ಕೆರೆ,ಕಟ್ಟೆಗಳಿಗೆ ಪೂರ್ಣ ಪ್ರಮಾಣದಲ್ಲಿ ನೀರು ತುಂಬಿಸಿ- ಜಿಟಿಡಿ ತಾಕೀತು

ಮೈಸೂರು: ಮೈಸೂರು ತಾಲ್ಲೂಕು ವ್ಯಾಪ್ತಿಯಲ್ಲಿ ಕೆರೆ,ಕಟ್ಟೆಗಳಿಗೆ ಪೂರ್ಣ ಪ್ರಮಾಣದಲ್ಲಿ ನೀರು ತುಂಬಿಸಲು ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ಶಾಸಕ ಜಿ.ಟಿ.ದೇವೇಗೌಡ ತಾಕೀತು ಮಾಡಿದರು.

ಏತನೀರಾವರಿ ಯೋಜನೆ ಮೂಲಕ ತುಂಬಿಸಬೇಕಿರುವ ಎಲ್ಲಾ ಕೆರೆಗಳನ್ನೂ ಭರ್ತಿ ಮಾಡಬೇಕು ಎಂದು ಸೂಚಿಸಿದರು. ನಗರಪಾಲಿಕೆ ವಲಯ ಮೂರರ ಕಚೇರಿ ಸಭಾಂಗಣದಲ್ಲಿ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಶಾಸಕರು, ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಗೆ ಬರುವ ಎಲ್ಲಾ ಕೆರೆಗಳು,ಕಟ್ಟೆಗಳನ್ನು ತುಂಬಿಸಲು ಅನುದಾನ ಬಿಡುಗಡೆ ಮಾಡಿಸಲಾಗಿದೆ. ಸಕಾಲದಲ್ಲಿ ಕಾಮಗಾರಿಗಳನ್ನು ಮುಗಿಸಬೇಕು‌ ಎಂದು ಆದೇಶಿಸಿದರು.

ಉಳಿದ ಕೆರೆಗಳನ್ನು ತುಂಬಿಸಲು ಡಿಪಿಆರ್ ತಯಾರಿಸಿ ಸಲ್ಲಿಸಿ ಎಂದು ಹೇಳಿದ ಜಿಟಿಡಿ, ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಹರಿಸಬೇಕಾದರೆ ಕೆರೆಗಳನ್ನು ತುಂಬಿಸಬೇಕು.ಹಾಗಾಗಿ, ಯಾವುದೇ ಕೆರೆಗಳು ಪೂರ್ಣವಾಗಿ ತುಂಬಿಲ್ಲ ಎಂಬ ದೂರು ಬರಬಾರದು,ಪೈಪ್‌ಲೈನ್ ಕೊನೆಯ ತನಕವೂ ಇರಬೇಕು ಎಂದು ಸೂಚಿಸಿದರು.

ಸಣ್ಣ ನೀರಾವರಿ ಇಲಾಖೆ ಕಾರ್ಯಪಾಲಕ ಅಭಿಯಂತರ ಅಜರುದ್ದೀನ್ ಮಾತನಾಡಿ,ಗುಂಗ್ರಾಲ್ ಛತ್ರ,ಒಡೆಯರ ಕಟ್ಟೆ, ದೊಡ್ಡೇಗೌಡನಕಟ್ಟೆ, ಹೊನ್ನಯ್ಯನಕಟ್ಟೆ ಕೆರೆಗಳನ್ನು ತುಂಬಿಸಲು ೧೪ ಕೋಟಿ ರೂ.ಮಂಜೂರಾಗಿದೆ, ಶೀಘ್ರದಲ್ಲೇ ಕಾಮಗಾರಿ ಮುಗಿಯಲಿದೆ.ಒಡೆಯರ ಕೆರೆ ದೊಡ್ಡದು,ಏತನೀರಾವರಿ ಯೋಜನೆ ಮೂಲಕ ನೀರು ತುಂಬಿಸಬೇಕಿರುವುದರಿಂದ ಎರಡು-ಮೂರು ದಿನಗಳಲ್ಲಿ ಮೋಟಾರ್ ಅಳವಡಿಸಲಾಗುತ್ತದೆ. ನಂತರ, ಚಾಲನೆ ಕೊಡಬಹುದು ಎಂದು ಅಧಿಕಾರಿಗಳು ಹೇಳಿದರು.

