ಮೈಸೂರು: ಯುವಜನತೆ ಸೇರಿದಂತೆ ಸಾರ್ವಜನಿಕರು ತಮ್ಮ ದೈನಂದಿನ ಜೀವನದಲ್ಲಿ ಸೈಕ್ಲಿಂಗ್ ಅಳವಡಿಸಿ ಕೊಳ್ಳುವಂತೆ ಮೈಸೂರು ಅರಮನೆ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಚಂದ್ರಶೇಖರ್ ಅವರು ಕರೆ ನೀಡಿದರು.
ಬೈಸಿಕಲ್ ದಿನದ ಸೈಕಲ್ ರ್ಯಾಲಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ 50ಕ್ಕೂ ಹೆಚ್ಚು ಸೈಕ್ಲಿಸ್ಟ್ಗಳು ಭಾಗವಹಿಸಿ ಆರೋಗ್ಯಕರ ಜೀವನ, ರಸ್ತೆ ಸುರಕ್ಷತೆ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಿದರು.
ಇದಕ್ಕೂ ಮುನ್ನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್ ಅವರು ಸೈಕಲ್ ರ್ಯಾಲಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಉಪ ಆಯುಕ್ತ ರಮೇಶ್ ನರಸಯ್ಯ ಹಾಗೂ ಬಾಲ್ಯ ಫೌಂಡೇಶನ್ ಅಧ್ಯಕ್ಷ ಅನಿಲ್ ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಆರಂಭದಲ್ಲಿ ಮೈ ಭಾರತ್ ಮೈಸೂರು ಜಿಲ್ಲಾ ಯುವ ಅಧಿಕಾರಿ ಅಖಿಲ್ ಅವರು ಸ್ವಾಗತ ಭಾಷಣ ಮಾಡಿ, ವಿಶ್ವ ಬೈಸಿಕಲ್ ದಿನದ ಮಹತ್ವ ಹಾಗೂ ಆರೋಗ್ಯಕರ ಮತ್ತು ಪರಿಸರ ಸ್ನೇಹಿ ಜೀವನಶೈಲಿಯನ್ನು ಬೆಳೆಸುವಲ್ಲಿ ಸೈಕ್ಲಿಂಗ್ ಪಾತ್ರವನ್ನು ವಿವರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿ. ಮಂಜುನಾಥ್ ಅವರು ದೈನಂದಿನ ಜೀವನದಲ್ಲಿ ದೈಹಿಕ ಚಟುವಟಿಕೆಗಳ ಅಗತ್ಯತೆಯನ್ನು ಒತ್ತಿ ಹೇಳಿದರು.
ರಮೇಶ್ ನರಸಯ್ಯ ಅವರು ಪರಿಸರ ಸಂರಕ್ಷಣೆಯಲ್ಲಿ ಸೈಕ್ಲಿಂಗ್ನ ಮಹತ್ವವನ್ನು ವಿವರಿಸಿದರು.
ಅನಿಲ್ ಅವರು ಯುವಜನರಲ್ಲಿ ಆರೋಗ್ಯ ಹಾಗೂ ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮವನ್ನು ಶ್ಲಾಘಿಸಿದರು.
ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಎಸಿಪಿ ಚಂದ್ರಶೇಖರ್ ಅವರು ಸೈಕ್ಲಿಂಗ್ ಮೂಲಕ ಆರೋಗ್ಯ, ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಉತ್ತೇಜಿಸುವಲ್ಲಿ ಸಂಘಟಕರ ಪ್ರಯತ್ನವನ್ನು ಶ್ಲಾಘಿಸಿದರು. ಇಂತಹ ಕಾರ್ಯಕ್ರಮಗಳು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ನೆರವಾಗುತ್ತವೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಎಲ್ಲಾ ಅತಿಥಿಗಳು, ಭಾಗವಹಿಸಿದ ಸೈಕ್ಲಿಸ್ಟ್ಗಳು, ಸ್ವಯಂಸೇವಕರು ಹಾಗೂ ಸಹಯೋಗಿ ಸಂಸ್ಥೆಗಳಿಗೆ ಸಂಘಟಕರು ಕೃತಜ್ಞತೆ ಸಲ್ಲಿಸಿದರು.
