ಸಂಸದರು ಮಾಹಿತಿ ನೀಡಿದರು.
ಸಭೆಯಲ್ಲಿ ಹಿರಿಯ ಅಧಿಕಾರಿಗಳು, ವಿವಿಧ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.
