ವೈರಲ್ ಆದ ಸಿಎಂ ಭರ್ಜರಿ ಡ್ಯಾನ್ಸ್‌

ನವದೆಹಲಿ: ದೆಹಲಿಯ ಮಾಜಿ ಸಿಎಂ‌ ಅರವಿಂದ ಕೇಜ್ರಿವಾಲ್ ಅವರ ಪುತ್ರಿ ಹರ್ಷಿತಾ ಅವರ ಮದುವೆ ಸಂಭವ್ ಜೈನ್ ಅವರೊಂದಿಗೆ ವಿಜೃಂಭಣೆಯಿಂದ ನೆರವೇರಿದೆ.

ಈ ಮದುವೆ ವಿಷಯ ಮಾಮೂಲು.ಆದರೆ ಮದುವೆಯ ಹಿಂದಿನ ದಿನ ನಡೆದ ಸಂಗೀತ್ ಕಾರ್ಯಕ್ರಮದಲ್ಲಿ ಪಂಜಾಬ್​ ಆಪ್ ಸರ್ಕಾರದ ಸಿಎಂ ಭಗವಂತ್ ಮಾನ್ ಭರ್ಜರಿ ನೃತ್ಯ ಮಾಡಿದ್ದು ವಿಶೇಷ. ಜತೆಗೆ ಇದು ಸಕತ್ ಸುದ್ದಿಯಾಗಿಬಿಟ್ಟಿದೆ.

ಭಗವಂತ್ ಮಾನ್ ತಮ್ಮ ಪತ್ನಿಯ ಜೊತೆ ಭರ್ಜರಿಯಾಗಿ ಸ್ಟೆಪ್ ಹಾಕಿದ್ದಾರೆ. ಭಗವಂತ್ ಮಾನ್ ಅವರ ಡ್ಯಾನ್ಸ್​ ವಿಡಿಯೋ ವೈರಲ್ ಆಗಿದೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ತಮ್ಮ ಪತ್ನಿ ಗುರುಪ್ರೀತ್ ಕೌರ್ ಅವರೊಂದಿಗೆ ನಾಚಿ ಜೋ ಸಾದೇ ನಾಲ್ ಸಾಂಗ್ ಗೆ ಭಾಂಗ್ರಾ ನೃತ್ಯ ಮಾಡಿದ್ದು ಮದುವೆ ಬಂದವರೆಲ್ಲಾ ಶಹಬ್ಬಾಶ್ ಹೇಳಿದ್ದಾರೆ.

ವೈರಲ್ ಆದ ಸಿಎಂ ಭರ್ಜರಿ ಡ್ಯಾನ್ಸ್‌ Read More

ಇಡಿ ಮುಂದೆ ವಿಚಾರಣೆಗೆ ಹಾಜರಾದ ಪ್ರಿಯಾಂಕಾ ಪತಿ ರಾಬರ್ಟ್ ವಾದ್ರಾ

ನವದೆಹಲಿ: ಸಂಸದೆ ಪ್ರಿಯಾಂಕಾ ಗಾಂಧಿ ಪತಿ ಉದ್ಯಮಿ ರಾಬರ್ಟ್ ವಾದ್ರಾ ಅವರು ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾದರು.

ರಾಬರ್ಟ್ ವಾದ್ರಾ ತಮ್ಮ ಭದ್ರತಾ ಸಿಬ್ಬಂದಿ ಮತ್ತು ಮಾಧ್ಯಮ ಸಿಬ್ಬಂದಿಯೊಂದಿಗೆ ಕೇಂದ್ರ ದೆಹಲಿಯ ಸುಜನ್ ಸಿಂಗ್ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಿಂದ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇಡಿ ಪ್ರಧಾನ ಕಚೇರಿಗೆ ಸುಮಾರು 2 ಕಿ.ಮೀ ನಡೆದುಕೊಂಡು ಬಂದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ರಾಜಕೀಯ ದ್ವೇಷವಲ್ಲದೆ ಬೇರೇನೂ ಅಲ್ಲ ಎಂದು ದೂರಿದರು.

ನಾನು ಅಲ್ಪಸಂಖ್ಯಾತರ ಪರವಾಗಿ ಮಾತನಾಡುವಾಗಲೆಲ್ಲಾ ಅವರು ನನ್ನನ್ನು ತಡೆಯಲು, ನಮ್ಮನ್ನು ಹತ್ತಿಕ್ಕಲು ಪ್ರಯತ್ನಿಸುತ್ತಾರೆ. ಸಂಸತ್ತಿನಲ್ಲಿಯೂ ರಾಹುಲ್ ಗಾಂಧಿ ಅವರನ್ನು ತಡೆಯಲು ಪ್ರಯತ್ನಿಸಿದರು. ಇದು ತನಿಖಾ ಏಜೆನ್ಸಿಗಳ ದುರುಪಯೋಗ ಮತ್ತು ರಾಜಕೀಯ ದ್ವೇಷ ಎಂದು ಆರೋಪಿಸಿದರು,
ತನಿಖೆಗೆ ನಾನು ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಹೇಳಿದರು.

ಈ ಪ್ರಕರಣದಲ್ಲಿ ಏಪ್ರಿಲ್ 8 ರಂದು ರಾಬರ್ಟ್ ವಾದ್ರಾ ಅವರಿಗೆ ಮೊದಲು ಸಮನ್ಸ್ ಜಾರಿ ಮಾಡಲಾಗಿತ್ತು ಆದರೆ ಅವರು ವಿಚಾರಣೆಗೆ ಹಾಜರಾಗಲಿಲ್ಲ ಮತ್ತೊಂದು ದಿನಾಂಕವನ್ನು ಕೋರಿದ್ದರು.

ಕೇರಳದ ವಯನಾಡಿನ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ವಿರುದ್ಧದ ತನಿಖೆಯು ಹರಿಯಾಣದ ಶಿಕೋಹ್‌ಪುರದಲ್ಲಿ ನಡೆದ ಭೂ ವ್ಯವಹಾರಕ್ಕೆ ಸಂಬಂಧಿಸಿದ್ದಾಗಿದೆ.

