ನವದೆಹಲಿ: ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿದರು.
ಈ ವೇಳೆ ಮೈಸೂರು–ಕೊಡಗು ಭಾಗಕ್ಕೆ ಸಂಬಂಧಿಸಿದ ಎರಡು ಮಹತ್ವದ ವಿಷಯಗಳ ಕುರಿತು ಮನವಿ ಸಲ್ಲಿಸಿದರು.
ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಆನೆ–ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸುವುದು ಮತ್ತು ಮೈಸೂರಿನ ತಿಪ್ಪಯ್ಯನ ಕೆರೆಯಲ್ಲಿ ನಗರ್ ವನ್ ಯೋಜನೆ ಜಾರಿಗೊಳಿಸುವ ಕುರಿತು ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಯದುವೀರ್ ಒಡೆಯರ್ ಅವರು, ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಆನೆಗಳು ಕೃಷಿ ಭೂಮಿಗಳು ಮತ್ತು ಜನವಸತಿ ಪ್ರದೇಶಗಳಿಗೆ ನುಗ್ಗುತ್ತಿರುವ ಘಟನೆಗಳು ಹೆಚ್ಚುತ್ತಲೇ ಇದೆ, ಇದು ಜಿಲ್ಲೆಯ ಜನರ ಪ್ರಮುಖ ಸಮಸ್ಯೆಯಾಗಿ ಪರಿಣಮಿಸಿದೆ ಎಂದು ಸಚಿವರ ಗಮನಕ್ಕೆ ತಂದರು.
ಆನೆಗಳ ದಾಳಿಯಿಂದ ಮಾನವ ಜೀವಹಾನಿ, ಬೆಳೆ ನಷ್ಟ, ಆಸ್ತಿ ಹಾನಿ ಮತ್ತು ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿದೆ, ವಿಶೇಷವಾಗಿ ಅರಣ್ಯ ಅಂಚಿನ ಗ್ರಾಮಗಳಲ್ಲಿ ವಾಸಿಸುವ ರೈತರು, ತೋಟಗಾರರು ಮತ್ತು ಕಾರ್ಮಿಕರು ಈ ಸಮಸ್ಯೆಯಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ವಿವರಿಸಿದರು.
ಈ ಹಿನ್ನೆಲೆಯಲ್ಲಿ ಆನೆ–ಮಾನವ ಸಂಘರ್ಷವನ್ನು ಕಡಿಮೆಗೊಳಿಸಲು ಸಮಗ್ರ ಹಾಗೂ ದೀರ್ಘಕಾಲೀನ ಕಾರ್ಯತಂತ್ರವನ್ನು ರೂಪಿಸಲು ಕೇಂದ್ರ ಸರ್ಕಾರದ ನೆರವು ಅಗತ್ಯವಿದೆ ಎಂದು ಅವರು ಮನವಿ ಮಾಡಿದರು.
ಆನೆ ತಡೆಗೋಡೆಗಳ ಬಲವರ್ಧನೆ, ಸೌರ ಬೇಲಿ ವ್ಯವಸ್ಥೆ, ಆನೆಗಳ ಚಲನವಲನದ ವೈಜ್ಞಾನಿಕ ಮೇಲ್ವಿಚಾರಣೆ, ಮುನ್ನೆಚ್ಚರಿಕೆ ವ್ಯವಸ್ಥೆ, ಅರಣ್ಯ ವಾಸಸ್ಥಳಗಳ ಸುಧಾರಣೆ, ತ್ವರಿತ ಪ್ರತಿಕ್ರಿಯಾ ತಂಡಗಳ ರಚನೆ ಹಾಗೂ ಪೀಡಿತ ಕುಟುಂಬಗಳಿಗೆ ಮತ್ತು ರೈತರಿಗೆ ಸೂಕ್ತ ಪರಿಹಾರ ನೀಡುವ ವ್ಯವಸ್ಥೆಯನ್ನು ಬಲಪಡಿಸುವಂತೆ ಯದುವೀರ್ ಕೋರಿದರು.
ಸಂಸದರು ಇದೇ ಸಂದರ್ಭದಲ್ಲಿ ಮೈಸೂರಿನ ಹೊರವರ್ತುಲ ರಸ್ತೆಯ ಸಮೀಪ, ಸರ್ದಾರ್ ವಲ್ಲಭಭಾಯಿ ಪಟೇಲ್ ನಗರದ ಬಳಿ ಇರುವ ತಿಪ್ಪಯ್ಯನ ಕೆರೆಯನ್ನು ನಗರ ವನ ಯೋಜನೆಯಡಿ ಅಭಿವೃದ್ಧಿಪಡಿಸುವಂತೆ ಪ್ರತ್ಯೇಕ ಮನವಿಯನ್ನೂ ಸಲ್ಲಿಸಿದರು.
ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಮಹತ್ವಾಕಾಂಕ್ಷಿ ಯೋಜನೆಯಾದ ನಗರ ವನ ಯೋಜನೆ ನಗರ ಪ್ರದೇಶಗಳಲ್ಲಿ ಹಸಿರು ವನಗಳನ್ನು ನಿರ್ಮಿಸಿ ಪರಿಸರ ಸಮತೋಲನ ಕಾಪಾಡುವುದು, ಜೀವವೈವಿಧ್ಯವನ್ನು ವೃದ್ಧಿಸುವುದು ಹಾಗೂ ನಾಗರಿಕರಲ್ಲಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶ ಹೊಂದಿದೆ ಎಂದು ಅವರು ತಿಳಿಸಿದರು.
ಈ ಎಲ್ಲಾ ಅಂಶಗಳನ್ನು ಪರಿಗಣಿಸಿದರೆ ತಿಪ್ಪಯ್ಯನ ಕೆರೆ ನಗರ ವನ ಯೋಜನೆ ಜಾರಿಗೆ ಅತ್ಯಂತ ಸೂಕ್ತ ಸ್ಥಳವಾಗಿದ್ದು, ಈ ಯೋಜನೆಗೆ ಅಗತ್ಯ ತಾಂತ್ರಿಕ ಹಾಗೂ ಆರ್ಥಿಕ ನೆರವು ನೀಡುವಂತೆ ಕೋರಿದರು.
ಸಭೆಯ ನಂತರ ಮಾತನಾಡಿದ ಯದುವೀರ್ ಒಡೆಯರ್ ಅವರು, ಕೊಡಗಿನ ಆನೆ–ಮಾನವ ಸಂಘರ್ಷ ಮತ್ತು ಮೈಸೂರಿನ ನಗರ ಹಸಿರು ಮೂಲಸೌಕರ್ಯ ಅಭಿವೃದ್ಧಿ ಎರಡೂ ವಿಷಯಗಳು ತಕ್ಷಣದ ಗಮನಕ್ಕೆ ಅರ್ಹವಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಹೇಳಿದರು.
ಜನರ ಸುರಕ್ಷತೆ, ಪರಿಸರ ಸಂರಕ್ಷಣೆ ಹಾಗೂ ಸುಸ್ಥಿರ ಅಭಿವೃದ್ಧಿಯನ್ನು ಸಮನ್ವಯಗೊಳಿಸುವ ನಿಟ್ಟಿನಲ್ಲಿ ತಾವು ನಿರಂತರವಾಗಿ ಪ್ರಯತ್ನಿಸುತ್ತಿರುವುದಾಗಿ ಅವರು ತಿಳಿಸಿದರು.
ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರು ಸಂಸದರ ಮನವಿಗಳನ್ನು ಸಕಾರಾತ್ಮಕವಾಗಿ ಪರಿಗಣಿಸುವುದಾಗಿ ಹಾಗೂ ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
