ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್

ಬೆಂಗಳೂರು: ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಇಳಿಕೆ ಆಗಿರುವುದು ಸಮಾಧಾನದ ಸಂಗತಿಯಾದರೂ ಪೊಲೀಸರ ತನಿಖೆಯ ಗುಣಮಟ್ಟ ಕಡಿಮೆಯಾಗಿದ್ದು ಇದನ್ನು ಹೆಚ್ಚಿ ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಮತ್ತು ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಸಿಎಂ ಈ ಸೂಚನೆ ನೀಡಿದರು.

ಬೀದರ್ ನಲ್ಲಿ ನಡೆದ ದರೋಡೆ ಪ್ರಕರಣದ ಆರೋಪಿ ಯಾರು ಎಂದು ಗೊತ್ತಾಗಿದ್ದರೂ 5 ತಿಂಗಳಿಂದ ಆತನನ್ನು ಬಂಧಿಸಲಾಗಿಲ್ಲ ಎಂದು ಗರಂ ಆದ ಸಿದ್ದು,ಬಿಡಿ ಪ್ರಕರಣಗಳಲ್ಲಿ ತನಿಖೆಯ ಗುಣಮಟ್ಟ ಹೆಚ್ಚಿದ್ದರೂ ಒಟ್ಟಾರೆ ಗಮನಿಸಿದಾಗ ತನಿಖೆಯ ಗುಣಮಟ್ಟ ಕುಸಿದಿರುವುದು ಸ್ಪಷ್ಟವಾಗುತ್ತಿದೆ ಎಂದು ಹೇಳಿದರು.

ನಾನು 1983 ರಿಂದ ಶಾಸಕನಾಗಿ ಸಿಎಂ ಆಗಿದ್ದೀನಿ. ಬೆಂಗಳೂರಿನಲ್ಲಿ ನಡೆದ ಇಂಥಾ ಕಾಲ್ತುಳಿತ ಪ್ರಕರಣವನ್ನು ನಾನು ನೋಡಿರಲಿಲ್ಲ ಎಂದು ‌ಬೇಸರಪಟ್ಟ ಸಿಎಂ, ಗುಪ್ತಚರ ಇಲಾಖೆ ಇರುವುದು ಏಕೆ ಸರಿಯಾದ ಸಮಗ್ರ ಮಾಹಿತಿ ನೀಡಲಿಲ್ಲ. ಪರಿಣಾಮ 11 ಮಂದಿ ಅಮಾಯಕರು ಮೃತಪಟ್ಟರು ಎಂದು ಖೇದ ವ್ಯಕಪಡಿಸಿದರು.

ಕಾಲ್ತುಳಿತ ಘಟನೆ ನಡೆದ ದಿನ‌ ಮಧ್ಯಾಹ್ನ 3.50 ಕ್ಕೇ ಸಾವು ಸಂಭವಿಸಿದ್ದರೂ ಸರಿಯಾದ ಮಾಹಿತಿ ಕೊಟ್ಟಿರಲಿಲ್ಲ. ಇದು ತಪ್ಪಲ್ಲವಾ, 5.45 ಕ್ಕೆ ನಾನಾಗೇ ಕೇಳಿದಾಗಲೂ ಒಂದೇ ಸಾವು ಆಗಿದೆ ಎಂಬ ಮಾಹಿತಿ ನೀಡಿದರು. ಅಷ್ಟೊತ್ತಿಗಾಗಲೇ 11 ಸಾವು ಆಗಿಬಿಟ್ಟಿತ್ತು. ಹಿರಿಯ ಅಧಿಕಾರಿ ಸರಿಯಾದ ಮಾಹಿತಿಯನ್ನು ತಕ್ಷಣ ನಮಗೆ ನೀಡಿದ್ದರೆ ಸ್ಟೇಡಿಯಂ ಕಾರ್ಯಕ್ರಮ ರದ್ದುಗೊಳಿಸಲು ಸೂಚನೆ ನೀಡಬಹುದಿತ್ತು ಎಂದು ಸಿದ್ದರಾಮಯ್ಯ ಹೇಳಿದರು.