ಈ ತನಿಖೆಯು ಫೆಬ್ರವರಿ 2008 ರಲ್ಲಿ ನಡೆದ ಭೂ ವ್ಯವಹಾರಕ್ಕೆ ಸಂಬಂಧಿಸಿದ್ದು. ಅಲ್ಲಿ ವಾದ್ರಾಗೆ ಸಂಬಂಧಿಸಿದ ಸ್ಕೈಲೈಟ್ ಹಾಸ್ಪಿಟಾಲಿಟಿ ಪ್ರೈವೇಟ್ ಲಿಮಿಟೆಡ್ ಎಂಬ ಕಂಪನಿಯು ಗುರುಗ್ರಾಮ್‌ನ ಶಿಕೋಹ್‌ಪುರದಲ್ಲಿ 3.5 ಎಕರೆ ಭೂಮಿಯನ್ನು ಓಂಕಾರೇಶ್ವರ ಪ್ರಾಪರ್ಟೀಸ್ ಎಂಬ ಸಂಸ್ಥೆಯಿಂದ 7.5 ಕೋಟಿ ರೂಪಾಯಿಗೆ ಖರೀದಿಸಿತು. ಈ ಭೂಮಿಯನ್ನು ಕೆಲವೇ ಗಂಟೆಗಳಲ್ಲಿ ಬದಲಾವಣೆ ಮಾಡಲಾಗಿತ್ತು ಎಂಬ ಆರೋಪವಿದೆ.

ಈ ಒಪ್ಪಂದದ ಕುರಿತು ಹರಿಯಾಣ ಪೊಲೀಸರು 2018 ರಲ್ಲಿ ಪ್ರಕರಣ ದಾಖಲಿಸಿದ್ದರು. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಇಡಿ ಅವರ ಹೇಳಿಕೆಯನ್ನು ದಾಖಲಿಸಲಿದೆ.

ಇಡಿ ಮುಂದೆ ವಿಚಾರಣೆಗೆ ಹಾಜರಾದ ಪ್ರಿಯಾಂಕಾ ಪತಿ ರಾಬರ್ಟ್ ವಾದ್ರಾ Read More

ದೆಹಲಿಯಲ್ಲಿ ಧೂಳು ಮಿಶ್ರಿತ ಭಾರೀ ಬಿರುಗಾಳಿ ಆತಂಕಗೊಂಡ ಜನತೆ

ನವದೆಹಲಿ: ದೆಹಲಿ ವಿಮಾನ ನಿಲ್ದಾಣದ ಸುತ್ತಮುತ್ತ ಶುಕ್ರವಾರ ಸಂಜೆ ಇದ್ದಕ್ಕಿದ್ದಂತೆ ಹವಾಮಾನ ವೈಪರೀತ್ಯದಿಂದಾಗಿ ಭಾರೀ ಬಿರುಗಾಳಿಯಿಂದ ಜನ ತೀವ್ರ ವಾಗಿ ಆತಂಕಗೊಂಡಿದ್ದಾರೆ.

ಹವಾಮಾನ ದಿಢೀರ್ ಬದಲಾವಣೆಯಿಂದ 15ಕ್ಕೂ ಹೆಚ್ಚು ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

ಜತೆಗೆ ಭಾರೀ ಧೂಳಿನಿಂದಾಗಿ ವಾಹನ ಸವಾರರು ವಾಹನ ಚಲಿಸಲಾರದೆ ತೀವ್ರ ತೊಂದರೆ ಅನುಭವಿಸಿದರು.

ರಾಷ್ಟ್ರ ರಾಜಧಾನಿಯಲ್ಲಿ ಧೂಳು ಮಿಶ್ರಿತ ಬಿರುಗಾಳಿ ಮತ್ತು ಭಾರೀ ಬಿರುಗಾಳಿ ಬೀಸುತ್ತಿದೆ.ರಸ್ತೆಯೇ ಕಾಣಿಸುತ್ತಿಲ್ಲ

ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 15ಕ್ಕೂ ಹೆಚ್ಚು ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿದೆ.

ದೆಹಲಿಯಲ್ಲಿನ ಪ್ರತಿಕೂಲ ಹವಾಮಾನದಿಂದಾಗಿ, ದೆಹಲಿ ವಿಮಾನ ನಿಲ್ದಾಣದಲ್ಲಿ ಕೆಲವು ವಿಮಾನಗಳ ಹಾರಾಟದಲ್ಲಿ ತೊಂದರೆ ಉಂಟಾಗಿದೆ.

ದೆಹಲಿ ಮತ್ತು ಜೈಪುರದಲ್ಲಿ ಧೂಳು ಮಿಶ್ರಿತ ಬಿರುಗಾಳಿ ಬೀಸುತ್ತಿದ್ದು, ಇದು ಟೇಕ್‌ಆಫ್ ಮತ್ತು ಲ್ಯಾಂಡಿಂಗ್‌ಗಳ ಮೇಲೆ ಪರಿಣಾಮ ಬೀರುತ್ತಿದೆ ಮತ್ತು ವಾಯು ಸಂಚಾರ ದಟ್ಟಣೆಗೆ ಕಾರಣವಾಗಬಹುದು ಎಂದು ಇಂಡಿಗೋ ತಿಳಿಸಿದೆ.

ಭಾರತೀಯ ಹವಾಮಾನ ಇಲಾಖೆ ದೆಹಲಿ ಮತ್ತು ಪಕ್ಕದ ಎನ್ ಸಿ ಆರ್ ಗೆ ಯೆಲ್ಲೋ ಅಲರ್ಟ್ ನೀಡಿದ್ದು ಎಚ್ಚರಿಕೆ ನೀಡಿದೆ.

ದೆಹಲಿಯಲ್ಲಿ ಧೂಳು ಮಿಶ್ರಿತ ಭಾರೀ ಬಿರುಗಾಳಿ ಆತಂಕಗೊಂಡ ಜನತೆ Read More

ಲೋಕಸಭಾ ಸ್ಪೀಕರ್ ಗೆ ಇಂಡಿಯಾ ಮೈತ್ರಿಕೂಟದಿಂದ ಸರ್ಕಾರದ ‌ವಿರುದ್ಧ ದೂರು

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡಲಿಲ್ಲವೆಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭಾ ಸ್ಪೀಕರ್ ಗೆ ದೂರು ನೀಡಿದ್ದಾರೆ

ಕಾಂಗ್ರೆಸ್ ಸಂಸದರು ಸ್ಪೀಕರ್
ಓಂ ಬಿರ್ಲಾ ಅವರಿಗೆ ದೂರು ನೀಡಿದ ನಂತರ ಇಂಡಿಯಾ ಮೈತ್ರಿಕೂಟದ ನಾಯಕರ ನಿಯೋಗ ಕೂಡಾ ಗುರುವಾರ ಸ್ಪೀಕರ್ ಅವರನ್ನುದಡದ ಅರಸ ಭೇಟಿ ಮಾಡಿ ಕೇಂದ್ರ ಸರ್ಕಾರವು ಸಂಸದೀಯ ಕಾರ್ಯವಿಧಾನಗಳನ್ನು ಕಡೆಗಣಿಸಿದೆ ಎಂಬ ಆರೋಪಿಸಿ ಮನವಿ ಪತ್ರ ಸಲ್ಲಿಸಿತು.

ನಿಯೋಗದಲ್ಲಿ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್, ಸಮಾಜವಾದಿ ಪಕ್ಷದ(ಎಸ್‌ಪಿ) ಧರ್ಮೇಂದ್ರ ಯಾದವ್, ಡಿಎಂಕೆಯ ಎ ರಾಜಾ, ಟಿಎಂಸಿಯ ಕಲ್ಯಾಣ್ ಬ್ಯಾನರ್ಜಿ ಮತ್ತು ಎನ್‌ಸಿಪಿಯ ಸುಪ್ರಿಯಾ ಸುಳೆ ಸೇರಿದಂತೆ ಇತರರು ಇದ್ದರು.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೊಗೊಯ್, ಇಂಡಿಯಾ ಮೈತ್ರಿಕೂಟದ ನಾಯಕರು ಸರ್ಕಾರದಿಂದ ಸಂಸದೀಯ ಕಾರ್ಯವಿಧಾನಗಳ ಉಲ್ಲಂಘನೆಯ ಬಗ್ಗೆ ಹಲವು ವಿಷಯಗಳನ್ನು ಎತ್ತಿದ್ದಾರೆ ಎಂದರು.

ಮನವಿ ಪತ್ರದಲ್ಲಿ, ಇಂಡಿಯಾ ಬ್ಲಾಕ್ ನಾಯಕರು, ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸದನದಲ್ಲಿ ಮಾತನಾಡಲು ಅವಕಾಶ ನಿರಾಕರಿಸುವುದು ಸೇರಿದಂತೆ ಹಲವಾರು ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ.

ಸಂಪ್ರದಾಯದಂತೆ, ಎಲ್‌ಒಪಿ ಎದ್ದು ನಿಂತಾಗಲೆಲ್ಲಾ ಅವರಿಗೆ ಮಾತನಾಡಲು ಅವಕಾಶ ನೀಡಬೇಕು. ಇದನ್ನು ಶಾಖೇರ್ ಮತ್ತು ಕೌಲ್ ಅವರ ಸಂಸದೀಯ ಅಭ್ಯಾಸಗಳಲ್ಲಿ ದಾಖಲಿಸಲಾಗಿದೆ. ಆದಾರೂ,ಈಗಿನ ಸರ್ಕಾರ ಔಪಚಾರಿಕವಾಗಿ ವಿನಂತಿಸಿದರೂ ಎಲ್‌ಒಪಿಗೆ ಮಾತನಾಡುವ ಅವಕಾಶವನ್ನು ಪದೇ ಪದೇ ನಿರಾಕರಿಸುತ್ತದೆ. ಇದು ಹಿಂದಿನ ಅಭ್ಯಾಸಗಳಿಂದ ನಿರ್ಗಮನವಾಗಿದೆ, ಅಲ್ಲಿ ಘರ್ಷಣೆಯ ಸಂದರ್ಭಗಳಲ್ಲಿಯೂ ಸಹ, ಎಲ್‌ಒಪಿಯನ್ನು ಕೇಳಲಾಗುತ್ತಿತ್ತು,” ಎಂದು ಜ್ಞಾಪಕ ಪತ್ರದಲ್ಲಿ ತಿಳಿಸಲಾಗಿದೆ.

ಸ್ಪೀಕರ್ ಓಂ ಬಿರ್ಲಾ ಅವರು ಸಂಸತ್ತಿನಲ್ಲಿ ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ. ಸ್ಪೀಕರ್ ಸದನವನ್ನು ಪ್ರಜಾಪ್ರಭುತ್ವ ವಿರೋಧಿ ಶೈಲಿಯಲ್ಲಿ ನಡೆಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದರು.

ಲೋಕಸಭಾ ಸ್ಪೀಕರ್ ಗೆ ಇಂಡಿಯಾ ಮೈತ್ರಿಕೂಟದಿಂದ ಸರ್ಕಾರದ ‌ವಿರುದ್ಧ ದೂರು Read More

ಬಿಜೆಪಿಯಿಂದ ಯತ್ನಾಳ್ ಉಚ್ಛಾಟನೆ

ನವದೆಹಲಿ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.

ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ.

ವಿಜಯಪುರ ಶಾಸಕ ಯತ್ನಾಳ್‌ ಅವರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ವಿರುದ್ಧ ಮೊದಲಿನಿಂದಲೂ ನಾಲಗೆ ಹರಿಬಿಡುತ್ತಲೇ ಇದ್ದಾರೆ. ಅಲ್ಲದೆ, ರಾಜ್ಯಾಧ್ಯಕ್ಷರ ಬಗ್ಗೆ ಅವಹೇಳನವಾಗಿ ಮಾತನಾಡಿದ ಹಿನ್ನೆಲೆ ಅವರಿಗೆ ನೋಟಿಸ್ ಕೊಡಲಾಗಿತ್ತು.

ಶಿಸ್ತು ಸಮಿತಿ ನೀಡಿದ್ದ ಶೋಕಾಸ್‌ ನೋಟಿಸ್‌ಗೆ ಯಾವುದೇ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್‌ ಪಕ್ಷದಿಂದ ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿದೆ.

ಯತ್ನಾಳ್‌ ಅವರಿಗೆ ಬಿಜೆಪಿ ಶಿಸ್ತು ಸಮಿತಿ ಎರಡು ಬಾರಿ ನೋಟಿಸ್‌ ನೀಡಿತ್ತು. ನೋಟಿಸ್‌ ನೀಡಿದ್ದರೂ ಕೂಡ ಪದೇ ಪದೇ ಪಕ್ಷ ವಿರೋಧಿ ಚಟುವಟಿಕೆ, ಶಿಸ್ತು ಉಲ್ಲಂಘನೆ ಮಾಡುತ್ತಲೇ ಇದ್ದರು.

