ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆ ಅಧಿಕಾರಿ ನೇಮಕಾತಿಗೆ ಕ್ರಮ ಕೈಗೊಳ್ಳಿ:ಸಿಎಂ

Spread the love

ಬೆಂಗಳೂರು: ರಾಜೀವ್‌ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗೆ ಒದಗಿಸುವಂಯೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಕೃಷ್ಣಾದಲ್ಲಿ ಗುರುವಾರ ನಡೆದ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಸಿಎಂ
ಈ ಸೂಚನೆ ನೀಡಿದರು.

ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿ ನೇಮಕಾತಿಗೆ ಕ್ರಮ ಕೈಗೊಳ್ಳುವಂತೆಯೂ ಸಲಹೆ ನೀಡಿದರು.

ಪ್ರಸ್ತುತ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗೆ ರೂ.400 ಕೋಟಿ ಹಾಗೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕೆ 130 ಕೋಟಿ ಅನುದಾನ ಒದಗಿಸಲಾಗಿದೆ,ಈ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಿ ಎಂದು ಹೇಳಿದರು.

2024-25 ನೇ ಸಾಲಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ರೂ.4331 ಕೋಟಿ ಅನುದಾನ ಹಂಚಿಕೆ ಮಾಡಲಾಗಿದ್ದು, ಇದುವರೆಗೆ ರೂ.3099 ಕೋಟಿ ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ರೂ.3005 ಕೋಟಿ ವೆಚ್ಚ ಮಾಡಲಾಗಿದ್ದು, ಬಿಡುಗಡೆ ಮೊತ್ತಕ್ಕೆ ಶೇ. 96.97 ಪ್ರಗತಿ ಸಾಧಿಸಲಾಗಿದೆ ಎಂದು ಸಚಿವ ಶರಣಪ್ರಕಾಶ ಪಾಟೀಲ್ ವಿವರಿಸಿದರು.

2023-24 ಸಾಲಿನಲ್ಲಿ ಅನುಮೋದನೆಗೊಂಡ ಎಲ್ಲಾ ಕಾಮಗಾರಿಗಳನ್ನು ನಿಗದಿತ ಸಮಯದ ಒಳಗಾಗಿ ಪೂರ್ಣಗೊಳಿಸಬೇಕು,ಗದಗ, ಕೊಪ್ಪಳ, ಕಾರವಾರ,ಕೊಡಗು ಜಿಲ್ಲೆಗಳಲ್ಲಿ ನಿರ್ಮಾಣ ಹಂತದಲ್ಲಿರುವ 450 ಹಾಸಿಗೆ ಆಸ್ಪತ್ರೆಗಳ ನಿರ್ಮಾಣವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು,
ಕ್ಯಾನ್ಸರ್‌ ಪ್ರಮಾಣ ಹೆಚ್ಚಳವಾಗಲು ಕಾರಣ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಬೇಕು. ಕ್ಯಾನ್ಸರ್‌ ಚಿಕಿತ್ಸೆಗೆ ಅಂತಾರಾಷ್ಟ್ರೀಯ ಗುಣಮಟ್ಟದ ಚಿಕಿತ್ಸೆ ರಾಜ್ಯದಲ್ಲಿಯೇ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು.