ಮೈಸೂರು: ದೇಶದಲ್ಲಿ ಉಗ್ರರ ದಾಳಿ ತಡೆಯುವಲ್ಲಿ ವಿಫಲವಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್ ಆಗ್ರಹಿಸಿದ್ದಾರೆ.
ಗುರುವಾರ ಸಿದ್ದಾರ್ಥ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಅಪರ ಜಿಲ್ಲಾಧಿಕಾರಿ ಶಿವರಾಜ್ ಮೂಲಕ ಅಮಿತ್ ಶಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ರಾಷ್ಟ್ರಪತಿಗೆ ಮನವಿ ಸಲ್ಲಿಸಿ ನಜರ್ಬಾದ್ ನಟರಾಜ್ ಮಾತನಾಡಿದರು.
ಕಾಶ್ಮೀರದ ಕಹಿ ಘಟನೆ ಮರೆಯುವ ಮುನ್ನವೇ ನವದೆಹಲಿಯ ಕೆಂಪು ಕೋಟೆಯ ಕೂಗಳತೆ ದೂರದಲ್ಲಿ ಉಗ್ರರು ಬಾಂಬ್ ಸ್ಫೋಟಿಸಿ, ಅಮಾಯಕ ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ, ಈ ಘಟನೆಯನ್ನು ಕಾಂಗ್ರೆಸ್ ಖಂಡಿಸುತ್ತೇದೆ ಎಂದು ಹೇಳಿದರು.
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ದೇಶದ ಮೇಲೆ ಉಗ್ರರ ದಾಳಿಯಾಗುತ್ತಿದೆ. ಇದೀಗ ದೇಶದ ರಾಜಧಾನಿಯಲ್ಲೇ ಉಗ್ರರ ದಾಳಿಯಾಗಿದ್ದು, ಅಮಿತ್ ಶಾ ಅವರು ಸಚಿವರಾಗಿ ತಮ್ಮ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲರಾಗಿ ದ್ದಾರೆ ಎನ್ನುವುದನ್ನು ಸಾಬೀತು ಪಡಿಸಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಲೋಕೇಶ್, ಎಸ್ ಎನ್ ರಾಜೇಶ್, ನಿತೀಶ್ ಕುಮಾರ್, ಮಂಜು ಮತ್ತಿತರರು ಹಾಜರಿದ್ದರು.
ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಡಾ. ಬಿಆರ್ ಅಂಬೇಡ್ಕರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಅಮಿತ್ ಶಾ ಹೇಳಿಕೆ ಖಂಡಿಸಿ ಈಗಾಗಲೇ ಕಾಂಗ್ರೆಸ್ ವಿವಿಧೆಡೆ ಹೋರಾಟ ಪ್ರಾರಂಭಿಸಿದೆ.
ನಿನ್ನೆಯಷ್ಟೇ ಕಾಂಗ್ರೆಸ್ ಮುಖಂಡರೂ ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್ ಅಮಿತ್ ಶಾ ವಿರುದ್ದ ರಾಜ್ಯವ್ಯಾಪಿ ಕಾಂಗ್ರೆಸ್ ಪ್ರತಿಭಟನೆ ಮಾಡಲಿದೆ ಎಂದು ತಿಳಿಸಿದ್ದರು.
ಅದರಂತೆ ಇಂದು ಮೈಸೂರು ನಗರ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಮಹಾದೇವಪ್ಪ, ಪಶು ಸಾoಗೋಪನ ಸಚಿವ ಕೆ. ವೆಂಕಟೇಶ್ ಅವರ ಮುಂದಾಳತ್ವದಲ್ಲಿ ಭಾರೀ ಪ್ರತಿಭಟನೆ ನಡೆಸಿದರು.
ಈ ದೇಶಕೆ ಸಂವಿಧಾನ ನೀಡಿದ ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ಧ ಅಮಿತ್ ಹೇಳಿಕೆ ನೀಡಿರುವುದನ್ನು ಖಂಡಿಸುತ್ತೇವೆ, ಕೂಡಲೇ ರಾಷ್ಟ್ರಪತಿಯವರು ಅಮಿತ್ ಶಾ ಅವರನ್ನು ತಕ್ಷಣ ಗೃಹ ಮಂತ್ರಿ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಕೂಡಲೇ ಅಮಿತ್ ಶಾ ಬಂಧನವಾಗಬೇಕು ಎಂದು ಕಾಂಗ್ರೆಸ್ ನಿಯೋಗ ಆಗ್ರಹಿಸಿತು.ಅಮಿತ್ ಶಾ ಅವರ ಪರವಾಗಿ ನಿಂತಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರಕ್ಕೆ ದಿಕ್ಕಾರ ಎಂದು ಕಾರ್ಯಕರ್ತರು ಘೋಷಣೆ ಕೂಗಿದರು.
ನರೇಂದ್ರ ಮೋದಿ ಮತ್ತು ಅಮಿತ್ ಶಾ ಭಾವಚಿತ್ರಗಳನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಹಿಡಿದು ಜಯಕಾರ ಹಾಕಿದರು.
ಪ್ರತಿಭಟನೆಯಲ್ಲಿ ಶಾಸಕರಾದ ಡಿ. ರವಿಶಂಕರ್, ಅನಿಲ್ ಚಿಕ್ಕಮಾದು, ವಿಧಾನಪರಿಷತ್ ಸದಸ್ಯರಾದ ಡಾ ಯತೀಂದ್ರ ಸಿದ್ದರಾಮಯ್ಯ, ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಅಯೂಬ್ ಖಾನ್, ಕೆಪಿಸಿಸಿ ಸದಸ್ಯರಾದ ನಜರ್ ಬಾದ್ ನಟರಾಜ್ ಸೇರಿದಂತೆ ಜಿಲ್ಲೆಯಾದ್ಯಂತ ಹಲವಾರು ಮುಖಂಡರು ಪಾಲ್ಗೊಂಡಿದ್ದರು.
ಮೈಸೂರು: ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ರವರ ಬಗ್ಗೆ ಅವಹೇಳನ ಮತ್ತು ದ್ವೇಷದ ಮಾತನ್ನಾಡಿರುವ ಕೇಂದ್ರಗೃಹ ಸಚಿವ ಅಮಿತ್ ಷಾರನ್ನು ಸಂಸದ ಸ್ಥಾನದಿಂದ ವಜಗೊಳಿಸಬೇಕೆಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.
ಮೈಸೂರಿನ ಟೌನ್ ಹಾಲ್ ಮುಂಭಾಗ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸದಸ್ಯರು,ಮತ್ತಿತರರು ಬೃಹತ್ ಪ್ರತಿಭಟನೆ ನಡೆಸಿ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿದರು,ಜತೆಗೆ ಯುಎಪಿಎ ಕಾಯ್ದೆಯಡಿ ಬಂಧಿಸಬೇಕೆಂದು ಆಗ್ರಹಿಸಿದರು.
ಸಂವಿಧಾನ ಶಿಲ್ಪಿ ವಿಶ್ವಜ್ಞಾನಿ ಡಾ. ಬಿ ಆರ್ ಅಂಬೇಡ್ಕರ್ ಅವರು ಸಮಾನತೆ, ಸಹಬಾಳ್ವೆ, ಭಾತೃತ್ವ, ಜಾತ್ಯತೀತ ಧರ್ಮ, ನಿರಪೇಕ್ಷ, ಸಂವಿಧಾನವನ್ನು ಈ ದೇಶಕ್ಕೆ ನೀಡಿದ್ದಾರೆ.
ಇಂತಹ ವಿಶ್ವ ಶ್ರೇಷ್ಠ ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವುದು ಸಂವಿಧಾನದ ಕರ್ತವ್ಯವನ್ನು ಗೌರವಿಸುವುದು ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವುದು ಆಡಳಿತ ನಡೆಸುವ ಸರ್ಕಾರಗಳ ಕರ್ತವ್ಯವಾಗಿದೆ ಎಂದು ಹೇಳಿದರು.
ಗೌರವಾನ್ವಿತ ಸಾಂವಿಧಾನಿಕ ಹುದ್ದೆ ಹೊಂದಿರುವ ಕೇಂದ್ರ ಸರ್ಕಾರದ ಗೃಹ ಮಂತ್ರಿ ಆಮಿತ್ ಶಾ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಬಗ್ಗೆ ರಾಜ್ಯಸಭೆಯಲ್ಲಿ ಅಸಹನೆ ಮತ್ತು ದ್ವೇಷದ ಮಾತ ನಾಡಿರುವುದು ಅವರ ವಿಕೃತ ಮನಸ್ಥಿತಿಗೆ ಸಾಕ್ಷಿಯಾಗಿದೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
ಹಿಂದಿನಿಂದಲೂ ಸಂವಿಧಾನ ಸುಡುವ ಹಾಗೂ ಸಂವಿಧಾನ ಬದಲಿಸುವ ಹೇಳಿಕೆಗಳನ್ನು ನೀಡುತ್ತಾ, ಅಲ್ಪಸಂಖ್ಯಾತರು ಮತ್ತು ಶೋಷಿತ ಸಮುದಾಯಗಳ ವಿರುದ್ಧ ದ್ವೇಷ ಬಿತ್ತಿ ಅರಾಜಕತೆ ಸೃಷ್ಟಿಸಿ ಅಸಹನೆಯಿಂದಲೇ ರಾಜಕೀಯ ಮಾಡುತ್ತಾ ಅಧಿಕಾರಕ್ಕೆ ಬಂದಿರುವ ಬಿಜೆಪಿ ಮತ್ತು ಆರ್ ಎಸ್ ಎಸ್ ಸಂಘ ಪರಿವಾರದ ಮುಖ್ಯಸ್ಥರಾಗಿರುವ ಅಮಿತ್ ಶಾ ಅವರು ಹಿಂದೆ ಗುಜರಾತ್ ರಾಜ್ಯದಲ್ಲಿ ಕೋಮು ಸೌಹಾರ್ದತೆಗೆ ಬೆಂಕಿ ಇಟ್ಟಿದ್ದರು. ನ್ಯಾಯಾಧೀಶರ ಕೊಲೆ ಪ್ರಕರಣದಲ್ಲಿ ಕ್ರಿಮಿನಲ್ ಅಪರಾಧಿಯಾಗಿ ಗಡಿಪಾರಾಗಿದ್ದವರು, ಅಂತವರು ಸಂಸದರಾಗಲು ಅರ್ಹತೆ ಇಲ್ಲ ಎಂದು ಒಕ್ಕೂಟದ ಮುಖಂಡರು ಕಿಡಿಕಾರಿದರು
ದೇಶದ ಕಾನೂನು ಸುವ್ಯವಸ್ಥೆ ಕಾಪಾಡುವ ಪ್ರಮುಖ ಹುದ್ದೆಯಾದ ಗೃಹ ಖಾತೆಯ ಜವಾಬ್ದಾರಿ ಹೊತ್ತಿರುವ ಶಾ ಅಸಮಾನತೆಯ ಮನಸ್ಕೃತಿ ಯನ್ನು ಜಾರಿಗೆ ತರಲು ಯತ್ನಿಸಿದ್ದಾರೆ,ಅಂಥವರ ಬೆಂಬಲಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಿಂತಿರುವುದನ್ನು ದಲಿತ ಸಂಘಟನೆಗಳು ತೀರ್ವವಾಗಿ ಖಂಡಿಸುತ್ತದೆ ಎಂದು ಕಾರವಾಗಿ ಘೋಷಣೆ ಕೂಗಿದರು.
ಅಂಬೇಡ್ಕರ್ ಅವರು ದೇಶದ ಹಾಗೂ ಎಲ್ಲ ವರ್ಗಗಳ ಅಸ್ಮಿತೆ.ಅವರ ಬಗ್ಗೆ ಅಂಬೇಡ್ಕರ್ ಅಂಬೇಡ್ಕರ್ ಎನ್ನುವುದು ಈಗ ಫ್ಯಾಷನ್ ಆಗಿದೆ. ಅಂಬೇಡ್ಕರನ್ನು ಸ್ಮರಿಸುವ ಬದಲು ದೇವರನ್ನು ಸ್ಮರಿಸಿದರೆ ಸ್ವರ್ಗಕ್ಕೆ ಹೋಗುತ್ತಿದ್ದಿರಿ ಎಂದು ಹಿರಿಯರ ಚಾವಡಿಯಾದ ರಾಜ್ಯಸಭೆಯಲ್ಲಿ ಅಮಿತ್ ಶಾ ಹೇಳಿರುವದನ್ನು ಇಡೀ ದೇಶ ಖಂಡಿಸಬೇಕು ಎಂದು ಮುಖಂಡರು ಕರೆನೀಡಿದರು.
ಇಂತಹ ಕೆಟ್ಟ ಹೇಳಿಕೆ ನೀಡಿ ಕೋಟ್ಯಂತರ ಭಾರತೀಯರನ್ನು ಅವಮಾನಿಸಿರುವ ಅಮಿತ್ ಶಾರನ್ನು ಸಂಸದ ಸ್ಥಾನದಿಂದ ವಜಾಗೊಳಿಸಿ ಯುಎಪಿಎ ಕಾಯ್ದೆಯಡಿ ಬಂಧಿಸಬೇಕೆಂದು ಆಗ್ರಹಿಸಿ ರಾಷ್ಟ್ರಪತಿಗಳಿಗೆ ಮನವಿ ರವಾನಿಸಲಾಯಿತು.
ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪ್ರಮುಖರಾದ ದೇವಗಳ್ಳಿ ಸೋಮಶೇಖರ್, ನಾ ದಿವಾಕರ್, ಕೆ ಆರ್ ಸುಮತಿ, ಸವಿತಾ ಮಲ್ಲೇಶ್, ಟಿ ಗುರುರಾಜ್, ರತಿ ಮೇಡಂ, ಕೆ ಆರ್ ಗೋಪಾಲಕೃಷ್ಣ, ಶಂಭುಲಿಂಗ ಸ್ವಾಮಿ, ಹರಕುಮಾರ್ ಸಣ್ಣಸ್ವಾಮಿ, ಕಲ್ಲಳ್ಳಿ ಕುಮಾರ್, ಗುರುಸ್ವಾಮಿ, ಕಾಮ್ರೆಡ್ ಜಗನ್ನಾಥ್, ಎಸ್. ಎಫ್.ಐ.ನ ಕಾಮ್ರೆಡ್ಗಳು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಮೈಸೂರು: ಸಂಸತ್ತಿನಲ್ಲಿ ಡಾ. ಬಿ. ಆರ್ ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಮೈಸೂರಿನಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಎಲ್ಲಾ ವಿಭಾಗಗಳ ಮುಖಂಡರು ಮತ್ತು ಕೆಪಿಸಿಸಿ ಮೈಸೂರು ಘಟಕದ ಸದಸ್ಯರು ಅಮಿತ್ ಶಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಅಮಿತ್ ಶಾ ಭಾವಚಿತ್ರಗಳನ್ನು ಹರಿದು ಎಸೆದು ಚಿತ್ರಕ್ಕೆ ಬೆಂಕಿ ಹಚ್ಚಿ ಕಿಡಿಕಾರಿದರು.ಬಿಜೆಪಿ ಮತ್ತು ಅಮಿತ್ ಶಾ ವಿರುದ್ದ ಘೋಷಣೆ ಕೂಗಿದರು.
ಪ್ರತಿಭಟನೆ ವೇಳೆ ಪೊಲೀಸರು ಬಂಧಿಸಲು ಮುಂದಾದಾಗ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಕೂಡಾ ನಡೆಯಿತು.
ಈ ವೇಳೆ ಮಾತನಾಡಿದ ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್, ಅಮಿತ್ ಶಾ ಗೃಹ ಸಚಿವ ಸ್ಥಾನದಲ್ಲಿರಲು ಅರ್ಹರಲ್ಲ,ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಇಡೀ ದೇಶ ಅಂಬೇಡ್ಕರ್ ಅವರ ಬಗ್ಗೆ ಪೂಜನೀಯ ಭಾವನೆ ಇಟ್ಟುಕೊಂಡಿದ್ದಾರೆ,ದೇಶಕ್ಕೆ ಸಂವಿಧಾನ ಕೊಟ್ಟ ಮಹಾತ್ಮರ ಬಗ್ಗೆ ಅಪಮಾನವಾಗುವಂತಹ ಹೇಳಿಕೆಗಳನ್ನು ಯಾರೆ ನೀಡಿದರು ನಮ್ಮ ಪಕ್ಷ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಕುರಿತು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿಕೆ ಖಂಡನೀಯ ಎಂದು ಇಂದಿರಾ ಗಾಂಧಿ ಬ್ಲಾಕ್ ಅಧ್ಯಕ್ಷ ರವಿ ಮಂಚೇಗೌಡನ ಕೊಪ್ಪಲು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಮಿತ್ ಶಾ ಅವರು ಕೂಡಲೇ ದೇಶದ ಜನರ ಕ್ಷಮೆಯಾಚಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಅಂಬೇಡ್ಕರ್ ಹೆಸರನ್ನು ಪದೇ ಪದೇ ಬಳಸುವುದು ಕೆಲವರಿಗೆ ಫ್ಯಾಷನ್ ಆಗಿದೆ. ಅಂಬೇಡ್ಕರ್ ಅವರ ಹೆಸರನ್ನು ಬಳಸಿದಷ್ಟು ದೇವರ ಹೆಸರನ್ನು ಹೇಳಿದ್ದರೆ ಇಷ್ಟು ಹೊತ್ತಿಗೆ ಏಳು ಜನ್ಮದ ಪುಣ್ಯ ಬರುತಿತ್ತು ಎಂದು ಅಮಿತ್ ಶಾ ಹೇಳಿರುವುದು ಅವರ ಮನದಾಳದ ಮಾತಾಗಿದೆ. ದೇಶದ ಶೋಷಿತರು, ದಲಿತರು ಇನ್ನಾದರೂ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಬಗ್ಗೆ ಎಚ್ಚರದಿಂದ ಇರಬೇಕು ಎಂದು ರವಿ ಹೇಳಿದ್ದಾರೆ.
ಬಿಜೆಪಿ ನಾಯಕರಿಗೆ ಅಂಬೇಡ್ಕರ್ ಸಂವಿಧಾನದ ಮೇಲೆ ಗೌರವ, ಪ್ರೀತಿ ಇಲ್ಲ. ಆರ್ಎಸ್ಎಸ್ ಸಿದ್ಧಾಂತವೇ ಅವರಿಗೆ ಸಂವಿಧಾನವಾಗಿದೆ ಎಂದು ರವಿ ಮಂಚೇಗೌಡನ ಕೊಪ್ಪಲು ಟೀಕಿಸಿದ್ದಾರೆ.
ನವದೆಹಲಿ: ರಾಹುಲ್ ಗಾಂಧಿ ಹೇಳಿಕೆಯಿಂದ ಮತ್ತೊಮ್ಮೆ ಕಾಂಗ್ರೆಸ್ನ ಮೀಸಲಾತಿ ವಿರೋಧಿ ನೀತಿ ಬಯಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟೀಕಿಸಿದ್ದಾರೆ.
ಮೀಸಲಾತಿ ವಿಚಾರದ ಬಗ್ಗೆ ರಾಹುಲ್ ಗಾಂಧಿ ಪ್ರಸ್ತಾಪ ಮಾಡಿದ್ದನ್ನು ಉಲ್ಲೇಖಿಸಿ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಶಾ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶವನ್ನು ವಿಭಜಿಸುವ ಷಡ್ಯಂತ್ರ ರೂಪಿಸುವ ಶಕ್ತಿಗಳೊಂದಿಗೆ ನಿಂತು ದೇಶ ವಿರೋಧಿ ಹೇಳಿಕೆ ನೀಡುವುದು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಅಭ್ಯಾಸವಾಗಿ ಹೋಗಿದೆ ಎಂದು ಜರಿದಿದ್ದಾರೆ.
ಕಾಶ್ಮೀರದಲ್ಲಿ ದೇಶ ವಿರೋಧಿ ನ್ಯಾಷನಲ್ ಕಾನ್ಫರೆನ್ಸ್ ಬೆಂಬಲಿಸಿರುವ ಕಾಂಗ್ರೆಸ್ ಈಗ ಮೀಸಲಾತಿ ವಿರೋಧಿ ಅಜೆಂಡಾವನ್ನು ಬೆಂಬಲಿಸುತ್ತಿದೆ. ವಿದೇಶಿ ವೇದಿಕೆಗಳಲ್ಲಿ ಭಾರತ ವಿರೋಧಿ ಹೇಳಿಕೆಗಳನ್ನು ನೀಡುವ ಮೂಲಕ ರಾಹುಲ್ ಗಾಂಧಿ ಯಾವಾಗಲೂ ರಾಷ್ಟ್ರದ ಭಾವನೆಗಳನ್ನು ಘಾಸಿಗೊಳಿಸುತ್ತಿದ್ದಾರೆ ಎಂದು ದೂರಿದ್ದಾರೆ.
ರಾಹುಲ್ ಗಾಂಧಿಯವರ ಹೇಳಿಕೆಯು ಪ್ರಾದೇಶಿಕತೆ, ಧರ್ಮ ಮತ್ತು ಭಾಷಿಕ ಭಿನ್ನಾಭಿಪ್ರಾಯದ ರೀತಿಯಲ್ಲಿ ಬಿರುಕುಗಳನ್ನು ಉಂಟುಮಾಡುವ ಕಾಂಗ್ರೆಸ್ನ ರಾಜಕೀಯವನ್ನು ಬಯಲು ಮಾಡುತ್ತಿದೆ ಎಂದು ಟೀಕಿಸಿದ್ದಾರೆ.
ಬಿಜೆಪಿ ಇರುವವರೆಗೂ ಯಾರೊಬ್ಬರೂ ಮೀಸಲಾತಿಯನ್ನು ರದ್ದುಪಡಿಸಲು ಸಾಧ್ಯವಿಲ್ಲ ಅಥವಾ ರಾಷ್ಟ್ರದ ಭದ್ರತೆಯೊಂದಿಗೆ ಯಾರೂ ಗೊಂದಲಕ್ಕೀಡಾಗಲು ಸಾಧ್ಯವಿಲ್ಲ ಎಂದು ನಾನು ರಾಹುಲ್ ಗಾಂಧಿಗೆ ಹೇಳಲು ಬಯಸುತ್ತೇನೆ ಎಂದು ಅಮಿತ್ ಶಾ ಕಟುವಾಗಿ ಹೇಳಿದ್ದಾರೆ.
ಅಮೆರಿಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಜಾರ್ಜ್ಟೌನ್ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳ ಜೊತೆಗಿನ ಸಂವಾದ ನಡೆಸಿದ್ದಾಗ ಮೀಸಲಾತಿಯು ಎಷ್ಟು ಕಾಲ ಮುಂದುವರಿಯಲಿದೆ ಎಂಬ ಪ್ರಶ್ನೆಗೆ ರಾಹುಲ್ ಗಾಂಧಿ, ಭಾರತದಲ್ಲಿ ಸಮಾನತೆಯ ಸ್ಥಿತಿ ಮೂಡಿದಾಗ ಮೀಸಲಾತಿಯನ್ನು ತೆಗೆದುಹಾಕುವ ಬಗ್ಗೆ ಕಾಂಗ್ರೆಸ್ ಪಕ್ಷವು ಆಲೋಚನೆ ಮಾಡಲಿದೆ. ಈಗ ಸಮಾನತೆಯ ಪರಿಸ್ಥಿತಿ ಇಲ್ಲ ಎಂದು ಉತ್ತರಿಸಿದ್ದನ್ನು ಸ್ಮರಿಸಬಹುದು.