ಕೊನೆಗೆ 2025 ಫೆಬ್ರವರಿ 10ರಂದು ಶೋಕಾಸ್‌ ನೋಟಿಸ್‌ಗೆ ಯತ್ನಾಳ್‌ ಉತ್ತರ ನೀಡಿದ್ದರು. ಯತ್ನಾಳ್ ಉತ್ತರ, ಸ್ಪಷ್ಟನೆ ಒಪ್ಪದ ಕೇಂದ್ರ ಶಿಸ್ತು ಸಮಿತಿ ಇಂದು ಈ ನಿರ್ಧಾರವನ್ನು ಕೈಗೊಂಡಿದೆ.

ಪದೇ ಪದೇ ನೀವು ಪಕ್ಷದ ಶಿಸ್ತನ್ನು ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ. ಅಲ್ಲದೆ, ನೀವು ಇಲ್ಲಿಯವರೆಗೆ ಹೊಂದಿದ್ದ ಯಾವುದೇ ಪಕ್ಷದ ಹುದ್ದೆಯಿಂದ ನಿಮ್ಮನ್ನು ತೆಗೆದುಹಾಕಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿಯಿಂದ ಯತ್ನಾಳ್ ಉಚ್ಛಾಟನೆ Read More

ಚಾ.ನಗರ ಜಿಲ್ಲೆಯನ್ನು ರಾಷ್ಟ್ರೀಯ ಅರಿಶಿನ ಮಂಡಳಿ ವ್ಯಾಪ್ತಿಗೆ ಸೇರಿಸಲು ಮನವಿ

ಚಾಮರಾಜನಗರ: ಸಂಸದ ಸುನೀಲ್ ಬೋಸ್ ಅವರು ಕೈಗಾರಿಕಾ ಮತ್ತು ವಾಣಿಜ್ಯ ಸಚಿವರಾದ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಚಾಮರಾಜನಗರ ಜಿಲ್ಲೆಯನ್ನು ರಾಷ್ಟ್ರೀಯ ಅರಿಶಿನ ಮಂಡಳಿ ವ್ಯಾಪ್ತಿಗೆ ಸೇರಿಸಲು ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯವು ದೇಶದಲ್ಲಿ ಅರಿಶಿನ ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿದೆ
ಕರ್ನಾಟಕ ರಾಜ್ಯದಲ್ಲಿ ಚಾಮರಾಜನಗರ ಜಿಲ್ಲೆಯು ಮೊದಲ ಸ್ಥಾನದಲ್ಲಿದೆ. ಸುಮಾರು 8260 ಹೆಕ್ಟೇರ್ ಪ್ರದೇಶದಲ್ಲಿ ಅರಿಶಿನ ಬೆಳೆಯನ್ನು ಬೆಳೆಯಲಾಗುತ್ತಿದ್ದು, ಅಂದಾಜು 49,564.80 ಮೆಟ್ರಿಕ್ ಟನ್ ಗಳಷ್ಟು ಅರಿಶಿಣ ಉತ್ಪಾದನೆ ಆಗುತ್ತಿದೆ ಎಂದು ಈ ವೇಳೆ ಸಂಸದರು ಮನದಟ್ಟು ಮಾಡಿದರು.

ಇದು ದೇಶದ ಶೇ. 4.2ರಷ್ಟು ಹಾಗೂ ರಾಜ್ಯದ ಶೇ.38.3ರಷ್ಟು. ಇಷ್ಟು ಉತ್ಪಾದನೆ ಇರುವ ಜಿಲ್ಲೆಯ ರೈತರಿಗೆ ಸೂಕ್ತ ಮಾರುಕಟ್ಟೆ ಸೌಕರ್ಯವಿಲ್ಲ, ಅರಿಸಿನ ಮೌಲ್ಯವರ್ಧನ ಚಟುವಟಿಕೆಗಳಿಗೆ ಅವಕಾಶವಿಲ್ಲ, ಬೆಳೆ ಇಳುವರಿ ಹೆಚ್ಚಿಸುವ ತಂತ್ರಜ್ಞಾನದ ಕೊರತೆ ಇದೆ, ಸಮರ್ಪಕ ಗೊಬ್ಬರ ಮತ್ತು ಕೀಟನಾಶಕ ಸಮರ್ಪಕ ಬಳಕೆ ಕುರಿತ ಮಾರ್ಗದರ್ಶನವಿಲ್ಲ, ಆದರು ಕೂಡ ದೇಶದ ಅರಿಶಿನ ಉತ್ಪಾದನೆಯಲ್ಲಿ ಚಾಮರಾಜನಗರದ ಕೊಡುಗೆ ಶೇಕಡ 4.2 ರಷ್ಟಿದೆ.ಚಾಮರಾಜನಗರ ಜಿಲ್ಲೆಯ ರೈತರಿಗೆ ಅರಿಶಿನ ಬೆಲೆಗೆ ಸಂಬಂಧಿಸಿದಂತೆ ನಾವಿನ್ಯ ತಂತ್ರಜ್ಞಾನಗಳ ಕೊರತೆ ಇದೆ, ವೈಜ್ಞಾನಿಕ ಬೆಳೆ ಪದ್ಧತಿ ಬಗ್ಗೆ ಅರಿವಿನ ಕೊರತೆ ಇದೆ ಆದ್ದರಿಂದ ರಾಷ್ಟ್ರೀಯ ಅರಿಶಿನ ಮಂಡಳಿ ಕಾರ್ಯ ಚಟುವಟಿಕೆಗಳನ್ನು ಚಾಮರಾಜನಗರ ಜಿಲ್ಲೆಗೆ ವಿಸ್ತರಿಸುವುದರಿಂದ ಈ ಭಾಗದ ರೈತರಿಗೆ ಹೆಚ್ಚಿನ ಅನುಕೂಲವಾಗಿ ರೈತರ ಆದಾಯದಲ್ಲಿ ಸುಧಾರಣೆ ಆಗುತ್ತದೆ ಎಂದು ಸಚಿವ ಪಿಯೂಷ್ ಗೋಯಲ್ ಅವರಲ್ಲಿ ಸುನಿಲ್ ಬೋಸ್ ಮನವಿ ಮಾಡಿದರು.

