ವಕ್ಫ್‌ ಮಂಡಳಿಯಿಂದ ಭೂ ಕಬಳಿಕೆ: ಭೀತಿಗೊಂಡ ಜನ- ಆರ್‌.ಅಶೋಕ್

Spread the love

ಬೆಂಗಳೂರು: ವಕ್ಫ್‌ ಮಂಡಳಿ ಬಡವರ ಭೂಮಿ ಕಬಳಿಸುತ್ತಿರುವುದರಿಂದ ಜನ ಭೀತಿಗೊಳಗಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ನೋಟಿಸ್‌ ವಾಪಸ್‌ ಪಡೆಯಲು ಸೂಚಿಸಲಾಗಿದೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಆದರೆ ಮುಖ್ಯ ಕಾರ್ಯದರ್ಶಿ ಭೂಮಿ ವಶಪಡಿಸಿಕೊಳ್ಳಲು ಲಿಖಿತ ಸೂಚನೆ ನೀಡಿದ್ದಾರೆ. ಈ ಸತ್ಯ ಮರೆಮಾಚಲು ಮುಖ್ಯಮಂತ್ರಿ ಸುಳ್ಳು ಹೇಳಿದ್ದಾರೆ ಎಂದು ದೂರಿದರು.

ಟಿಪ್ಪು ಸುಲ್ತಾನ್‌ ಖಡ್ಗ ಬಳಸಿ ಅಮಾಯಕರನ್ನು ಮತಾಂತರ ಮಾಡಿದ್ದ. ಅದೇ ರೀತಿ ಈಗ ಕಾಂಗ್ರೆಸ್‌ ವಕ್ಫ್‌ ಬಳಸಿಕೊಂಡು ಜನರ ಭೂಮಿ ಕಬಳಿಸುತ್ತಿದೆ. ಸರ್‌.ಎಂ.ವಿಶ್ವೇಶ್ವರಯ್ಯನವರು ಓದಿದ ಶಾಲೆಯನ್ನೂ ವಕ್ಫ್‌ ಆಸ್ತಿ ಎಂದು ಉಲ್ಲೇಖಿಸಲಾಗಿದೆ ಎಂದು ವಾಗ್ದಾಳಿ ನಡೆಸಿದರು.

ಬಸವರಾಜ ಬೊಮ್ಮಾಯಿ ಅವರು ಕಬಳಿಕೆ ಮಾಡಿದ ಭೂಮಿ ವಾಪಸ್‌ ಪಡೆಯಿರಿ ಎಂದು ಹೇಳಿದ್ದಾರೆಯೇ ಹೊರತು, ರೈತರ ಜಮೀನು ಪಡೆಯಲು ಹೇಳಿಲ್ಲ. ಆದರೆ ಮಂಡಳಿಯ ಸದಸ್ಯರು ವಿಧಾನಸೌಧ ನಮ್ಮದು ಎಂದು ಕೂಡ ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರವಿದ್ದಾಗ ಕೋಲಾರದಲ್ಲಿ ವಾಲ್ಮೀಕಿ ಭವನ ನಿರ್ಮಿಸಲಾಗಿತ್ತು. ಈಗ ಅದರ ಮೇಲೆ ಮಸೀದಿ ಕಟ್ಟಿಸಿ ಕಾಂಪೌಂಡ್‌ ನಿರ್ಮಿಸಲಾಗಿದೆ. ಇಂತಹ ಅಕ್ರಮದ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದೆ ಎಂದು ತಿಳಿಸಿದರು.

ಕಾಂಗ್ರೆಸ್‌ ಸರ್ಕಾರ ಎಲ್ಲಕ್ಕೂ ಎಸ್‌ಐಟಿ ರಚಿಸುತ್ತಿದೆ. ಸಿದ್ದರಾಮಯ್ಯನವರ ಹಗರಣದ ವಿರುದ್ಧ ಕೆಂಪಣ್ಣ ಆಯೋಗ ರಚಿಸಿದ್ದು, ಅದರ ವರದಿ ಬಂದೇ ಇಲ್ಲ. ಕೋವಿಡ್‌ ಸಮಯದಲ್ಲಿ ಬಿ.ಎಸ್‌.ಯಡಿಯೂರಪ್ಪನವರು ಅಧಿಕಾರಿಗಳು ಹೇಳಿದಂತೆ ಕಿಟ್ ಖರೀದಿ ಮಾಡಲು ಸೂಚಿಸಿದ್ದರು, ಇದರಲ್ಲಿ ಯಾರದ್ದೂ ತಪ್ಪಿಲ್ಲ, ಇದು ರಾಜಕೀಯ ಪ್ರೇರಿತ ಸುಳ್ಳು ಪ್ರಕರಣ. ಖರೀದಿ ಮಾಡುವ ಅಧಿಕಾರ ಮುಖ್ಯಮಂತ್ರಿಗಿಲ್ಲ. ಯಾವ ಕಂಪನಿಯಿಂದ, ಎಲ್ಲಿಂದ ಖರೀದಿ ಮಾಡಬೇಕೆಂದು ಅಧಿಕಾರಿಗಳು ತೀರ್ಮಾನಿಸಿರುತ್ತಾರೆ. ಈ ಪ್ರಕರಣ ಸರ್ಕಾರಕ್ಕೆ ತಿರುಗುಬಾಣವಾಗಲಿದೆ ಎಂದು ಅಶೋಕ್ ಎಚ್ಚರಿಸಿದರು.