ಲಿಂಗಾಂಬುದಿಪಾಳ್ಯ,ಅಯ್ಯಜಯ್ಯನಕೆರೆ, ಕೇರ್ಗಳ್ಳಿ ಕೆರೆಯನ್ನು ಶುಚಿಗೊಳಿಸಿ ನೀರು ತುಂಬಿಸಲು ಕೆಲವು ಕಾಮಗಾರಿ ನಡೆಸಬೇಕಿದೆ.ಕೆರೆಗಳಿಗೆ ನೇರವಾಗಿ ಪೈಪ್‌ಲೈನ್ ತೆಗೆದುಕೊಂಡು ಹೋಗಬೇಕಿರುವುದರಿಂದ ಪ್ರತ್ಯೇಕವಾದ ಡಿಪಿಆರ್ ತಯಾರಿಸಲಾಗುತ್ತಿದೆ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿ.ಟಿ ದೇವೇಗೌಡರು, ಕೆರೆಗಳನ್ನು ಸಂರಕ್ಷಣೆಮಾಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು,ನೀವು ಪ್ರಸ್ತಾವನೆ ಸಲ್ಲಿಸುವ ಯೋಜನೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು,ಸಣ್ಣನೀರಾವರಿ ಸಚಿವರೊಂದಿಗೆ ಸಮಾಲೋಚನೆ ನಡೆಸಿ ಒಪ್ಪಿಗೆ ಕೊಡಿಸುತ್ತೇನೆ ಎಂದು ಭರವಸೆ ನೀಡಿದರು.

ಗುತ್ತಿಗೆದಾರರಿಗೆ ಏನಾದರೂ ಬಾಕಿ ಅನುದಾನ ಪಾವತಿಸುವುದು ಇದ್ದರೆ ಕ್ಲಿಯರ್ ಮಾಡಿ. ಶೀಘ್ರದಲ್ಲೇ ಚಾಲನೆ ಕೊಡೋಣ ಎಂದು ಹೇಳಿದರು.

ದೇವಿಕೆರೆಯಲ್ಲಿ ತುಂಬಿರುವ ಹೂಳುತೆಗೆಯಲಾಗಿತ್ತು. ವಿದ್ಯುತ್ ದೀಪ, ರಸ್ತೆ ಮೊದಲಾದ ಕಾಮಗಾರಿಗಳನ್ನು ಮುಂದುವರಿಸಲು ಅರಮನೆ ವತಿಯಿಂದ ಅನುಮತಿ ಪಡೆಯಬೇಕಿದೆ ಎಂದು ತಿಳಿಸಿದರು.

ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆ ಅಧೀಕ್ಷಕ ಅಭಿಯಂತರ ಪ್ರಶಾಂತ್, ಕಾರ್ಯಪಾಲಕ ಅಭಿಯಂತರ ಅಜರುದ್ದೀನ್, ಈಶ್ವರ್,ವೇಣುಗೋಪಾಲ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ಕೆರೆ,ಕಟ್ಟೆಗಳಿಗೆ ಪೂರ್ಣ ಪ್ರಮಾಣದಲ್ಲಿ ನೀರು ತುಂಬಿಸಿ- ಜಿಟಿಡಿ ತಾಕೀತು Read More

ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆ ಉದ್ಘಾಟಿಸಿದ ಸಿಎಂ

ಬೆಂಗಳೂರು: ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು ನಾನೇ ಶಂಕುಸ್ಥಾಪನೆ ಮಾಡಿ ನನ್ನಿಂದಲೇ ಉದ್ಘಾಟನೆಯಾಗಿದೆ, ನುಡಿದಂತೆ ನಡೆದಿದ್ದಕ್ಕೆ ಇದು ಸಾಕ್ಷಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿ ಸಿಎಂ ಮಾತನಾಡಿದರು.

ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಮತ್ತು ಹಿಂದಿನ ಸರ್ಕಾರಗಳು ಅಗತ್ಯ ಹಣ ಬಿಡುಗಡೆ ಮಾಡದೆ ನಿರಾಸಕ್ತಿ ತೋರಿದ್ದರಿಂದ ಯೋಜನೆ ನಿಧಾನವಾಯಿತು. ಮತ್ತೆ ನಾವು ಅಧಿಕಾರಕ್ಕೆ ಬಂದು ಯೋಜನೆ ಲೋಕಾರ್ಪಣೆಗೊಳಿಸಿ 110 ಹಳ್ಳಿಗಳಿಗೆ ನೀರನ್ನು ಒದಗಿಸಿದ್ದೇವೆ ಎಂದು ಸಿಎಂ ಹೇಳಿದರು.