ಚಾ.ನಗರ ಜಿಲ್ಲೆಯನ್ನು ರಾಷ್ಟ್ರೀಯ ಅರಿಶಿನ ಮಂಡಳಿ ವ್ಯಾಪ್ತಿಗೆ ಸೇರಿಸಲು ಮನವಿ Read More

ನ್ಯಾ. ಯಶವಂತ್ ವರ್ಮಾ ನ್ಯಾಯಾಂಗ ಕರ್ತವ್ಯ ನಿರ್ವಹಿಸದಂತೆ ದೆಹಲಿ ಹೈಕೋರ್ಟ್ ಆದೇಶ

ನವದೆಹಲಿ: ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ನ್ಯಾಯಾಂಗ ಕರ್ತವ್ಯ ನಿರ್ವಹಿಸದಂತೆ ದೆಹಲಿ ಹೈಕೋರ್ಟ್ ಆದೇಶ ನೀಡಿದೆ.

ಇತ್ತೀಚಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು, ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನ್ಯಾಯಾಂಗ ಕೆಲಸವನ್ನು ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಿಂತೆಗೆದುಕೊಳ್ಳಲಾಗುತ್ತದೆ ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ನಿರ್ದೇಶನದ ನಂತರ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆ) ದೇವೇಂದ್ರ ಕುಮಾರ್ ಉಪಾಧ್ಯಾಯ ಅವರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.

ಸಂಜೀವ್ ಖನ್ನಾ ಅವರು ಈ ಘಟನೆ ಸಂಬಂಧ ಒಂದು ನಿರ್ಧಾರ ತೆಗೆದುಕೊಳ್ಳುವವರೆಗೂ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿಗೆ ಯಾವುದೇ ನ್ಯಾಯಾಂಗ ಕೆಲಸವನ್ನು ನಿಯೋಜಿಸಬೇಡಿ ಎಂದು ದೆಹಲಿ ಹೈಕೋರ್ಟ್‌ಗೆ ನಿರ್ದೇಶನ ನೀಡಿದ್ದರು.

ವಿಷಯದ ಗಂಭೀರತೆಯನ್ನು ಪರಿಗಣಿಸಿ ಸಂಜೀವ್ ಖನ್ನಾ ಅವರು ಶನಿವಾರ ಮೂವರು ಸದಸ್ಯರ ಆಂತರಿಕ ತನಿಖಾ ಸಮಿತಿಯನ್ನು ರಚಿಸಿದ್ದರು.ಈ ಸಮಿತಿಯಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಿ.ಎಸ್. ಸಂಧವಾಲಿಯಾ ಮತ್ತು ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶೆ ಅನು ಶಿವರಾಮನ್ ಇದ್ದಾರೆ.

ನ್ಯಾಯಮೂರ್ತಿ ಯಶವಂತ್ ವರ್ಮಾ ತಮ್ಮ ವಿರುದ್ಧದ ಆರೋಪಗಳಿಗೆ ಪ್ರತಿಕ್ರಿಯಿಸಿದ್ದು ಈ ಹಣವು ತಮಗೆ ಅಥವಾ ತಮ್ಮ ಕುಟುಂಬದ ಸದಸ್ಯರಿಗೆ ಸೇರಿಲ್ಲ ಎಂದು ಹೇಳಿದ್ದರು.

ನ್ಯಾ. ಯಶವಂತ್ ವರ್ಮಾ ನ್ಯಾಯಾಂಗ ಕರ್ತವ್ಯ ನಿರ್ವಹಿಸದಂತೆ ದೆಹಲಿ ಹೈಕೋರ್ಟ್ ಆದೇಶ Read More

ಮಕ್ಕಳಲ್ಲಿನ ಜ್ಞಾನ ದಾಹ ನೀಗಿಸುತ್ತಿದೆ ನಮ್ಮ ಮೈಸೂರಿನ ಕಲಿಸು ಸಂಸ್ಥೆ: ಯದುವೀರ್

ನವದೆಹಲಿ: ದಾನಗಳಲ್ಲಿ ಶ್ರೇಷ್ಠ ದಾನ ವಿದ್ಯಾದಾನ ಎನ್ನುವುದು ಪ್ರತೀತಿ. ಅದಕ್ಕಾಗಿ ನಮ್ಮ ಮೈಸೂರು ಒಡೆಯರ್ ಸಂಸ್ಥಾನ ಶಿಕ್ಷಣಕ್ಕಾಗಿ ಹೆಚ್ಚು ಒತ್ತು ನೀಡುತ್ತಿತ್ತು ಎಂದು
ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಲಿಸು ಫೌಂಡೇಶನ್‌ 125ನೇ ಗ್ರಂಥಾಲಯಕ್ಕೆ ಚಾಲನೆ ನೀಡಿದ ನಂತರ ಅವರು ಮಾತನಾಡಿದರು.

ಇದೇ ಕಾರಣಕ್ಕೆ ಮೈಸೂರು ವಿಶ್ವದ ಪ್ರಮುಖ ವಿದ್ಯಾನಗರಿಗಳಲ್ಲಿ ಒಂದಾಗಿದೆ. ಇಂಥ ಮೈಸೂರಿನ ಸಂಸ್ಥೆಯಾಗಿರುವ ಕಲಿಸು ಫೌಂಡೇಶನ್ ಮಕ್ಕಳಿಗೆ ಹಾಗೂ ಯುವ ಸಮೂಹಕ್ಕೆ ಜ್ಞಾನಾರ್ಜನೆ ಮಾಡಲು ಮುಂದಾಗಿದ್ದು, ನವದೆಹಲಿಯಲ್ಲಿ ಗ್ರಂಥಾಲಯವನ್ನು ಆರಂಭಿಸಿದೆ ಎಂದು ತಿಳಿಸಿದರು.

