ದಸರಾ ದೀಪಾಲಂಕಾರ ಆಕರ್ಷಕವಾಗಿರಲಿ: ಕೆ.ಎಂ. ಮುನಿಗೋಪಾಲ್ ರಾಜು
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿದ್ಯುತ್ ದೀಪಾಲಂಕಾರವನ್ನು ಈ ಬಾರಿ ಹೊಸ ವಿನ್ಯಾಸಗಳ ಜತೆಗೆ ಸುರಕ್ಷತೆಗೂ ಆದ್ಯತೆ ನೀಡಬೇಕೆಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು ಅವರು ಸಲಹೆ ನೀಡಿದರು.
ಈ ಮೂಲಕ ಆಕರ್ಷಣೀಯವಾಗಿಸಲು ಆಸಕ್ತಿವಹಿಸಿ ಕೆಲಸ ಮಾಡಿ ಎಂದು ಅಧಿಕಾರಿಗಳು ಹಾಗೂ ದೀಪಾಲಂಕಾರ ಮಾಡುವ ವಿದ್ಯುತ್ ಗುತ್ತಿಗೆದಾರರಿಗೆ ಮುನಿಗೋಪಾಲ್ ರಾಜು ಸೂಚಿಸಿದರು.
ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿರುವ ನಿಗಮದ ಪ್ರಧಾನ ಕಚೇರಿಯಲ್ಲಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,ದಸರಾ ಮಹೋತ್ಸವದ ಸಂದರ್ಭದಲ್ಲಿ ಮಾಡಲಾಗುವ ವಿದ್ಯುತ್ ದೀಪಾಲಂಕಾರ ಎಲ್ಲರ ಗಮನ ಸೆಳೆಯುವುದರಿಂದ ಈ ಬಾರಿಯ ವಿದ್ಯುತ್ ದೀಪಾಲಂಕಾರವನ್ನು ಕಳೆದ ವರ್ಷಕ್ಕಿಂತ ಹೆಚ್ಚು ಆಕರ್ಷಕವಾಗಿ ಮಾಡಲು ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ನಿಗಮದ ವತಿಯಿಂದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ದಸರಾ ದೀಪಾಲಂಕಾರ ವಿಶ್ವಮಟ್ಟದಲ್ಲಿ ಆಕರ್ಷಣೀಯಗೊಳಿಸಲು ಸೆಸ್ಕ್ ಜತೆಗೆ ವಿದ್ಯುತ್ ಗುತ್ತಿಗೆದಾರರು ಪ್ರಮುಖ ಕಾರಣರಾಗಿದ್ದಾರೆ, ಈ ಬಾರಿ ಕೂಡಾ ದಸರಾ ಮುಗಿದ ಬಳಿಕವೂ ಎಲ್ಲರನ್ನೂ ಆಕರ್ಷಿಸುವ ದೀಪಾಲಂಕಾರವನ್ನು ಹೊಸತನದ ಜತೆಗೆ ಹೆಚ್ಚು ಆಕರ್ಷಕವಾಗಿ ಮಾಡುವ ಬಗ್ಗೆ ಈಗಿನಿಂದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು.
ದಸರಾ ದೀಪಾಲಂಕಾರದ ಸೌಂದರ್ಯ ಕಣ್ತುಂಬಿಕೊಳ್ಳಲು ಸಾಕಷ್ಟು ಜನರು ಆಗಮಿಸುತ್ತಾರೆ. ಆದ್ದರಿಂದ ದೀಪಾಲಂಕಾರದ ಅಂದವನ್ನು ಹೆಚ್ಚಿಸುವುದರ ಜತೆಗೆ ಸುರಕ್ಷತೆಗೂ ಆದ್ಯತೆ ನೀಡುವುದು ಮುಖ್ಯ, ದಸರಾ ವೇಳೆಯಲ್ಲಿ ಮಳೆಯಾಗುವ ಸಂಭವವಿದೆ ಆದ್ದರಿಂದ ಯಾವುದೇ ತೊಂದರೆ ಆಗದಂತೆ ಎಚ್ಚರವಹಿಸಿ ಎಂದು ವಿದ್ಯುತ್ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ದಸರಾ ಜಂಬೂಸವಾರಿ ಮೆರವಣಿಗೆ ಸಾಗುವ ರಾಜಮಾರ್ಗದಲ್ಲಿ, ವೃತ್ತಗಳಲ್ಲಿ ವಿನೂತನ ರೀತಿಯಲ್ಲಿ ದೀಪಾಲಂಕಾರ ಮಾಡಬೇಕೆಂದು ರೂಪುರೇಷೆಗಳು, ಡಿಸೈನ್ಗಳನ್ನು ಈಗಾಗಲೇ ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದರು.