ಹಿರಿಯ ಅಧಿಕಾರಿಗಳ ಸಸ್ಪೆಂಡ್ ಮಾಡಬೇಕಾಗಿ ಬಂದಿದ್ದಕ್ಕೆ ನನಗೂ ಬೇಸರ ಇದೆ,ಆದರೆ ತಪ್ಪಾಗಿದ್ದು ನಿಜ ತಾನೇ ಎಂದು ಪ್ರಶ್ನಿಸಿದರು.

ಅಪರಾಧ ಪ್ರಕರಣಗಳಲ್ಲಿ ಆರೋಪ ಪಟ್ಟಿಯನ್ನು ಸೂಕ್ತವಾಗಿ, ಪರಿಣಾಮಕಾರಿಯಗಿ, ಸರಿಯಾದ ಸಮಯಕ್ಕೆ ಸಲ್ಲಿಸದಿರುವುದೂ ದೊಡ್ಡ ವೈಫಲ್ಯ,ಇಂಥದ್ದನ್ನು ಸಹಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಎಚ್ಚರಿಸಿದರು.

ದ್ವೇಷ ಭಾಷಣ ಮಾಡುವವರ ವಿರುದ್ಧ, ಜನರ-ರಾಜ್ಯದ ನೆಮ್ಮದಿ ಕೆಡಿಸುವವರ ವಿರುದ್ಧ ಸ್ವಯಂಪ್ರೇರಿತ ಕ್ರಮ ಏಕೆ ತೆಗೆದುಕೊಳ್ಳುತ್ತಿಲ್ಲ ಖಾರವಾಗಿ ಪ್ರಶ್ನಿಸಿದರು.

ಕೋಮು ಘರ್ಷಣೆ ಮತ್ತು ಕೊಲೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಹೆಚ್ಚಾಗಿ ಆಗುತ್ತಿದೆ. ಇತರೆ ಜಿಲ್ಲೆಗಳಲ್ಲಿ ಯಾಕೆ ಆಗುತ್ತಿಲ್ಲ,ದಕ್ಷಿಣ ಕನ್ನಡ ಜಿಲ್ಲೆಯ ನೆಮ್ಮದಿ ಕೆಡಿಸುವವರನ್ನು ಮೂಲದಿಂದಲೇ ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ಕಡಕ್ ಆದೇಶ ನೀಡಿದರು.

ಪೊಲೀಸ್ ಠಾಣೆಗಳು ಜನಸ್ನೇಹಿ ಆಗುವ ಜೊತೆಗೆ ಅಪರಾಧ ಮನಸ್ಥಿತಿಯವರಿಗೆ ಕಾನೂನಿನ ಬಗ್ಗೆ ಭಯ ಇರುವ ವಾತಾವರಣ ಸೃಷ್ಟಿಸಬೇಕು ಎಂದು ಮುಖ್ಯ ಮಂತ್ರಿಗಳು ಸಲಹೆ ನೀಡಿದರು.

ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು ತಿಂಗಳ‌ ಬಳಿಕ ನೇಮಕಾತಿ‌ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು,
ಪೊಲೀಸ್ ಇಲಾಖೆಯ ಬೇಡಿಕೆಗಳಲ್ಲಿ ಬಹಳಷ್ಟು ಈಡೇರಿಸಿ ಸಾಕಷ್ಟು ಹಣ, ಅನುದಾನ ಒದಗಿಸಿದ್ದೇವೆ, ಸಮಾಜದ ನೆಮ್ಮದಿ, ಕಾನೂನು- ಸುವ್ಯವಸ್ಥೆಯನ್ನು ನಿಮ್ಮಿಂದ ನಿರೀಕ್ಷಿಸುತ್ತೇನೆ ಶಕ್ತರಿಗೂ, ಅಶಕ್ತರಿಗೂ ನ್ಯಾಯ‌ ಒದಗಿಸುವುದು ಪೊಲೀಸ್ ಜವಬ್ದಾರಿ,ಕಾನೂನು ಎಲ್ಲರಿಗೂ ಒಂದೇ ಇದನ್ನು ಮರೆಯಬೇಡಿ ಎಂದು ಮುಖ್ಯ ಮಂತ್ರಿಗಳು ಕಡಕ್ಕಾಗಿ ಹೇಳಿದರು.

ಗೃಹ ಸಚಿವ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಗೃಹ ಇಲಾಖೆ ಎಸಿಎಸ್ ಗೌರವ್ ಗುಪ್ತ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎ.ಎಂ ಸಲೀಂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್ Read More