ಕಲಿಸು ಸಂಸ್ಥೆ ಕಳೆದ ಕೆಲವು ವರ್ಷಗಳಿಂದ ಜ್ಞಾನ ಹರಡುವ ಯಜ್ಞದಲ್ಲಿ ತೊಡಗಿದೆ. ಈ ಮಹತ್ಕಾರ್ಯದಲ್ಲಿ ನಾನೂ ಕೂಡ ಭಾಗಿಯಾಗಿದ್ದೇನೆ. ಈ ಸಂಸ್ಥೆಯ ರಾಯಭಾರಿಯಾಗಿ ಗ್ರಾಮೀಣ ಭಾಗದ ಮಕ್ಕಳಿಗೆ ಪುಸ್ತಕ ಸಿಗುವಂತೆ ಮಾಡಲಾಗುತ್ತಿದೆ. ನಿಜಕ್ಕೂ ಇದೊಂದು ಪುಣ್ಯದ ಕೆಲಸ ಎಂದು ತಿಳಿಸಿದರು.

ಗ್ರಾಮೀಣ ಭಾಗದಲ್ಲಿ ಗ್ರಂಥಾಲಯ ಆರಂಭಿಸುವ ಮೂಲಕ ಯುವ ಸಮೂಹದ ಜ್ಞಾನ ಹೆಚ್ಚಿಸಲಾಗುತ್ತಿದೆ. ನಮ್ಮ ಮೈಸೂರಿನ ಕಲಿಸು ಫೌಂಡೇಷನ್ ತನ್ನ ವ್ಯಾಪ್ತಿಯನ್ನು ವಿಸ್ತರಿಸಿದೆ. ರಾಷ್ಟ್ರ ರಾಜಧಾನಿಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಈ ಲೈಬ್ರರಿ ಆರಂಭಿಸಿರುವುದು ಸ್ವಾಗತಾರ್ಹ. ಈ ನಿಟ್ಟಿನಲ್ಲಿ ಸಂಸ್ಥಾಪಕರಾದ ನಿಖಿಲೇಶ್ ಅವರ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಯದುವೀರ್ ತಿಳಿಸಿದರು.

ನವದೆಹಲಿಯ ಗೋಲ್ ಮಾರುಕಟ್ಟೆಯ ಅಟಲ್ ಆದರ್ಶ್ ಬೆಂಗಾಲಿ ಬಾಲಿಕಾ ವಿದ್ಯಾಲಯದಲ್ಲಿ ತಲೆ ಎತ್ತಿರುವ 125ನೇ ಗ್ರಂಥಾಲಯದಲ್ಲಿ ಸಾವಿರಾರು ಪುಸ್ತಕಗಳು ದೊರೆಯಲಿದೆ. ಇದನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡು ಸತ್ಪ್ರಜೆಗಳಾಗಿ ದೇಶಕ್ಕೆ, ನಾಡಿಗೆ ಕೊಡುಗೆ ನೀಡಬೇಕು ಎಂದು ಯದುವೀರ್ ಒಡೆಯರ್ ಕರೆ ನೀಡಿದರು.

ನವದೆಹಲಿಯ ಸಂಸದೆ ಬಾನ್ಸುರಿ ಸ್ವರಾಜ್ ಮಾತನಾಡಿ, ಮಕ್ಕಳಿಗಾಗಿ ಲೈಬ್ರರಿ ಆರಂಭಿಸಿರುವ ಮೈಸೂರು ಮೂಲದ ಕಲಿಸು ಸಂಸ್ಥೆಗೆ ಶುಭ ಹಾರೈಕೆಗಳು ಎಂದು ಹೇಳಿದರು.

ಈ ಸಂಸ್ಥೆಯು ಸರ್ಕಾರ ಮಾಡುವ ಕೆಲಸವನ್ನು ಮಾಡುತ್ತಿದೆ,ದೆಹಲಿಯ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ನಾವು “ಕಲಿಸು” ಸಂಸ್ಥೆಯೊಂದಿಗೆ ಕೈ ಜೋಡಿಸಲು ಉತ್ಸುಕರಾಗಿದ್ದೇವೆ. ಮತ್ತು ಶೀಘ್ರದಲ್ಲೇ ಕಲಿಸು ಸಂಸ್ಥೆ ಜೊತೆ ಒಪ್ಪಂದ ಮಾಡಿಕೊಳ್ಳಲು ಮುಂದಾಗುತ್ತೇವೆ ಎಂದು ತಿಳಿಸಿದರು.

ನಮ್ಮ ದೆಹಲಿಯ ಮಕ್ಕಳಿಗಾಗಿ ಉತ್ತಮ ಪುಸ್ತಕಗಳು ದೊರೆಯುವಂತೆ ಮಾಡಿದ್ದು ಸ್ವಾಗತಾರ್ಹ. ಇಂಥ ಲೈಬ್ರರಿಗಳು ಇನ್ನಷ್ಟು ಆರಂಭವಾಗಲಿ. ಸಂಸ್ಥಾಪಕರಿಗೆ ಹಾಗೂ ಇಡೀ ತಂಡಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಬಾನ್ಸುರಿ ಸ್ವರಾಜ್ ತಿಳಿಸಿದರು.

ನಂತರ ಯದುವೀರ್ ಒಡೆಯರ್ ಹಾಗೂ ಬಾನ್ಸುರಿ ಸ್ವರಾಜ್ ವಿದ್ಯಾರ್ಥಿಗಳೊಂದಿಗೆ‌ ಸಂವಾದ ನಡೆಸಿ, ಭವಿಷ್ಯದ ಯೋಜನೆಗಳು, ಹವ್ಯಾಸ, ಮುಂದಿನ ಗುರಿ ಹಾಗೂ ಇಷ್ಟದ ವಿಷಯ ಹಾಗೂ ಕ್ರೀಡೆ ಬಗ್ಗೆ ಚರ್ಚಿಸಿದರು.

ಕಲಿಸು ಫೌಂಡೇಶನ್ ಸಂಸ್ಥಾಪಕರು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಿಖಿಲೇಶ್ ಮಾತನಾಡಿ, ಗ್ರಂಥಾಲಯಗಳನ್ನು ಆರಂಭಿಸುವ ಅಭಿಯಾನದ ಕುರಿತು ವಿವರಿಸಿದರು.