ದಸರಾ ಮಹೋತ್ಸವದ ಆರಂಭದಿಂದಲೇ ವಿದ್ಯುತ್ ದೀಪಾಲಂಕಾರಕ್ಕೂ ಚಾಲನೆ ದೊರೆಯಲಿದೆ. ಹೀಗಾಗಿ ದೀಪಾಲಂಕಾರ ಮಾಡುವ ಜವಾಬ್ದಾರಿ ಹೊತ್ತವರು ಕೊನೆಯ ಹಂತದವರೆಗೂ ಕೆಲಸ ಮಾಡದೆ, ಪೂರ್ವಸಿದ್ಧತೆ ಮಾಡಿಕೊಳ್ಳಬೇಕು,
ಯುವ ಸಂಭ್ರಮ ಹಾಗೂ ಯುವ ದಸರಾ ಕಾರ್ಯಕ್ರಮಗಳು ನಡೆಯುವ ಸ್ಥಳಗಳ ಸುತ್ತಲಿನ ರಸ್ತೆಗಳು ಹಾಗೂ ವೃತ್ತಗಳಲ್ಲೂ ದೀಪಾಲಂಕಾರ ಅತ್ಯಾಕರ್ಶಕ ವಾಗಿರಬೇಕು ಎಂದು ಮುನಿಗೋಪಾಲ್ ರಾಜು ಸಲಹೆ ನೀಡಿದರು.
ಕಳೆದ ವರ್ಷದ ದಸರಾ ಸಂದರ್ಭದಲ್ಲಿ ನಡೆದ ಡ್ರೋನ್ ಪ್ರದರ್ಶನ ಎಲ್ಲರ ಆಕರ್ಷಣೆ ಮತ್ತು ಮೆಚ್ಚುಗೆ ಪಡೆದಿತ್ತು. ಹೀಗಾಗಿ ಡ್ರೋನ್ ಶೋ ಕುರಿತಂತೆ ಜನರ ನಿರೀಕ್ಷೆಗಳು ಹೆಚ್ಚಾಗಿರಲಿದೆ. ಆದ್ದರಿಂದ ಈ ಬಾರಿಯ ಡ್ರೋನ್ ಶೋ ಕಾರ್ಯಕ್ರಮದ ಮೆರಗು ಹೆಚ್ಚಿಸುವ ನಿಟ್ಟಿನಲ್ಲಿ ಕಳೆದ ಬಾರಿಗಿಂತ ಹೆಚ್ಚಿನ ಡ್ರೋನ್ ಬಳಸಿ ಹೆಚ್ಚು ಆಕರ್ಷಣೀಯವಾಗಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಕೆ.ಎಂ. ಮುನಿಗೋಪಾಲ್ ರಾಜು ಅವರು ಸಭೆಯಲ್ಲಿ ತಿಳಿಸಿದರು.
ಸಭೆಯಲ್ಲಿ ನಿಗಮದ ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್, ಮೈಸೂರು ವಲಯ ಕಚೇರಿಯ ಮುಖ್ಯ ಇಂಜಿನಿಯರ್ ಮೃತ್ಯುಂಜಯ, ಮೈಸೂರು ವೃತ್ತದ ಅಧೀಕ್ಷಕ ಇಂಜಿನಿಯರ್ ಸುನೀಲ್, ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ರಮೇಶ್ ಸೇರಿದಂತೆ ಸೆಸ್ಕ್ನ ಪ್ರಮುಖ ಅಧಿಕಾರಿಗಳು ಹಾಗೂ ವಿದ್ಯುತ್ ಗುತ್ತಿಗೆದಾರರು ಹಾಜರಿದ್ದರು.
ದಸರಾ ದೀಪಾಲಂಕಾರ ಆಕರ್ಷಕವಾಗಿರಲಿ: ಕೆ.ಎಂ. ಮುನಿಗೋಪಾಲ್ ರಾಜು Read More