ಆರನೇ ಹಂತದ ಯೋಜನೆಯನ್ನೂ ಕೈಗೆತ್ತಿಕೊಳ್ಳಲು ಈಗಾಗಲೇ ಸೂಚನೆ ನೀಡಿದ್ದೇನೆ. ನಾವು ನುಡಿದಂತೆ ನಡೆಯುತ್ತೇವೆ. ನಾವು ಸುಳ್ಳು ಹೇಳಿ ಅಧಿಕಾರಕ್ಕೆ ಬರುವುದಿಲ್ಲ. ಅಧಿಕಾರಕ್ಕೆ ಬಂದು ಸುಳ್ಳು ಹೇಳದೆ ನುಡಿದಂತೆ ನಡೆದು ಜನರ ಕೆಲಸ ಮಾಡಿ ತೋರಿಸಿದ್ದೇವೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದ ತೆರಿಗೆಯಲ್ಲಿ ನಮಗೆ ಅನ್ಯಾಯ ಆಗಿದೆ ಎಂದು ದೂರಿದ ಸಿಎಂ,
ಮೇಕೆದಾಟು ಯೋಜನೆಗೆ ಅನುಮತಿ ಕೊಡಿ ಎಂದು ಕೋರುತ್ತಲೇ ಇದ್ದೇವೆ. ಮಹದಾಯಿಗೂ ಅನುಮತಿ ಕೇಳಿದ್ದೇವೆ. ಕೇಂದ್ರ ಸರ್ಕಾರ ಅನುಮತಿ ಕೊಡದೆ ಅನ್ಯಾಯ ಮಾಡುತ್ತಿದೆ ಎಂದು ದೂರಿದರು.

ಹೆಚ್ ಡಿ ಕುಮಾರಸ್ವಾಮಿ ಯಾಕೆ ಅನುಮತಿ ಕೊಡಿಸುತ್ತಿಲ್ಲ ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿಯ ಸಂಸದರು ಏಕೆ ರಾಜ್ಯದ ಪರವಾಗಿ ಧ್ವನಿ ಎತ್ತುತ್ತಿಲ್ಲ, ಕರ್ನಾಟಕಕ್ಕೆ ಏಕೆ ಮಲತಾಯಿ ಧೋರಣೆ ಎಂದು ಕೇಂದ್ರ ಸರ್ಕಾರವನ್ನು ಯಾಕೆ ಪ್ರಶ್ನಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ. ಈ ವೇಗಕ್ಕೆ ತಕ್ಕಂತೆ ಮೂಲಭೂತ ಸವಲತ್ತು ಒದಗಿಸುವ ಸವಾಲನ್ನು ನಮ್ಮ ಸರ್ಕಾರ ಸ್ವೀಕರಿಸಿ ಯಶಸ್ವಿಯಾಗಿ ನಿಭಾಯಿಸುತ್ತೇವೆ ಎಂದು ಭರವಸೆ ನೀಡಿದರು.

ಕಾವೇರಿ ಕುಡಿಯುವ ನೀರಿನ ಆರನೇ ಹಂತದ ಯೋಜನೆಯಿಂದ 500 ಎಂಎಲ್ ಡಿ ಕುಡಿಯುವ ನೀರು ಬೆಂಗಳೂರಿಗರಿಗೆ ಸಿಗತ್ತದೆ, ಇದನ್ನೂ ನಾವು ಘೋಷಿಸಿದ್ದೇವೆ ನಾವು ಇದನ್ನೂ ಮಾಡಿ ತೋರಿಸುತ್ತೇವೆ ಎಂದು ಸಿದ್ದರಾಮಯ್ಯ ಆಶ್ವಾಸನೆ ನೀಡಿದರು.

ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕರಾದ ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಸಚಿವ ಕೆ.ಜೆ.ಜಾರ್ಜ್, ಮಾಜಿ ಸಚಿವ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜು, ಶಾಸಕರಾದ ಎಸ್.ಆರ್. ವಿಶ್ವನಾಥ್ , ವಿಧಾನಸಭೆ, ವಿಧಾನಪರಿಷತ್ ಶಾಸಕರುಗಳಾದ ಟಿ.ಎಂ.ನಾಗರಾಜು, ರವಿ, ದಿನೇಶ್ ಗೂಳಿಗೌಡ, ಸುದಾಮ ದಾಸ್, ಮಾದೇಗೌಡರು, ನಾಗರಾಜ್ ಯಾದವ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ತುಂಬಿದ ಕೊಡಗಳ ನೀರನ್ನು ಮುಖ್ಯಮಂತ್ರಿಗಳು ಕಾವೇರಿ ಮಾತೆಗೆ ಸಮರ್ಪಿಸಿದರು.

ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಯೋಜನೆ ಇದಾಗಿದೆ.

ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆ ಉದ್ಘಾಟಿಸಿದ ಸಿಎಂ Read More