ರಾಜ ಮಹಾರಾಜರ ಕಾಲದಿಂದಲೂ ಮೈಸೂರಿನಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಈ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವ ಹಾಗೂ ಗ್ರಾಮೀಣ ಭಾಗದ ಮಕ್ಕಳಿಗೆ ಹೆಚ್ಚು ಪುಸ್ತಕಗಳು ದೊರೆಯಬೇಕು ಎಂಬ ಉದ್ದೇಶದಿಂದ “ಕಲಿಸು” ಫೌಂಡೇಶನ್ ಆರಂಭಿಸಲಾಯಿತು ಎಂದು ತಿಳಿಸಿದರು.

ಮಕ್ಕಳಲ್ಲಿನ ಜ್ಞಾನ ದಾಹ ನೀಗಿಸುತ್ತಿದೆ ನಮ್ಮ ಮೈಸೂರಿನ ಕಲಿಸು ಸಂಸ್ಥೆ: ಯದುವೀರ್ Read More

ಆಯುಷ್ಮಾನ್ ವ್ಯಾಪ್ತಿಗೆ ಹೃದಯಾಘಾತ, ಪಾರ್ಶ್ವವಾಯುಗೆ ಚಿಕಿತ್ಸೆ ತರಲು ಹೆಚ್.ಡಿ.ಡಿ ಒತ್ತಾಯ

ನವದೆಹಲಿ: ಆಯುಷ್ಮಾನ್ ಭಾರತ್ ಕಾರ್ಯಕ್ರಮದಡಿಯಲ್ಲಿ ಹೃದಯಾಘಾತ ಮತ್ತು ಪಾರ್ಶ್ವವಾಯುಗೆ ಚಿಕಿತ್ಸೆ ಪಡೆಯಲು ರಾಷ್ಟ್ರವ್ಯಾಪಿ ಯೋಜನೆ ರೂಪಿಸಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಕೋರಿದರು‌

ರಾಜ್ಯಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹೃದಯಾಘಾತ ಮತ್ತು ಪಾರ್ಶ್ವವಾಯುನಿಂದ ಮರಣ ಹೊಂದುವವರು ಭಾರತದಲ್ಲಿ ಹೆಚ್ಚುತ್ತಿದ್ದಾರೆ. ಪ್ರತಿ ವರ್ಷ ನಾವು ಲಕ್ಷಾಂತರ ಜನರನ್ನು ಕಳೆದುಕೊಳ್ಳುತ್ತಿದ್ದೇವೆ ಮತ್ತು ದುರದೃಷ್ಟವಶಾತ್ ಶೇ.30ರಷ್ಟು ಹೃದಯಾಘಾತಗಳು 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಗಳಲ್ಲಿ ಸಂಭವಿಸುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಗ್ರಾಮೀಣ ಪ್ರದೇಶದಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿರುವ ಸಲುವಾಗಿ ತಾಲ್ಲೂಕು ಆಸ್ಪತ್ರೆಗಳಲ್ಲಿ 18,000 ಕ್ಕೆ ರಕ್ತ ಹೆಪ್ಪುಗಟ್ಟುವಿಕೆ ಕರಗಿಸುವ ಇಂಜೆಕ್ಷನ್‌ಗಳು ಲಭ್ಯವಾಗುವಂತೆ ಮಾಡಬೇಕು ಎಂದು
ಗೌಡರು ಮನವಿ ಮಾಡಿದರು.

ಆರಂಭಿಕವಾಗಿ ಆಯುಷ್ಮಾನ್ ಭಾರತ್ ಅಡಿಯಲ್ಲಿ ಆಂಜಿಯೋಪ್ಲ್ಯಾಸ್ಟಿ ಮತ್ತು ಸ್ಟಂಟ್ ಅಳವಡಿಸುವುದಕ್ಕಾಗಿ ರೋಗಿಗಳನ್ನು ಹತ್ತಿರದ ನಗರಗಳಿಗೆ ಸ್ಥಳಾಂತರಿಸುವ ವ್ಯವಸ್ಥೆ ಮಾಡಬೇಕು ಎಂದು ಅವರು ಹೇಳಿದರು.

ಆಯುಷ್ಮಾನ್ ಭಾರತ್ ಅಡಿಯಲ್ಲಿ ಆಂಜಿಯೋಪ್ಲ್ಯಾಸ್ಟಿ ಒಳಗೊಳ್ಳಲ್ಪಟ್ಟಿದ್ದರೂ ಜೀವ ರಕ್ಷಕ ಔಷಧಿಗಳನ್ನು ಸಹ ಈ ಯೋಜನೆಯಲ್ಲಿ ಸೇರಿಸಬೇಕು ಎಂದು ಹೇಳಿದರು.

ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡುವ ಎಂಬಿಬಿಎಸ್ ವೈದ್ಯರ ವೇತನ ಹೆಚ್ಚಳ ಮಾಡುವ‌ ಅಗತ್ಯವಿದೆ ಎಂದು ದೇವೇಗೌಡರು ಒತ್ತಾಯಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರಿಗೆ ಪ್ರೋತ್ಸಾಹ ಧನ ನೀಡಬೇಕು. ಗ್ರಾಮೀಣ ಆರೋಗ್ಯವನ್ನು ನಾವು ಸುಧಾರಿಸದೇ ಇದ್ದರೆ, ನಮ್ಮ ಹಳ್ಳಿಗಳು ಸರಿಯಾದ ವೈದ್ಯಕೀಯ ಆರೈಕೆಯ ಕೊರತೆಯಿಂದ ಬಳಲುತ್ತಲೇ ಇರುತ್ತವೆ ಎಂದು ಎಚ್ಚರಿಸಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಮತ್ತು ದಾದಿಯರಿಗೆ ಕಡಿಮೆ ಸಂಬಳದ ಬಗ್ಗೆಯೂ ದೇವೇಗೌಡರು ಸರ್ಕಾರದ ಗಮನ ಸೆಳೆದರು.

ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ರಾಷ್ಟ್ರೀಯ ರೋಗನಿರೋಧಕ ಕಾರ್ಯಕ್ರಮದಲ್ಲಿ ಹೆಚ್ ಪಿ‌ವಿ ಲಸಿಕೆಯನ್ನು ಸೇರಿಸಬೇಕೆಂದು ದೇವೇಗೌಡರು ಮನವಿ ಮಾಡಿದರು.

