ಮೈಸೂರು: ವೀರಶೈವ ಲಿಂಗಾಯತ ಸಮುದಾಯದ ಬಗ್ಗೆ ಹಗುರವಾಗಿ ಹೇಳಿಕೆ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.
ಮೈಸೂರಿನ ಬಸವ ಪುತ್ಥಳಿ ಬಳಿ ವೀರಶೈವ ಲಿಂಗಾಯತ ಯುವ ವೇದಿಕೆ ಮತ್ತು ಮಹಿಳಾ ಘಟಕದ ವತಿಯಿಂದ ನಾಗಲಕ್ಷ್ಮಿ ಚೌದರಿ ಅವರ ವಿರುದ್ಧ ಭಿತ್ತಿ ಪತ್ರ ಪ್ರದರ್ಶನ ಮಾಡಿ ವಿವಿಧ ಘೋಷಣೆಗಳನ್ನು ಕೂಗುತ್ತ ಪ್ರತಿಭಟನೆ ನಡೆಸಿ, ಮಹಿಳಾ ಆಯೋಗದ ಅಧ್ಯಕ್ಷೆ ಸ್ಥಾನದಿಂದ ವಜಾ ಗೊಳಿಸುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವೀರಶೈವ ಮುಖಂಡ ಹಾಗೂ ಜನರಿಗಾಗಿ ಸೇವಾ ಸಮಿತಿ ಅಧ್ಯಕ್ಷ ಮಹೇಶ್ ಕುಮಾರ್, ಲಿಂಗಾಯತ ಧರ್ಮದ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷರು ಹಗುರವಾದ ಹೇಳಿಕೆಯನ್ನು ನೀಡಿದ್ದಾರೆ ಇದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಾವು ಇಂದಿಗೂ ಬಸವತತ್ವ ವನ್ನು ಅನುಸರಿಸುತ್ತಾ ಬರುತ್ತಿದ್ದೇವೆ ಇದನ್ನು ಅರಿಯದೆ ಸಮುದಾಯದ ಬಗ್ಗೆ ಮಾತನಾಡಿರುವುದು ಖಂಡನೀಯ ಎಂದು ಹೇಳಿದರು.
ವೀರಶೈವ ಲಿಂಗಾಯತ ಸಮುದಾಯದ ಯುವ ನಾಯಕ ತೇಜಸ್ವಿ ನಾಗಲಿಂಗಸ್ವಾಮಿ ಮಾತನಾಡಿ, ಖಾಸಗಿ ಸುದ್ದಿ ವಾಹಿನಿಯಲ್ಲಿ ಘಟನೆ ಯೊಂದನ್ನು ಉಲ್ಲೇಖಿಸಿ ವೀರಶೈವ ಲಿಂಗಾಯತ ಸಮುದಾಯದ ಕುರಿತು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ,ವರ ಈ ಹೇಳಿಕೆಯಿಂದ ವೀರಶೈವ ಲಿಂಗಾಯತ ಸಮುದಾಯಕ್ಕೆ ನೋವುಂಟಾಗಿದೆ,ಜವಾಬ್ದಾರಿ ಸ್ಥಾನದಲ್ಲಿರುವವರು ತಮ್ಮ ಸ್ಥಾನಕ್ಕೆ ಗೌರವ ತರುವ ಹೇಳಿಕೆ ನೀಡಬೇಕು ಎಂದು ತಿಳಿಸಿದರು.
ಕೂಡಲೇ ರಾಜ್ಯ ಸರ್ಕಾರ ವೀರಶೈವ ಲಿಂಗಾಯತರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ನಾಗಲಕ್ಷ್ಮಿ ಚೌಧುರಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ವೀರಶೈವ ಮೂರ್ತಿ, ಪುಟ್ಟ ಬುದ್ಧಿ, ನವೀನ್, ನಂಜುಂಡಸ್ವಾಮಿ, ಸರ್ವಮಂಗಳ, ಮಣಿ, ನಾಗವೇಣಿ, ತ್ರೀವೇಣಿ, ಗೌರಮ್ಮ, ಜಿ, ಮಹದೇವಮ್ಮ, ನಿಲಾವೇಣಿ, ಕಮಲ, ಶಿಲ್ಪ, ಮತ್ತಿತರರು ಪಾಲ್ಗೊಂಡಿದ್ದರು.
