ಬೆಂಗಳೂರು: ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದ ಹಾಗೆ ಅಸಮಾನತೆ ಕೂಡಾ ಹೆಚ್ಚುತ್ತಾ ಹೋಗುತ್ತದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆ ಹಿನ್ನೆಲೆಯಲ್ಲಿ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ 21ನೇ ಶತಮಾನಕ್ಕೆ ಮಹಾತ್ಮಗಾಂಧೀಜಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಸಿಎಂ ಮಾತನಾಡಿದರು.
ಜಾತಿ ವ್ಯವಸ್ಥೆಯಿಂದ ಬಹು ಜನರು ಶಿಕ್ಷಣದಿಂದ ವಂಚಿತರಾದರು,ಹಾಗಾಗಿ ಅಸಮಾನತೆ ಹೆಚ್ಚಾಯಿತು ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ,ಜಾತಿ ಅಸಮಾನತೆಯ ಪೋಷಕರೇ ಮಹಾತ್ಮಗಾಂಧಿಯವರನ್ನು ಕೊಂದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಗಾಂಧೀಜಿ ವಿಚಾರಗಳು, ಸಮಾಜಕ್ಕೆ ನೀಡಿದ ಮಾರ್ಗದರ್ಶನಗಳು 20ನೇ ಶತಮನಕ್ಕೆ ಮಾತ್ರ ಸೀಮಿತವಾಗಿಲ್ಲ. ಈಗಿನ ಕಾಲಕ್ಕೂ ಪ್ರಸ್ತುತವಾಗಿವೆ ಎಂದು ಸಿಎಂ ತಿಳಿಸಿದರು.
ಮನುಷ್ಯ ತನ್ನ ನೆಮ್ಮದಿಗಾಗಿ ಬೇರೆ ಗ್ರಹಗಳನ್ನು ಹುಡುಕಿಕೊಂಡು ಹೋಗುವಂತಾಗಬಾರದು ಎನ್ನುವ ಸ್ಟೀಫನ್ ಹಾಕಿಂಗ್ ಅವರ ಮಾತನ್ನು ಪ್ರಸ್ತಾಪಿಸಿ, ಮನುಷ್ಯ ಮನುಷ್ಯರ ನಡುವೆ ಸಹಿಷ್ಣುತೆ ರೂಢಿಸಿಕೊಳ್ಳದಿದ್ದರೆ ಸರ್ವನಾಶವಾಗುತ್ತದೆ. ಕೋಮು ಭಾವನೆ ಹೀಗೇ ಬೆಳೆದರೆ ಕವೆಂಪು ಅವರ ವಿಶ್ವ ಮಾನವ ಆಶಯ ಈಡೇರುವುದು ಕಷ್ಟವಾಗುತ್ತದೆ ಎಂದು ಸಿದ್ದು ಅಭಿಪ್ರಾಯ ಪಟ್ಟರು.
ಬಹಳ ಮಂದಿ ಶಿಕ್ಷಿತರೇ ಕಂದಾಚಾರ, ಕರ್ಮ ಸಿದ್ಧಾಂತ, ಮೌಡ್ಯವನ್ನು ಆಚರಿಸುತ್ತಾರೆ. ಇದಕ್ಕೆ ಸರಿಯಾದ ವೈಜ್ಞಾನಿಕ ಶಿಕ್ಷಣದ ಕೊರತೆಯೇ ಕಾರಣ. 850 ವರ್ಷಗಳ ಹಿಂದೆಯೇ ಬಸವಾದಿ ಶರಣರು ಕರ್ಮ ಸಿದ್ಧಾಂತವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದರು. ಆದರೆ ಈಗಿನ ಕೆಲವು ಶಿಕ್ಷಿತರೇ ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ನೆಹರೂ ಅವರು ವೈಜ್ಞಾನಿಕ ಮತ್ತು ವೈಚಾರಿಕ ಮಾರ್ಗದಲ್ಲಿ ಸಮಾಜವನ್ನು ಸನ್ನದ್ದಗೊಳಿಸಿ ದೇಶವನ್ನು ಮುನ್ನಡೆಸುತ್ತಿದ್ದರು ಎಂದರು.
ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ಈಡೇರಿಸಬೇಕಾಗಿದೆ. ಗಾಂಧಿಯವರ ಆಶಯದಂತೆ ರಾತ್ರಿ 12 ಗಂಟೆಗೂ ನಮ್ಮ ಹೆಣ್ಣು ಮಕ್ಕಳು ನಿರ್ಭಯದಿಂದ ಓಡಾಡುವಂತಾಗಬೇಕಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷರಾದ ರಾಮಚಂದ್ರ ರಾಹಿ, ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಕಾರ್ಯಾಧ್ಯಕ್ಷರಾದ ವಿಶುಕುಮಾರ್ , ನವದೆಹಲಿ ಸ್ಮಾರಕ ನಿಧಿ ಅಧ್ಯಕ್ಷ ಸಂಜೋಯ್ ಸಿಂಗ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.