ಸೇವೆಯಲ್ಲಿ ಹಿಂದುಳಿದ ಪ್ರದೇಶಗಳಲ್ಲಿ ಆರೋಗ್ಯ ಸೇವೆಯನ್ನು ಸುಧಾರಿಸಲು, ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣ ವಿಶೇಷ ಕೇಂದ್ರಗಳನ್ನು ಸ್ಥಾಪಿಸುವ ಖಾಸಗಿ ಆಸ್ಪತ್ರೆಗಳಿಗೆ ಐದು ವರ್ಷಗಳ ತೆರಿಗೆ ವಿನಾಯಿತಿ ನೀಡುವಂತೆ ದೇವೇಗೌಡರು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದರು.

ಆಯುಷ್ಮಾನ್ ವ್ಯಾಪ್ತಿಗೆ ಹೃದಯಾಘಾತ, ಪಾರ್ಶ್ವವಾಯುಗೆ ಚಿಕಿತ್ಸೆ ತರಲು ಹೆಚ್.ಡಿ.ಡಿ ಒತ್ತಾಯ Read More

ಹೆಚ್ಚು ಪ್ರಮಾಣದಲ್ಲಿ‌ ಎಲೆಕ್ಟ್ರಿಕ್ ವಾಹನಗಳ ಅಳವಡಿಕೆ: ಹೆಚ್ ಡಿ ಕೆ

ನವದೆಹಲಿ: ಸರಕು ಸಾಗಣೆ ಕ್ಷೇತ್ರದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಹೆಚ್ಚು ಪ್ರಮಾಣದಲ್ಲಿ ಅಳವಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಸಚಿವ
ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ನವದೆಹಲಿಯಲ್ಲಿ ಗುರುವಾರ ಎಲೆಕ್ಟ್ರಿಕ್ ಟ್ರಕ್ ಉದ್ಯಮದ ಮುಖ್ಯಸ್ಥರ ಜತೆ ಸಂವಾದ ನಡೆಸಿದ ಕುಮಾರಸ್ವಾಮಿ, ಸರಕು ಸಾಗಣೆಯ ಕ್ಷೇತ್ರದಲ್ಲಿ ವಾಯು ಮಾಲಿನ್ಯ ಕಡಿಮೆ ಮಾಡಿ ಸಾಗಾಣಿಕೆಯಲ್ಲಿ ಕ್ಷಮತೆ ಸಾಧಿಸುವ ಉದ್ದೇಶದಿಂದ ಕೇಂದ್ರ ಎಲ್ಲಾ ರೀತಿಯ ಉತ್ತೇಜನ ನೀಡುತ್ತಿದೆ,ಇದಕ್ಕಾಗಿ ಅನೇಕ ಉಪಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ, ಭಾರತವು ಎಲೆಕ್ಟ್ರಿಕ್ ವಾಹನ ವಲಯದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ. 27,000 ಎಲೆಕ್ಟ್ರಿಕ್ ಬಸ್‌ಗಳ ನಿಯೋಜನೆಗೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಈಗಾಗಲೇ 10,500ಕ್ಕೂ ಹೆಚ್ಚು ಬಸ್ ಗಳು ಕಾರ್ಯನಿರ್ವಹಿಸುತ್ತಿವೆ. ಇದರಿಂದ ಉತ್ತೇಜನಗೊಂಡಿರುವ ಕೇಂದ್ರ ಸರ್ಕಾರವು ಇದೀಗ ಈಗ ತನ್ನ ಗಮನವನ್ನು ಸರಕು ಸಾಗಣೆ ಕ್ಷೇತ್ರದಲ್ಲಿ ಎಲೆಕ್ಟ್ರಿಕ್ ಟ್ರಕ್ ಗಳನ್ನು ರಸ್ತೆಗಳಿಗೆ ಇಳಿಸಲು ಉತ್ಸಾಹದಿಂದ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಟ್ರಕ್ ಉದ್ಯಮವು ಭಾರತದ ಪೂರೈಕೆ ಸರಪಳಿ ಮತ್ತು ಸಾಗಾಣಿಕೆಯ ಬೆನ್ನೆಲುಬಾಗಿದೆ, ಆದರೆ ಇದು ಇಂಧನ ಬಳಕೆ ಮತ್ತು ಇಂಗಾಲ ಹೊರಸೂಸುವಿಕೆಯ ಗಮನಾರ್ಹ ಪಾಲನ್ನು ಈ ಕ್ಷೇತ್ರವೇ ಹೊಂದಿದೆ ಎಂಬುದು ಕಳವಳಕಾರಿ ಸಂಗತಿ” ಎಂದು ಕುಮಾರಸ್ವಾಮಿ ಹೇಳಿದರು.

2070ರ ವೇಳೆಗೆ ಸಾರಿಗೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆಯನ್ನು ಶೂನ್ಯಕ್ಕೆ ಇಳಿಸುವ ಬದ್ಧತೆಯನ್ನು ಈ ಉಪಕ್ರಮ ಎತ್ತಿ ತೋರಿಸುತ್ತದೆ. ಹಸಿರು ದಿಕ್ಕಿನತ್ತ ಟ್ರಕ್ ಉದ್ಯಮವನ್ನು ಮುನ್ನಡೆಸುವ ನಿಟ್ಟಿನಲ್ಲಿ ಇದು ಪರಿಣಾಮಕಾರಿ ಕ್ರಮ ಎಂದು ಹೇಳಿದರು.

ಇಂಟೆಂಟ್ ಸ್ಥಾಪಕಿ ಮಹುವಾ ಆಚಾರ್ಯ,ಜಮ್ಶ್ಯದ್ ಗೋದ್ರೇಜ್, ಮನೋಜ್ ಕೊಹ್ಲಿ, ಅನಿತಾ ಜಾರ್ಜ್, ಸಂಜಯ್ ಕಪೂರ್, ರವಿ ಪಂಡಿತ್, ಪ್ರಶಾಂತ್ ಶ್ರೀವಾಸ್ತವ ವಿನೀತ್ ಅಗರ್ವಾಲ್, ಚಾಂದನಿ ಧೀರ್ ಮತ್ತಿತರರು ಹಾಜರಿದ್ದರು.

ಹೆಚ್ಚು ಪ್ರಮಾಣದಲ್ಲಿ‌ ಎಲೆಕ್ಟ್ರಿಕ್ ವಾಹನಗಳ ಅಳವಡಿಕೆ: ಹೆಚ್ ಡಿ ಕೆ Read More