ಮತ್ತೆ ರಾಜ್ಯಾಧ್ಯಕ್ಷನಾಗಿ ಪಕ್ಷ ಬಲಪಡಿಸುತ್ತೇನೆ:ವಿಜಯೇಂದ್ರ

Spread the love

ಶಿವಮೊಗ್ಗ: ಒಂದು ವಾರದ ನಂತರ ಎಲ್ಲವೂ ಸರಿಯಾಗಲಿದೆ, ನಾನು ಮತ್ತೆ ರಾಜ್ಯಾಧ್ಯಕ್ಷನಾಗಿ ಪಕ್ಷ ಬಲಪಡಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವದ ವ್ಯವಸ್ಥೆ ಇದೆ. ಯಾವುದೇ ರಾಜಕೀಯ ಪಕ್ಷದಲ್ಲಿ ಈ ವ್ಯವಸ್ಥೆಯಿಲ್ಲ, ಮಂಡಲ ಮಟ್ಟದಿಂದ ಹಿಡಿದು ಜಿಲ್ಲಾ ಮಟ್ಟ, ರಾಜ್ಯಾಧ್ಯಕ್ಷರ ಚುನಾವಣೆ ಮತ್ತು ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ಎಲ್ಲವೂ ಕೂಡ ವ್ಯವಸ್ಥಿತವಾಗಿ ನಡೆಯುತ್ತಿವೆ. ಕೇಂದ್ರದ ವರಿಷ್ಠರು ನಿರ್ಧಾರ ಮಾಡಿದಂತೆ ಎಲ್ಲವೂ ನಡೆಯುತ್ತಿದೆ ಎಂದು ಹೇಳಿದರು.

ಯತ್ನಾಳ್ ಬಣ ರೆಬೆಲ್ ಆಗಿದಿಯಲ್ಲ ಎಂಬ ಪ್ರಶ್ನೆಗೆ, ಪ್ರತಿಕ್ರಿಯಿಸಿ, ಯತ್ನಾಳ್ ಅವರ ನೇತೃತ್ವದ ಬಣ ರಾಜ್ಯಾಧ್ಯಕ್ಷರ ಹುದ್ದೆಗೆ ಸ್ಪರ್ಧಿಸುವ ತಯಾರಿ ನಡೆಸಿದೆ ಎಂದು ಉತ್ತರಿಸಿದರು.

ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ನಮ್ಮ ಎಲ್ಲಾ ಕಾರ್ಯಕರ್ತರು, ಪಕ್ಷದ ಹಿರಿಯರು ಒಟ್ಟಾಗಿ ಭ್ರಷ್ಟ ಹಾಗೂ ದುಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದೇವೆ. ನನ್ನ ಕಳೆದ ಒಂದು ವರ್ಷದ ಅವಧಿಯಲ್ಲಿ, ರಾಜ್ಯಾಧ್ಯಕ್ಷನಾಗಿ ಯಾವ ರೀತಿ ಕೆಲಸ ಮಾಡಿದ್ದೇನೆ ಎಂಬುದು ರಾಜ್ಯದ ಜನತೆಗೂ ಗೊತ್ತಿದೆ, ನಮ್ಮ ಕಾರ್ಯಕರ್ತರಿಗೂ ಗೊತ್ತಿದೆ. ಪಕ್ಷದ ಹಿರಿಯರು, ಶಾಸಕರಿಗೂ ಕೂಡ ಗೊತ್ತಿದೆ. ಎಲ್ಲರ ಸಹಕಾರದಿಂದ ರಾಜ್ಯಾಧ್ಯಕ್ಷನಾಗಿ ಮುಂದುವರಿದು ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತೇನೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ವಿಜಯೇಂದ್ರ ತಿಳಿಸಿದರು.